ಬೆಂಗಳೂರು: ‘ಕುರಿಗಳು ಸತ್ತರೆ ಒಂದು ಕುರಿಗೆ ₹5 ಸಾವಿರ ಪರಿಹಾರ ನೀಡುವ ‘ಅನುಗ್ರಹ’ ಯೋಜನೆ ಜಾರಿಯಲ್ಲಿದ್ದು, ಈ ಮೊತ್ತವನ್ನು ಹೆಚ್ಚಿಸುವ ಬಗ್ಗೆ ಪರಿಶೀಲಿಸಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಅಲೆಮಾರಿ ಕುರಿಗಾಹಿ ಸಮುದಾಯಗಳ ಮುಖಂಡರ ಜೊತೆ ಸಭೆ ನಡೆಸಿ ಅವರು, ‘ಹಿಂದಿನ ಸರ್ಕಾರ ‘ಅನುಗ್ರಹ’ ಯೋಜನೆಯನ್ನು ಸ್ಥಗಿತಗೊಳಿಸಿತ್ತು. ಆ ಅವಧಿಯಲ್ಲಿ ಸತ್ತ ಕುರಿಗಳಿಗೆ ಪರಿಹಾರ ನೀಡುವ ಬಗ್ಗೆ ಎಲ್ಲ ಜಿಲ್ಲೆಗಳಿಂದ ವರದಿ ತರಿಸಲಾಗುವುದು’ ಎಂದರು.
‘ಅರಣ್ಯ ಪ್ರದೇಶದಲ್ಲಿ ಕುರಿಗಳನ್ನು ಮಾತ್ರ ಮೇಯಿಸಲು ಅವಕಾಶ ನೀಡುವ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು. ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ ನೀಡಲು ವ್ಯವಸ್ಥೆ ಮಾಡಲಾಗುವುದು. ಈ ಗುರುತಿನ ಚೀಟಿ ಆಧಾರದ ಮೇಲೆ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡುವಂತೆ ಕ್ರಮ ಕೈಗೊಳ್ಳಲಾಗುವುದು. ವಲಸೆ ಕುರಿಗಾರರ ಮತ್ತು ಅವರ ಸ್ವತ್ತುಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ರೂಪಿಸುವ ಬಗ್ಗೆ ಚಿಂತನೆ ನಡೆಸಲಾಗುವುದು’ ಎಂದರು.
‘1,300 ಪಶು ವೈದ್ಯರ ಹುದ್ದೆ ಖಾಲಿ ಇದ್ದು, ಪ್ರಸ್ತುತ 400 ವೈದ್ಯರನ್ನು ನೇಮಕ ಮಾಡಲಾಗುತ್ತಿದೆ. ಮುಂದಿನ ವರ್ಷ ಬಾಕಿ ವೈದ್ಯರ ನೇಮಕಾತಿ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ತಿಳಿಸಿದರು.
ಪಶುಸಂಗೋಪನಾ ಸಚಿವ ವೆಂಕಟೇಶ್, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ದೇವೇಂದ್ರಪ್ಪ ವರ್ತೂರು, ‘ಗ್ಯಾರಂಟಿ’ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ. ರೇವಣ್ಣ, ಪಶು ಸಂಗೋಪನಾ ಇಲಾಖೆ ಕಾರ್ಯದರ್ಶಿ ಅಜಯ್ ನಾಗಭೂಷಣ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.