ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಭಾರತದ ಸುಪ್ರೀಂ ಕೋರ್ಟ್ ಜಾಮೀನು ನೀಡಿದ್ದ ವಿಚಾರವನ್ನು ಪಾಕ್ ಸುಪ್ರೀಂ ಕೋರ್ಟ್ನಲ್ಲಿ ಪ್ರಸ್ತಾಪಿಸಿದ್ದಾರೆ.
ಸುಪ್ರೀಂ ಕೋರ್ಟ್ನಲ್ಲಿ ತಮ್ಮ ವಿರುದ್ಧದ ಪ್ರಕರಣಗಳ ವಿಚಾರಣೆಯ ವೇಳೆ ಅವರು ಕೇಜ್ರಿವಾಲ್ ಪ್ರಕರಣವನ್ನು ನಿದರ್ಶನವನ್ನಾಗಿ ನೀಡಿದರು. ಪಾಕ್ನ ಜೈಲಿನಲ್ಲಿ ತಮ್ಮ ಮೇಲೆ ದಬ್ಬಾಳಿಕೆ ನಡೆಸಲಾಗಿದೆ ಎಂದು ದೂರಿದರು.
‘ರಾಷ್ಟ್ರೀಯ ಭ್ರಷ್ಟಾಚಾರ ತಡೆ ಸುಗ್ರೀವಾಜ್ಞೆ’ಗೆ ತಿದ್ದುಪಡಿ ತಂದ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಗುರುವಾರ ಮುಖ್ಯ ನ್ಯಾಯಮೂರ್ತಿ ಖಾಜಿ ಫಯೀಜ್ ಈಸಾ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠದ ಮುಂದೆ ಹಾಜರಾದ ಇಮ್ರಾನ್, ‘ಏಪ್ರಿಲ್ 2022ರಲ್ಲಿ ಅಧಿಕಾರದಿಂದ ಕೆಳಗಿಳಿದ ನಂತರ ತಮ್ಮನ್ನು ಬಲಿಪಶುವನ್ನಾಗಿ ಮಾಡಲಾಗಿದೆ’ ಎಂದು ಹೇಳಿದರು.
‘ಸಾರ್ವತ್ರಿಕ ಚುನಾವಣೆಯಲ್ಲಿ ಅವರ ಪಕ್ಷದ ಪರ ಪ್ರಚಾರ ಮಾಡುವುದಕ್ಕಾಗಿ ಅರವಿಂದ ಕೇಜ್ರಿವಾಲ್ ಅವರಿಗೆ ಅಲ್ಲಿನ ಸುಪ್ರೀಂ ಕೋರ್ಟ್ ಜಾಮೀನು ನೀಡಿತು. ಆದರೆ, ಚುನಾವಣೆಯಿಂದ ದೂರ ಇಡುವುದಕ್ಕಾಗಿಯೇ ನನ್ನನ್ನು ಕೇವಲ ಐದು ದಿನದಲ್ಲಿಯೇ ಶಿಕ್ಷೆಗೊಳಪಡಿಸಲಾಗಿತ್ತು’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.