ಬೆಂಗಳೂರು: ‘ಚಿತ್ರದುರ್ಗದ ರೇಣುಕ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ನಟ ದರ್ಶನ್ ಜೊತೆ ಸೇರಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಜೈಲಿನ ನಿಯಮಗಳನ್ನು ಉಲ್ಲಂಘಿಸಿದ್ದಾರೆ’ ಎಂದು ಮೂರನೇ ಆರೋಪಿ ಪುಟ್ಟಸ್ವಾಮಿ ಅಲಿಯಾಸ್ ಪವನ್ ಅವರನ್ನು ಬೆಂಗಳೂರಿನಿಂದ ಮೈಸೂರು ಜೈಲಿಗೆ ಸ್ಥಳಾಂತರಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.
ಈ ಸಂಬಂಧ ಪವನ್ (29) ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಪವನ್ ಅವರನ್ನು ಮೈಸೂರು ಜೈಲಿಗೆ ಸ್ಥಳಾಂತರಿಸಲು ನಗರದ 24ನೇ ಎಸಿಎಂಎಂ ನ್ಯಾಯಾಲಯ ಆಗಸ್ಟ್ 27ರಂದು ಹೊರಡಿಸಿದ ಆದೇಶ ರದ್ದುಪಡಿಸಿತು.
ವಿಚಾರಣೆ ವೇಳೆ ಪವನ್ ಪರ ವಕೀಲರು, ‘ಈಗಾಗಲೇ ಇದೇ ಪ್ರಕರಣದ 14ನೇ ಆರೋಪಿ ಪ್ರದೋಷ್ ಅವರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬೆಳಗಾವಿ ಜೈಲಿಗೆ ಸ್ಥಳಾಂತರಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಹೀಗಾಗಿ, ಈ ಆದೇಶವು ಪವನ್ ವಿಷಯದಲ್ಲೂ ಅನ್ವಯಿಸಲಿದೆ’ ಎಂಬ ಅಂಶವನ್ನು ನ್ಯಾಯಪೀಠಕ್ಕೆ ಅರುಹಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಸಕಾರಣಗಳಿಲ್ಲದೆ ಸುಖಾಸುಮ್ಮನೆ ಅರ್ಜಿದಾರನ್ನು ಬೇರೊಂದು ಜೈಲಿಗೆ ಸ್ಥಳಾಂತರಿಸಲಾಗಿದೆ. ಇಂತಹ ಪ್ರಕರಣಗಳಿಂದ ರಾಜ್ಯ ಸರ್ಕಾರದ ಹಣ ವ್ಯರ್ಥವಾಗುತ್ತದೆ ಅಷ್ಟೇ. ಜೈಲುಗಳ ಸ್ಥಿತಿ ಭಯಾನಕವಾಗಿದೆ. ಇವುಗಳ ಸುಧಾರಣೆ ಅಗತ್ಯವಿದೆ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿತು. ಅಂತೆಯೇ, ಪವನ್ ಅವರನ್ನು ಮೈಸೂರು ಜೈಲಿಗೆ ಸ್ಥಳಾಂತರಿಸಿದ್ದ ಆದೇಶವನ್ನು ರದ್ದುಪಡಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.