ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು (ಬಿಬಿಎಂಪಿ) ನಗರದ ಬಾಳೇಕುಂದ್ರಿ ವೃತ್ತದಲ್ಲಿರುವ ಪಾರ್ಸಿ ಅಗ್ನಿ ಪ್ರಾರ್ಥನಾಲಯದ ಬಳಿ ಸಾರ್ವಜನಿಕ ಶೌಚಾಲಯ ನಿರ್ಮಾಣ ಮಾಡುತ್ತಿರುವುದನ್ನು ಆಕ್ಷೇಪಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಬಿಬಿಎಂಪಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
ಈ ಸಂಬಂಧ ‘ಬೆಂಗಳೂರು ಪಾರ್ಸಿ ಜೊರಾಸ್ಟ್ರಿಯನ್ ಅಂಜುಮನ್’ (ಬಿಪಿಝಡ್ಎ) ಗೌರವ ಕಾರ್ಯದರ್ಶಿ ದಿನ್ಶಾ ಕೊವಾಸ್ಜಿ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಅಶೋಕ ಎಸ್.ಕಿಣಗಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ ಪ್ರತಿವಾದಿಯಾದ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿತು. ಅಂತೆಯೇ, ಶೌಚಾಲಯ ಉದ್ಘಾಟಿಸದಂತೆ ಮಧ್ಯಂತರ ತಡೆ ನೀಡಿ ವಿಚಾರಣೆಯನ್ನು ಅಕ್ಟೋಬರ್ 30ಕ್ಕೆ ಮುಂದೂಡಿತು.
ಅರ್ಜಿಯಲ್ಲೇನಿದೆ?: ‘ನಗರದ ಬಾಳೇಕುಂದ್ರಿ ವೃತ್ತದಲ್ಲಿರುವ ‘ಪಾರ್ಸಿ’ ಅಗ್ನಿ ದೇವಾಲಯದ ಎದುರುಗಡೆ ಬಿಬಿಎಂಪಿ ಸಾರ್ವಜನಿಕ ಶೌಚಾಲಯ ನಿರ್ಮಿಸುತ್ತಿದೆ. ಇದರಿಂದ ಪ್ರಾರ್ಥನಾ ಮಂದಿರಕ್ಕೆ ಬರುವ ಭಕ್ತರಿಗೆ ಮತ್ತು ಸನ್ನಿಧಾನದ ಪಾವಿತ್ರ್ಯಕ್ಕೆ ಧಕ್ಕೆ ಉಂಟಾಗಲಿದೆ. ಆದ್ದರಿಂದ, ಶೌಚಾಲಯ ತೆರವುಗೊಳಿಸಲು ಬಿಬಿಎಂಪಿಗೆ ನಿರ್ದೇಶಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.