ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಆಚರಿಸುವ ಕರಗ ಉತ್ಸವಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ₹3 ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಬೆಂಗಳೂರು ನಗರ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಮಂಡ್ಯ, ಮೈಸೂರು, ಚಾಮರಾಜನಗರ ಹಾಗೂ ಇತರೆ ಜಿಲ್ಲೆಗಳಲ್ಲಿ ಆಯಾ ತಾಲ್ಲೂಕು, ಹೋಬಳಿ, ಗ್ರಾಮಗಳಲ್ಲಿ 2023–24ನೇ ಸಾಲಿನಲ್ಲಿ ನಡೆಯುವ ಕರಗ ಉತ್ಸವಗಳಿಗೆ ಉಪಯೋಗಿಸಲು ಅನುದಾನ ಬಿಡುಗಡೆ ಮಾಡುವಂತೆ ಆರ್ಥಿಕ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರಿಗೆ ಫೆ.20ರಂದು ಟಿಪ್ಪಣಿ ಮೂಲಕ ಸೂಚಿಸಿದ್ದಾರೆ.
‘ಹಲವು ದಶಕಗಳಿಂದ ತಿಗಳ ಜನಾಂಗದವರು (ವಹ್ನಿಕುಲ ಕ್ಷತ್ರೀಯರು) ದ್ರಾವಿಡ ಶೈಲಿಯಲ್ಲಿ ಕರಗ ಉತ್ಸವವನ್ನು ಲೋಕ ಕಲ್ಯಾಣಕ್ಕಾಗಿ ಆಚರಿಸುತ್ತಿದ್ದಾರೆ. 2018ರಲ್ಲಿ ತಮ್ಮ ನೇತೃತ್ವದ ಸರ್ಕಾರ ಅನುದಾನ ಬಿಡುಗಡೆ ಮಾಡಿದ ನಂತರ, ಅನುದಾನ ಅಥವಾ ಸಹಾಯಧನ ಬಿಡುಗಡೆ ಮಾಡಿಲ್ಲ. ಆದ್ದರಿಂದ, ರಾಜ್ಯದಲ್ಲಿ ನಡೆಯುವ ಪ್ರತಿ ಕರಗ ಉತ್ಸವಗಳಿಗೆ ತಲಾ ₹2 ಲಕ್ಷದಂತೆ ಒಟ್ಟು ₹3 ಕೋಟಿ ಅನುದಾನ ಬಿಡುಗಡೆ ಮಾಡಬೇಕು’ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಪಿ.ಆರ್. ರಮೇಶ್ ಅವರು ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದ್ದರು. ಈ ಮನವಿಯಂತೆ ಮುಖ್ಯಮಂತ್ರಿಯವರು ಅನುದಾನ ಮಂಜೂರು ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.