ADVERTISEMENT

ಅತಿವೃಷ್ಟಿ: ಇಂಧನ ಇಲಾಖೆಗೆ ₹96 ಕೋಟಿ ನಷ್ಟ- ಸಚಿವ ಕೆ.ಜೆ. ಜಾರ್ಜ್‌

ದುರಸ್ತಿ ಕಾರ್ಯ ಶೀಘ್ರ ಪೂರ್ಣ– ಇಂಧನ ಸಚಿವ ಕೆ.ಜೆ. ಜಾರ್ಜ್‌

​ಪ್ರಜಾವಾಣಿ ವಾರ್ತೆ
Published 30 ಜುಲೈ 2024, 15:45 IST
Last Updated 30 ಜುಲೈ 2024, 15:45 IST
 ಇಂಧನ ಸಚಿವ ಕೆ.ಜೆ. ಜಾರ್ಜ್ 
 ಇಂಧನ ಸಚಿವ ಕೆ.ಜೆ. ಜಾರ್ಜ್    

ಬೆಂಗಳೂರು: ‘ಭಾರಿ ಮಳೆ ಹಾಗೂ ಬಿರುಗಾಳಿಯಿಂದಾಗಿ ರಾಜ್ಯದ ಹಲವೆಡೆ ಸಾವಿರಾರು ವಿದ್ಯುತ್ ಕಂಬಗಳು, ಪರಿವರ್ತಕಗಳು ಮತ್ತು ವಿದ್ಯುತ್‌ ಸರಬರಾಜು ಮಾರ್ಗಗಳಿಗೆ ಹಾನಿಯಾಗಿದ್ದು, ವಿದ್ಯುತ್‌ ಸರಬರಾಜು ಕಂಪನಿಗಳಿಗೆ (ಎಸ್ಕಾಂ) ಒಟ್ಟು ₹96.61 ಕೋಟಿಯಷ್ಟು ನಷ್ಟ ಉಂಟಾಗಿದೆ’ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ತಿಳಿಸಿದರು.

ಇಲಾಖೆಗೆ ಅತಿವೃಷ್ಟಿಯಿಂದ ಆಗಿರುವ ನಷ್ಟ ಮತ್ತು ವಿದ್ಯುತ್‌ ಪೂರೈಕೆಯಲ್ಲಿನ ಸಮಸ್ಯೆಗಳ ಕುರಿತು ಇಲಾಖೆ ಹಾಗೂ ಎಲ್ಲ ಎಸ್ಕಾಂಗಳ ಹಿರಿಯ ಅಧಿಕಾರಿಗಳ ಜತೆ ಮಂಗಳವಾರ ಸಭೆ ನಡೆಸಿದ ಬಳಿಕ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

‘ಮಳೆ ಮತ್ತು ಗಾಳಿಯಿಂದ 53,816 ಕಂಬಗಳು, 3,924 ವಿದ್ಯುತ್‌ ಪರಿವರ್ತಕಗಳು, 1,120 ಕಿ.ಮೀ. ಉದ್ದದ ವಿದ್ಯುತ್ ತಂತಿಗಳು ಹಾನಿಗೊಳಗಾಗಿವೆ. ಈ ಪೈಕಿ 51,119 ಕಂಬಗಳು, 3,918 ಪರಿವರ್ತಕಗಳು ಮತ್ತು  1,063 ಕಿ.ಮೀ. ಉದ್ದದ ವಿದ್ಯುತ್ ತಂತಿಗಳನ್ನು ದುರಸ್ತಿಗೊಳಿಸಲಾಗಿದೆ’ ಎಂದರು.

ADVERTISEMENT

‘ಚಿಕ್ಕಮಗಳೂರು, ಉಡುಪಿ, ಶಿವಮೊಗ, ಹಾಸನ, ಸಕಲೇಶಪುರ, ಕೊಡಗು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಹೆಚ್ಚು ಹಾನಿ ಸಂಭವಿಸಿದೆ. ಈ ಪ್ರದೇಶಗಳಿಗೆ ಹೆಚ್ಚುವರಿಯಾಗಿ ಗ್ಯಾಂಗ್‌ಮೆನ್‌, ಲೈನ್‌ಮೆನ್‌ ನೇಮಿಸುವುದರ ಜೊತೆಗೆ, ವಿದ್ಯುತ್ ಕಾಮಗಾರಿಗಳ ಗುತ್ತಿಗೆದಾರರ ನೆರವಿನೊಂದಿಗೆ ದುರಸ್ತಿ ಕೆಲಸ ಮಾಡಲಾಗುತ್ತಿದೆ’ ಎಂದು ವಿವರಿಸಿದರು.

ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ, ಕರ್ನಾಟಕ ನವೀಕರಿಸಬಹುದಾದ ಇಂಧನಗಳ ಅಭಿವೃದ್ಧಿ ನಿಗಮದ (ಕ್ರೆಡೆಲ್‌) ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ ಉಪಸ್ಥಿತರಿದ್ದರು.

