ಬೆಂಗಳೂರು: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮಹಿಳೆಯರನ್ನು ಅವಹೇಳನ ಮಾಡಿರುವ ಆರೋಪದಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತು ಶಾಸಕ ಶಾಮನೂರು ಶಿವಶಂಕರಪ್ಪ ವಿರುದ್ಧ ಕ್ರಮ ಜರುಗಿಸುವಂತೆ ಅಖಿಲ ಭಾರತ ಕಾರ್ಮಿಕ ಹಿತರಕ್ಷಣಾ ವೇದಿಕೆ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದೆ.
‘ಚಿತ್ರನಟಿ ಹೇಮಮಾಲಿನಿ ಅವರಿಗೆ ಬಿಜೆಪಿ ಟಿಕೆಟ್ ಪ್ರಕಟಿಸಿದಾಗ ಅಶ್ಲೀಲವಾಗಿ ಟೀಕಿಸಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತು ಮಹಿಳೆಯರು ಅಡುಗೆ ಮನೆಗೆ ಸೀಮಿತವಾಗಿರಬೇಕು ಎಂಬರ್ಥದಲ್ಲಿ ಮಾತನಾಡಿರುವ ಶಾಮನೂರು ಶಿವಶಂಕರಪ್ಪ ಅವರಿಂದ ಮಹಿಳೆಯರ ಘನತೆಗೆ ಧಕ್ಕೆಯಾಗಿದೆ’ ಎಂದು ವೇದಿಕೆಯ ಅಧ್ಯಕ್ಷೆ ಆರ್. ಗಿರಿಜಮ್ಮ ಮತ್ತಿತರರು ಸೋಮವಾರ ಸಲ್ಲಿಸಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
‘ಮಹಿಳೆಯರ ಘನತೆಯನ್ನು ರಕ್ಷಿಸಬೇಕಾದ ಶಾಸಕರು, ಸಂಸದರೇ ಈ ರೀತಿ ನಡೆದುಕೊಂಡಿರುವುದು ಸರಿಯಲ್ಲ. ಸುರ್ಜೇವಾಲಾ ಅವರು ಹೇಮಮಾಲಿನಿ ಅವರ ಕುರಿತು ಅತ್ಯಂತ ಕೀಳು ಅಭಿರುಚಿಯ ಮಾತನಾಡಿದ್ದರು. ಶಾಮನೂರು ಶಿವಶಂಕರಪ್ಪ ಮಹಿಳಾ ದ್ವೇಷಿ ಮನೋಭಾವವನ್ನು ತಮ್ಮ ಹೇಳಿಕೆ ಮೂಲಕ ಪ್ರಕಟಿಸಿದ್ದರು. ಇಬ್ಬರ ವಿರುದ್ಧವೂ ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.