ADVERTISEMENT

ಶಿರೂರು ದುರಂತ: ಹೈಕೋರ್ಟ್‌ಗೆ ಕೇಂದ್ರದ ಮಾಹಿತಿ

​ಪ್ರಜಾವಾಣಿ ವಾರ್ತೆ
Published 24 ಜುಲೈ 2024, 15:58 IST
Last Updated 24 ಜುಲೈ 2024, 15:58 IST
<div class="paragraphs"><p>ಶಿರೂರು ದುರಂತ</p></div>

ಶಿರೂರು ದುರಂತ

   

ಬೆಂಗಳೂರು: ‘ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲ್ಲೂಕಿನ ಶಿರೂರು ಗ್ರಾಮ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ-66ರ ಅಂಚಿನಲ್ಲಿ ಉಂಟಾದ ಗುಡ್ಡ ಕುಸಿತದ ಪ್ರಕರಣದಲ್ಲಿ ಮಣ್ಣಿನಡಿ ಸಿಲುಕಿದ್ದವರ ಪೈಕಿ 8 ಜನರ ಶವಗಳು ಪತ್ತೆಯಾಗಿದ್ದು, ರಕ್ಷಣಾ ಕಾರ್ಯ ಕಾರ್ಯಾಚರಣೆ ಭರದಿಂದ ಸಾಗಿದೆ’ ಎಂದು ಕೇಂದ್ರ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಈ ಸಂಬಂಧ ರಾಜ್ಯ ಹೈಕೋರ್ಟ್‌ ವಕೀಲ ಶಿಜಿ ಮಲಯಾಳಿ ಹಾಗೂ ನವದೆಹಲಿಯ ಕೆ.ಆರ್.ಸುಭಾಷ್‌ ಚಂದ್ರನ್‌ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ADVERTISEMENT

ವಿಚಾರಣೆ ವೇಳೆ ಹೆಚ್ಚುವರಿ ಸಾಲಿಸಿಟಿರ್‌ ಜನರಲ್‌ ಕೆ.ಅರವಿಂದ ಕಾಮತ್‌, ಮಣ್ಣಿನಡಿ ಸಿಲುಕಿರುವವರ ಪತ್ತೆ ಹಾಗೂ ರಕ್ಷಣೆಗೆ ಕಳೆದ 24 ಗಂಟೆಯಲ್ಲಿ ಕೈಗೊಂಡ ಕ್ರಮಗಳ ಕುರಿತಾದ ವರದಿಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಅರ್ಜಿದಾರರ ಪರ ವಕೀಲರು, ‘ಕೇಂದ್ರ ಸರ್ಕಾರ ಸಲ್ಲಿಸಿರುವ ವರದಿ ಪರಿಶೀಲನೆ ನಡೆಸಿ ವಾದ ಮಂಡಿಸಲು ಕಾಲಾವಕಾಶ ನೀಡಬೇಕು’ ಎಂದು ಕೋರಿದರು. ಅಂತೆಯೇ, ರಾಜ್ಯ ಸರ್ಕಾರದ ಪರ ವಕೀಲರು, ‘ಪ್ರಕರಣದಲ್ಲಿ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತ ವರದಿ ಈಗಾಗಲೇ ಸಿದ್ಧವಾಗಿದೆ. ಅದನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು’ ಎಂದು ತಿಳಿಸಿದರು. ಇದನ್ನು ಪರಿಗಣಿಸಿದ ನ್ಯಾಯಪೀಠವು ವಿಚಾರಣೆಯನ್ನು ಆಗಸ್ಟ್‌ 1ಕ್ಕೆ ಮುಂದೂಡಿತು.

‘ಭೂ ಕುಸಿತದಿಂದ ಮಣ್ಣಿನಡಿ ಸಿಲುಕಿರುವ ಜನರ ರಕ್ಷಣೆ ಹಾಗೂ ಪತ್ತೆಗೆ, ಹೆದ್ದಾರಿಯಲ್ಲಿ ಬಿದ್ದಿರುವ ಕಲ್ಲು-ಮಣ್ಣು ತೆರವುಗೊಳಿಸಲು 24 ಗಂಟೆಗಳ ಕಾಲ ನಿರಂತರವಾಗಿ ಸಾಧ್ಯವಿರುವ ಎಲ್ಲಾ ಕ್ರಮಗಳನ್ನೂ ಕೈಗೊಳ್ಳಬೇಕು. ಸೇನಾ ಪಡೆಗಳನ್ನು ನಿಯೋಜಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.