ಬೆಂಗಳೂರು: ಬರ ಪರಿಸ್ಥಿತಿ ನಿಭಾಯಿಸುವಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರದ ಅಸಮರ್ಥ ಆಡಳಿತದ ವಿರುದ್ಧ ಜಿಲ್ಲೆಗಳಲ್ಲೂ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ ಬುಧವಾರ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
ರೈತರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ಸರ್ಕಾರದ ಖಜಾನೆ ಖಾಲಿಯಾಗಿದೆ. ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಆರ್ಥಿಕ ಪರಿಸ್ಥಿತಿ ಸರಿಯಾಗಿ ನಿಭಾಯಿಸದೇ ಈಗ ದೆಹಲಿ ಚಲೋ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಾಟಕ ಮಾಡುತ್ತಿದ್ದಾರೆ. ಬಿಜೆಪಿ ಅವಧಿಯಲ್ಲಿ ಇದೇ ಕಾಂಗ್ರೆಸ್ ನಾಯಕರು ಮೇಕೆದಾಟು ಹೋರಾಟ ಮಾಡಿದ್ದರು. ಅದೇ ರೀತಿ ದೆಹಲಿ ಚಲೋ ಸಹ ಮತದಾರರ ಕಣ್ಣಿಗೆ ಮಣ್ಣೆರಚುವ ನಾಟಕ. ಅವರ ನಾಟಕಕ್ಕೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಟೀಕಿಸಿದರು.
ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಬರಗಾಲದಲ್ಲೂ ಸಮರ್ಪಕವಾಗಿ ವಿದ್ಯುತ್ ನೀಡಿತ್ತು. ಆದರೆ, ರೈತರ ಬೆಳೆಗಳು ಒಣಗುತ್ತಿದ್ದರೂ, ಸಮರ್ಪಕ ವಿದ್ಯುತ್ ಪೂರೈಸುತ್ತಿಲ್ಲ ಎಂದು ದೂರಿದರು.
ಶಾಸಕ ಬಸವರಾಜ ಬೊಮ್ಮಾಯಿ ಮಾತನಾಡಿ, ಯುಪಿಎ ಅವಧಿಯಲ್ಲೇ ರಾಜ್ಯಕ್ಕೆ ಅನ್ಯಾಯವಾಗಿತ್ತು. ಅಂದು 85 ಕಿ.ಮೀ. ರೈಲುಮಾರ್ಗ ವಿದ್ಯುದೀಕರಣವಾಗಿತ್ತು. ಎನ್ಡಿಎ ಅವಧಿಯಲ್ಲಿ 3,500 ಕಿ.ಮೀ. ಆಗಿದೆ. ಮನಮೋಹನ್ ಸಿಂಗ್, ಸಿದ್ದರಾಮಯ್ಯ ಅವರಿಂದಲೇ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದರು.
ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಮುಖ್ಯ ಸಚೇತಕ ಎನ್.ರವಿಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.