ಬೆಂಗಳೂರು: ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಮತ್ತು ವಿಜ್ಞಾನದ ಕುತೂಹಲವನ್ನು ಉತ್ತೇಜಿಸಲು ಮತ್ತು ‘ಎಲ್ಲರಿಗೂ ವಿಜ್ಞಾನ’ ಎಂಬ ಉದ್ದೇಶವನ್ನು ಸಾಧಿಸಲು ಪೂರಕವಾಗುವಂತೆ ಹೊಸ ನೀತಿ ರೂಪಿಸಲು ತಮ್ಮ ಇಲಾಖೆಯ ಕಾರ್ಯದರ್ಶಿಗೆ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಸೂಚನೆ ನೀಡಿದ್ದಾರೆ.
‘ಚಂದ್ರಯಾನ - 3 ರ ಯಶಸ್ಸಿನ ನಂತರ ಮಕ್ಕಳಲ್ಲಿ ಬಾಹ್ಯಾಕಾಶ ಕುರಿತ ಆಸಕ್ತಿ ಹೆಚ್ಚಾಗಿದೆ. ಶಾಲಾ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಮತ್ತು ವಿಜ್ಞಾನದ ಕುತೂಹಲವನ್ನು ಉತ್ತೇಜಿಸುವ ಸಲುವಾಗಿ ದೂರದರ್ಶಕಗಳನ್ನು ಒದಗಿಸುವುದು ಸೂಕ್ತವಾಗಿದೆ. ಈ ನಿಟ್ಟಿನಲ್ಲಿ ಪ್ರತ್ಯೇಕ ನೀತಿ ರೂಪಿಸುವಂತೆ ಸೂಚನೆ ನೀಡಿದ್ದೇನೆ’ ಎಂದು ಸಚಿವರು ತಿಳಿಸಿದ್ದಾರೆ.
‘ರಾಜ್ಯದಲ್ಲಿ ಎರಡು ಪ್ರಾದೇಶಿಕ ವಿಜ್ಞಾನ ಕೇಂದ್ರಗಳು, ಎರಡು ತಾರಾಲಯಗಳು, ಎಂಟು ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಗಳಿವೆ. 11 ಸಂಚಾರಿ ತಾರಾಲಯಗಳು ಕಾರ್ಯನಿರ್ವಹಿಸುತ್ತಿವೆ. ವಿದ್ಯಾರ್ಥಿಗಳಲ್ಲಿ ಬಾಲ್ಯಾವಸ್ಥೆಯಿಂದಲೇ ವೈಜ್ಞಾನಿಕ ವಿಷಯಗಳಲ್ಲಿ ಆಸಕ್ತಿ ಹೆಚ್ಚಿಸುವ ಉದ್ದೇಶದಿಂದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಡಿಯಲ್ಲಿ ನೂತನ ಯೋಜನೆ ಜಾರಿಗೊಳಿಸಲಾಗುವುದು. ಈ ಯೋಜನೆಯ ಅಡಿಯಲ್ಲಿ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಟೆಲಿಸ್ಕೋಪ್ ಮತ್ತು ಮೈಕ್ರೋಸ್ಕೋಪ್ಗಳನ್ನು ನೀಡಲು ಮತ್ತು ಉಪಕರಣಗಳ ನಿರ್ವಹಣೆ ಮತ್ತು ಅವುಗಳನ್ನು ಬಳಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲು ಶಿಕ್ಷಕರುಗಳಿಗೆ ತರಬೇತಿ ನೀಡಲು ಚಿಂತನೆ ನಡೆಸಲಾಗಿದೆ’ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.