ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣದಲ್ಲಿನ ಸಂತ್ರಸ್ತೆಯೊಬ್ಬರ ಅಪಹರಣದ ಆರೋಪದಡಿ ಭವಾನಿ ರೇವಣ್ಣ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಗೆ ಸಂಬಂಧಿಸಿದ ಆಕ್ಷೇಪಣೆ ಸಲ್ಲಿಕೆಗೆ ಕಾಲವಕಾಶ ಕೇಳಿದ ಎಸ್ಐಟಿ ಮನವಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮನ್ನಿಸಿದ್ದು, ವಿಚಾರಣೆಯನ್ನು ಬುಧವಾರಕ್ಕೆ (ಮೇ 29) ಮುಂದೂಡಿದೆ.
ಈ ಸಂಬಂಧ ಪ್ರಜ್ವಲ್ ರೇವಣ್ಣ ಅವರ ತಾಯಿಯೂ ಆದ ಭವಾನಿ ರೇವಣ್ಣ ಸಲ್ಲಿಸಿರುವ ಅರ್ಜಿಯನ್ನು, ‘ಶಾಸಕರು– ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ (ಸಿಸಿಎಚ್–82) ನ್ಯಾಯಾಧೀಶ ಸಂತೋಷ ಗಜಾನನ ಭಟ್ ಮಂಗಳವಾರ ವಿಚಾರಣೆ ನಡೆಸಿದರು.
ವಿಚಾರಣೆ ವೇಳೆ ಎಸ್ಐಟಿ ಪರ ಹಾಜರಿದ್ದ ವಿಶೇಷ ಪ್ರಾಸಿಕ್ಯೂಟರ್ ಬಿ.ಎನ್.ಜಗದೀಶ್, ‘ಪ್ರಕರಣದಲ್ಲಿ ಆರೋಪಿಗಳ ಸಂಖ್ಯೆ ಹೆಚ್ಚಿದ್ದು, ತನಿಖಾಧಿಕಾರಿಗಳಿಂದ ವಿವರ ಇನ್ನೂ ಲಭ್ಯವಾಗಬೇಕಿದೆ. ಆದ್ದರಿಂದ, ಆಕ್ಷೇಪಣೆ ಸಲ್ಲಿಸಲು ಮತ್ತಷ್ಟು ಕಾಲಾವಕಾಶ ನೀಡಬೇಕು’ ಎಂದು ಕೋರಿದರು.
ಇದನ್ನು ಮಾನ್ಯ ಮಾಡಿದ ನ್ಯಾಯಾಧೀಶರು ವಿಚಾರಣೆಯನ್ನು ಬುಧವಾರಕ್ಕೆ (ಮೇ 29) ಮುಂದೂಡಿ ಆದೇಶಿಸಿದರು. ಭವಾನಿ ರೇವಣ್ಣ ಪರ ಹೈಕೋರ್ಟ್ನ ಹಿರಿಯ ವಕೀಲ ಸಂದೇಶ್ ಜೆ.ಚೌಟ ವಾದ ಮಂಡಿಸಿದರು.
ಪ್ರಕರಣವೇನು?: ‘ಸಂತ್ರಸ್ತ ಮಹಿಳೆಯನ್ನು ಅಪಹರಿಸಲಾಗಿದೆ’ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ 364ಎ, 365 ಮತ್ತು 34 ಅಡಿ ಎಫ್ಐಆರ್ ದಾಖಲಿಸಲಾಗಿದೆ. ಇದರಲ್ಲಿ ಭವಾನಿಯವರ ಪತಿ ಎಚ್.ಡಿ.ರೇವಣ್ಣ ಮೊದಲ ಆರೋಪಿಯಾಗಿದ್ದರೆ ಸತೀಶ ಬಾಬಣ್ಣ ಎರಡನೇ ಆರೋಪಿಯಾಗಿದ್ದಾರೆ. ಈ ಪ್ರಕರಣದಲ್ಲಿ ಭವಾನಿ ಅವರು ಜಾಮೀನು ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.