ಬೆಂಗಳೂರು: ‘ದಕ್ಷಿಣ ಭಾರತ ಉತ್ಸವದ ಮೂಲಕ ರಾಜ್ಯದ ಪ್ರವಾಸೋದ್ಯಮ ಕ್ಷೇತ್ರಗಳಿಗೆ ಹರಿದು ಬಂದಿರುವ ಸುಮಾರು ₹ 4,200 ಕೋಟಿಯ ಜೊತೆಗೆ, ಇನ್ನಷ್ಟು ಹಣವನ್ನು ಮೂಲಸೌಕರ್ಯ ಅಭಿವೃದ್ದಿಗೆ ಹೂಡಿಕೆ ಮಾಡಲಾಗುವುದು’ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.
ಅರಮನೆ ಮೈದಾನದಲ್ಲಿ ನಡೆದ ಎರಡು ದಿನಗಳ ‘ದಕ್ಷಿಣ ಭಾರತ ಉತ್ಸವ– 2024’ರ ಸಮಾರೋಪ ಸಮಾರಂಭದಲ್ಲಿ ಭಾನುವಾರ ಮಾತನಾಡಿದ ಅವರು, ‘ಶಕ್ತಿ ಯೋಜನೆಯಿಂದಾಗಿ ರಾಜ್ಯದ ಪ್ರವಾಸೋದ್ಯಮ ಕ್ಷೇತ್ರಗಳಿಗೆ ಭೇಟಿ ನೀಡುವವರ ಸಂಖ್ಯೆ ಶೇ 50ರಷ್ಟು ಹೆಚ್ಚಾಗಿದೆ. ಈ ಕ್ಷೇತ್ರಗಳಲ್ಲಿ ಇನ್ನೂ ಹೆಚ್ಚಿನ ಮೂಲಸೌಕರ್ಯಗಳ ಅಭಿವೃದ್ದಿಗೆ ಅವಕಾಶವಿದೆ’ ಎಂದರು.
‘ದಕ್ಷಿಣ ಭಾರತ ರಾಜ್ಯಗಳಲ್ಲಿ ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ಹೂಡಿಕೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ಎಫ್ಕೆಸಿಸಿಐ ಆಯೋಜಿಸಿರುವ ಈ ಕಾರ್ಯಕ್ರಮ ಬಹಳ ಮಹತ್ವದ್ದಾಗಿದೆ. ಈ ಉತ್ಸವದ ಮೂಲಕ ಹೂಡಿಕೆಯ ಪ್ರಸ್ತಾವಗಳಿಗೆ ಒಡಂಬಡಿಕೆಯಾಗುವ ನಿಟ್ಟಿನಲ್ಲಿ ಎಫ್ಕೆಸಿಸಿಐ ಪದಾಧಿಕಾರಿಗಳು ಪ್ರಮುಖ ಪಾತ್ರ ವಹಿಸಿದ್ದಾರೆ’ ಎಂದರು.
‘ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ಮೂಲಸೌಕರ್ಯಗಳನ್ನು ಹೆಚ್ಚಿಸುವುದು ಸರ್ಕಾರದಿಂದ ಮಾತ್ರ ಸಾಧ್ಯವಿಲ್ಲ. ಪ್ರವಾಸೋದ್ಯಮ ಎಂದರೆ ಕೇವಲ ಲಕ್ಸುರಿ ಪ್ರವಾಸೋದ್ಯಮ ಅಲ್ಲ. ಈ ಕ್ಷೇತ್ರಗಳಲ್ಲಿ ಹೂಡಿಕೆಗೆ ವಿಫುಲ ಅವಕಾಶಗಳಿವೆ. ಇಲ್ಲಿನ ಹೂಡಿಕೆಯಿಂದ ಬಹಳಷ್ಟು ಉಪಯೋಗವನ್ನು ಉದ್ದಿಮೆದಾರರು ಪಡೆದುಕೊಳ್ಳಬಹುದಾಗಿದೆ. ಸಾಮಾನ್ಯ ಜನರ ಪ್ರವಾಸೋದ್ಯಮಕ್ಕೂ ಸರ್ಕಾರ ಆದ್ಯತೆ ನೀಡಲಿದೆ’ ಎಂದರು.
‘ಈ ಉತ್ಸವದ ಮೂಲಕ ದಕ್ಷಿಣ ಭಾರತ ರಾಜ್ಯಗಳ ಐತಿಹಾಸಿಕ, ಪಾರಂಪರಿಕ, ಸ್ಮಾರಕ ಸಂಪನ್ಮೂಲಗಳಲ್ಲಿನ ಅವಕಾಶಗಳನ್ನು ಪ್ರದರ್ಶಿಸಲು ಸಾಧ್ಯವಾಗಿದೆ. ಎಲ್ಲರೂ ಜೊತೆಗೂಡಿ ವಿಶ್ವ ಪ್ರವಾಸೋದ್ಯಮ ಭೂಪಟದಲ್ಲಿ ಉತ್ತಮ ಸ್ಥಾನ ಪಡೆದುಕೊಳ್ಳುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗೋಣ’ ಎಂದು ಕರೆ ನೀಡಿದರು.
ಎಫ್ಕೆಸಿಸಿಐ ಅಧ್ಯಕ್ಷ ರಮೇಶ್ ಚಂದ್ರ ಲಹೋಟಿ ಮಾತನಾಡಿ, ‘ದಕ್ಷಿಣ ಭಾರತ ರಾಜ್ಯಗಳನ್ನು ಒಂದೇ ವೇದಿಕೆಯ ಅಡಿಯಲ್ಲಿ ತರುವ ಪ್ರಯತ್ನಕ್ಕೆ ಯಶಸ್ಸು ದೊರೆತಿದೆ. ಕೈಗಾರಿಕಾ ಉತ್ಪಾದನೆ, ಕೃಷಿಯ ನಂತರ ಹೆಚ್ಚಿನ ಉದ್ಯೋಗಾವಕಾಶ ಮತ್ತು ಹೂಡಿಕೆ ಅವಕಾಶ ಇರುವುದು ಪ್ರವಾಸೋದ್ಯಮ ಕ್ಷೇತ್ರದಲ್ಲಿ. ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆ ಮಾಡುವಂತೆ ಉದ್ದಿಮೆದಾರರನ್ನು ಎಫ್ಕೆಸಿಸಿಐ ಪ್ರೋತ್ಸಾಹಿಸಿದೆ. ಮುಂದಿನ ದಿನಗಳಲ್ಲೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆಗೆ ಪ್ರೋತ್ಸಾಹ ನೀಡಲು ಆದ್ಯತೆ ನೀಡಲಾಗುವುದು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.