ಬೆಂಗಳೂರು: ಭೂಮಾಪನ ಇಲಾಖೆಯಲ್ಲಿ ಖಾಲಿ ಇರುವ 750 ಭೂಮಾಪಕ ಹುದ್ದೆಗಳ ನೇಮಕ ಪ್ರಕ್ರಿಯೆಗೆ ಆದಷ್ಟು ಬೇಗನೆ ಚಾಲನೆ ನೀಡುವಂತೆ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಮನವಿ ಮಾಡುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ವಿಧಾನಸಭೆಯಲ್ಲಿ ಸೋಮವಾರ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಐಹೊಳೆ ದುರ್ಯೋಧನ ಮಹಾಲಿಂಗಪ್ಪ ಅವರ ಪ್ರಶ್ನೆಗೆ ಉತ್ತರಿಸಿ ಈ ವಿಷಯ ತಿಳಿಸಿದರು.
ಈ ಹುದ್ದೆಗಳ ಭರ್ತಿಗೆ ಈಗಾಗಲೇ ಕೆಪಿಎಸ್ಸಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. 4 ರಿಂದ 6 ತಿಂಗಳ ಒಳಗೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲು ಕೋರಿಕೆ ಸಲ್ಲಿಸುತ್ತೇವೆ. 750 ಹುದ್ದೆಗಳಿಗೆ 77,241 ಅರ್ಜಿಗಳು ಬಂದಿವೆ. ಸಂದರ್ಶನ ಇಲ್ಲದೇ ನೇಮಕ ಮಾಡಿಕೊಳ್ಳಲಾಗುವುದು. ಅಲ್ಲದೇ, ಹೊಸ ಹುದ್ದೆಗಳನ್ನು ಸೃಜಿಸುವ ಸಂಬಂಧ ಚರ್ಚೆ ನಡೆದಿದೆ ಎಂದರು.
ಸರ್ವೆ ಕಾರ್ಯವನ್ನು ಚುರುಕುಗೊಳಿಸಲು ಜಿಪಿಎಸ್ ಆಧಾರಿತ ರೋವರ್ ಬಳಸಲಾಗುವುದು. ಪ್ರತಿ ತಾಲ್ಲೂಕಿಗೂ ತಲಾ ಒಂದು ರೋವರ್ ಒದಗಿಸಲಾಗುವುದು. ಇದಕ್ಕಾಗಿ ಟೆಂಡರ್ ಕರೆಯಲಾಗಿದೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.