₹1403 ಕೋಟಿ ಮೌಲ್ಯದ ವಿದ್ಯುತ್ ಮಾರಾಟ

‘ರಾಜ್ಯದ ಇಂಧನ ಇಲಾಖೆ ಫೆಬ್ರವರಿ – ಜುಲೈ ಮಧ್ಯೆ ₹1403 ಕೋಟಿ ಮೌಲ್ಯದ ವಿದ್ಯುತ್ ಮಾರಾಟ ಮಾಡಿದೆ. ಇದೇ ಅವಧಿಯಲ್ಲಿ ₹2293 ಕೋಟಿ ಮೌಲ್ಯದ ವಿದ್ಯುತ್ ಖರೀದಿ ಮಾಡಿದೆ’ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ಮಾಹಿತಿ ನೀಡಿದರು. ‘ರಾಜ್ಯದಲ್ಲಿ ನಿತ್ಯ ಸರಾಸರಿ 250 ದಶಲಕ್ಷ ಯೂನಿಟ್ ವಿದ್ಯುತ್ ಉತ್ಪಾದಿಸಲಾಗುತ್ತಿದೆ. ಈ ಪೈಕಿ 20 ದಶಲಕ್ಷ ಯೂನಿಟ್ ಅನ್ನು ಬೇಸಿಗೆಯಲ್ಲಿ ವಿನಿಮಯದ ಆಧಾರದ ಮೇಲೆ ವಿದ್ಯುತ್ ಪಡೆದುಕೊಂಡಿದ್ದ ಪಂಜಾಬ್ ಮತ್ತು ಉತ್ತರ ಪ್ರದೇಶ ರಾಜ್ಯಕ್ಕೆ ಪೂರೈಸಲಾಗುತ್ತಿದೆ’ ಎಂದು ವಿವರಿಸಿದರು.‌ ‘ರಾಜ್ಯದ ಮೂರು ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ 2022-23ನೇ ಸಾಲಿನಲ್ಲಿ 18419 ದಶಲಕ್ಷ ಯೂನಿಟ್ ವಿದ್ಯುತ್ ಉತ್ಪಾದನೆಯಾಗಿ ₹9326 ಕೋಟಿ ಆದಾಯ ಬಂದಿತ್ತು. 2023-24ನೇ ಸಾಲಿನಲ್ಲಿ 22313 ದಶಲಕ್ಷ ಯೂನಿಟ್ ಉತ್ಪಾದನೆ ಮಾಡಿ ₹10916 ಕೋಟಿ ಆದಾಯ ಗಳಿಸಲಾಗಿದೆ’ ಎಂದು ತಿಳಿಸಿದರು.

ವಿದ್ಯುತ್‌ ಉಳಿತಾಯಕ್ಕೆ ಎಐ ಬಳಕೆ

ಕೃತಕ ಬುದ್ದಿ ಮತ್ತೆ (ಎಐ) ಮಷೀನ್‌ ಲರ್ನಿಂಗ್ ಲ್ಯಾಂಗ್ವೇಜ್‌ನಂತಹ ಆಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ವಿದ್ಯುತ್ ನಿರ್ವಹಣಾ ನಷ್ಟ ತಗ್ಗಿಸುವ ಹಾಗೂ ಭವಿಷ್ಯದ ವಿದ್ಯುತ್‌ ಬೇಡಿಕೆ ಪೂರೈಕೆ ಕುರಿತು ಮುನ್ಸೂಚನೆ ನೀಡುವಂತಹ ವ್ಯವಸ್ಥೆಯನ್ನು ಅನುಷ್ಠಾನಕ್ಕೆ ತರಲು ಇಂಧನ ಇಲಾಖೆ ಮುಂದಾಗಿದೆ. ‘ಇದಕ್ಕಾಗಿ ಕ್ಯೂನೆಕ್ಸ್ಟ್‌ ಎಂಬ ಕಂಪನಿಯೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ವಿದ್ಯುತ್‌ ಉಳಿತಾಯಕ್ಕಾಗಿ ಎಐ ಬಳಕೆ ಜುಲೈ 11ರಿಂದ ಪ್ರಾಯೋಗಿಕವಾಗಿ ಆರಂಭವಾಗಿದೆ. ಆರು ತಿಂಗಳ ನಂತರ ಸ್ಪಷ್ಟ ಚಿತ್ರಣ ಸಿಗಲಿದೆ’ ಎಂದು ಜಾರ್ಜ್‌ ತಿಳಿಸಿದರು. ವಂಚನೆ ಆರೋಪ ಎದುರಿಸುತ್ತಿರುವ ಕ್ಯೂನೆಕ್ಸ್ಟ್ ಕಂಪನಿ ಜತೆ ಟೆಂಡರ್‌ ಪ್ರಕ್ರಿಯೆ ಇಲ್ಲದೆ ಒಪ್ಪಂದ ಮಾಡಿಕೊಂಡಿರುವ ಕುರಿತ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು ‘ಆರೋಪದ ಕುರಿತು ನಮಗೆ ಮಾಹಿತಿ ಇಲ್ಲ. ನಾವು ಆ ಕಂಪನಿಯಿಂದ ದತ್ತಾಂಶಗಳನ್ನು ಮಾತ್ರ ಪಡೆಯುತ್ತೇವೆ. ಆರೋಪದ ಕುರಿತು ಪರಿಶೀಲಿಸಿ ನಿರ್ಧಾರಕ್ಕೆ ಬರುತ್ತೇವೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.