ADVERTISEMENT

ಮೂವರು ಡಿಸಿಎಂ ಬೇಕು: ಸಚಿವ ಕೆ.ಎನ್. ರಾಜಣ್ಣ ಮತ್ತೊಮ್ಮೆ ಹೇಳಿಕೆ

ಸಹಕಾರ ಸಚಿವ ಕೆ.ಎನ್.ರಾಜಣ್ಣ

​ಪ್ರಜಾವಾಣಿ ವಾರ್ತೆ
Published 11 ಜೂನ್ 2024, 13:44 IST
Last Updated 11 ಜೂನ್ 2024, 13:44 IST
 ಕೆ.ಎನ್ ರಾಜಣ್ಣ
 ಕೆ.ಎನ್ ರಾಜಣ್ಣ   

ತುಮಕೂರು: ಈವರೆಗೆ ತಣ್ಣಗಾಗಿದ್ದ ಮೂವರು ಉಪ ಮುಖ್ಯಮಂತ್ರಿಗಳ ನೇಮಕ ವಿಚಾರ, ಲೋಕಸಭೆ ಚುನಾವಣೆ ನಂತರ ಮತ್ತೆ ಮುನ್ನೆಲೆಗೆ ಬಂದಿದೆ. ಮೂವರು ಡಿಸಿಎಂ ನೇಮಕ ಮಾಡಬೇಕು ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಮತ್ತೊಮ್ಮೆ ಒತ್ತಾಯಿಸಿದ್ದಾರೆ.

ತುಮಕೂರು ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಮುಂದಿನ ದಿನಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಬರಲಿದೆ. ಮೂವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿದರೆ ಪಕ್ಷಕ್ಕೆ ಅನುಕೂಲವಾಗಲಿದೆ’ ಎಂದು ಹೇಳಿದರು.

ಲೋಕಸಭೆ ಚುನಾವಣೆ ಮುಗಿಯುವವರೆಗೂ ಉಪ ಮುಖ್ಯಮಂತ್ರಿ ವಿಚಾರ ಮಾತನಾಡದಂತೆ ಸುಮ್ಮನಿರುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದರು. ಹಾಗಾಗಿ ಸುಮ್ಮನಿದ್ದೆ. ಖರ್ಗೆ ಅವರನ್ನು ಖುದ್ದಾಗಿ ಭೇಟಿಮಾಡಿ ಈ ವಿಚಾರ ಚರ್ಚಿಸಲಾಗುವುದು ಎಂದರು.

ADVERTISEMENT

‘ಮಲ್ಲಿಕಾರ್ಜುನ ಖರ್ಗೆ ರಾಜ್ಯ ರಾಜಕಾರಣಕ್ಕೆ ಬರಲಿದ್ದು, ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಆಗಲಿದ್ದಾರೆ’ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ‘ಮುಖ್ಯಮಂತ್ರಿ ಆಗುವುದಿದ್ದರೆ ಬಹಳ ಹಿಂದೆಯೇ ಆಗಬೇಕಿತ್ತು. ಈಗ ಅಂತಹ ಸಾಧ್ಯತೆಗಳಿಲ್ಲ. ಡಿ.ಕೆ.ಶಿವಕುಮಾರ್ ಸಹ ಮುಖ್ಯಮಂತ್ರಿಯಾಗಲು ಕುರ್ಚಿ ಖಾಲಿ ಇಲ್ಲ. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ’ ಎಂದು ಹೇಳಿದರು.

ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದಿಂದ ಬದಲಾವಣೆ ಮಾಡಿದರೆ ಅಭ್ಯಂತರವಿಲ್ಲ. ಉಸ್ತುವಾರಿ ಮಾಡುವಂತೆ ನಾನು ಕೇಳಿರಲಿಲ್ಲ. ಬೇಕಿದ್ದರೆ ಬದಲಾವಣೆ ಮಾಡಿಕೊಳ್ಳಲಿ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.