ADVERTISEMENT

ತೈಲ ತೆರಿಗೆ ಹೆಚ್ಚಳ: ಜೂನ್‌ 18ರಂದು ಎಸ್‌ಯುಸಿಐ ಹೋರಾಟ

​ಪ್ರಜಾವಾಣಿ ವಾರ್ತೆ
Published 16 ಜೂನ್ 2024, 15:33 IST
Last Updated 16 ಜೂನ್ 2024, 15:33 IST
   

ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ಹೆಚ್ಚಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆಯನ್ನು ಖಂಡಿಸಿ ಇದೇ 18ರಂದು ರಾಜ್ಯದಾದ್ಯಂತ ಹೋರಾಟ ನಡೆಸಲು ಎಸ್‌ಯುಸಿಐ (ಕಮ್ಯುನಿಸ್ಟ್) ನಿರ್ಧರಿಸಿದೆ.

‘ಬೆಲೆ ಏರಿಕೆಯ ಕುರಿತು ಮಾತನಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದ ಈ ಕ್ರಮವು ಜನರಿಗೆ ಮಾಡಿದ ವಂಚನೆ. ಬೆಲೆ ಏರಿಕೆಯ ಹೊಡೆತವನ್ನು ತಕ್ಷಣವೇ ವಾಪಸ್ ಪಡೆಯಬೇಕು’ ಎಂದೂ ಆಗ್ರಹಿಸಿದೆ.

‘ಪೆಟ್ರೋಲ್‌, ಡೀಸೆಲ್‌ ಮಾರಾಟ ತೆರಿಗೆ ಹೆಚ್ಚಳದಿಂದ ರಾಜ್ಯ ಖಜಾನೆಗೆ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಸುಮಾರು ₹ 3 ಸಾವಿರ ಕೋಟಿ ಹೆಚ್ಚುವರಿ ತೆರಿಗೆ ವಸೂಲಿ ಆಗಲಿದೆ. ಇದರಿಂದ ಸಾರಿಗೆ, ಸರಕು ಸಾಗಣೆ ವೆಚ್ಚ ಏರಿಕೆಯಾಗಿ ಬೆಲೆ ಏರಿಕೆಯ ಮೇಲೆ ಸರಣಿ ಪರಿಣಾಮ ಉಂಟಾಗಲಿದೆ. ತರಕಾರಿ, ದವಸಧಾನ್ಯಗಳ ಬೆಲೆ ಏರಿಕೆಯಿಂದ ಕಂಗಾಲಾದ ಜನರಿಗೆ ಇದು ಗಾಯದ ಮೇಲೆ ಬರೆ ಎಳೆದಂತಾಗುತ್ತದೆ’ ಎಂದು ಪಕ್ಷದ ರಾಜ್ಯ ಕಾರ್ಯದರ್ಶಿ ಕೆ. ಉಮಾ ಅಭಿಪ್ರಾಯಪಟ್ಟಿದ್ದಾರೆ.

ADVERTISEMENT

‌‘ಪ್ರತಿ ಲೀಟರ್ ತೈಲದ ಬೆಲೆಯಲ್ಲಿ ಅರ್ಧದಷ್ಟು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಧಿಸಿರುವ ತೆರಿಗೆಯೇ ಇದೆ. ಲೋಕಸಭಾ ಚುನಾವಣೆಗೆ ಕೆಲವು ದಿನಗಳ ಮೊದಲು ಕೇಂದ್ರ ಬಿಜೆಪಿ ಸರ್ಕಾರ ಮತದಾರರನ್ನು ಓಲೈಸಲು ₹ 2 ಕಡಿತ ಮಾಡಿತ್ತು. ರಷ್ಯಾ - ಉಕ್ರೇನ್ ಯುದ್ಧದ ಲಾಭ ಪಡೆದು ಭಾರತ ಸರ್ಕಾರವು ಜಾಗತಿಕ ದರಕ್ಕಿಂತ ಸುಮಾರು ಶೇ 35ರಷ್ಟು ಕಡಿಮೆಗೆ ಕಚ್ಚಾ ತೈಲ ಖರೀದಿಸಿದ್ದರೂ, ಅದರ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸಲಿಲ್ಲ. ಲಕ್ಷಾಂತರ ಕೋಟಿ ರೂಪಾಯಿಗಳನ್ನು ಭಾರತದ ತೈಲ ಕಂಪನಿಗಳು ಕೊಳ್ಳೆ ಹೊಡೆದಿವೆ’ ಎಂದು ಆರೋಪಿಸಿದ್ದಾರೆ.

‘ಒಂದು ದೇಶ- ಒಂದು ತೆರಿಗೆ ಘೋಷಣೆಯೊಂದಿಗೆ ಬಂದ ಜಿಎಸ್‌ಟಿಯನ್ನು ಪೆಟ್ರೋಲಿಯಂ ಉತ್ಪನ್ನಗಳಿಗೆ ಅನ್ವಯ ಮಾಡಿಲ್ಲ. ಹೀಗಾಗಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮಗಿಷ್ಟ ಬಂದಂತೆ ತೆರಿಗೆಗಳನ್ನು ಹೇರುತ್ತಿವೆ. ಅದೇ ದಾರಿಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರವು ಕೂಡ ಜನವಿರೋಧಿ ತೀರ್ಮಾನ ತೆಗೆದುಕೊಂಡಿದ್ದಾರೆ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.