ADVERTISEMENT

ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಕೊಲೆ ಪ್ರಕರಣ: ಜಾಮೀನು ಅರ್ಜಿ ವಿಚಾರಣೆಗೆ ಸಮ್ಮತಿ

ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಕೊಲೆ ಪ್ರಕರಣ; ದೆಹಲಿ ಪೊಲೀಸರಿಂದ ಅರ್ಜಿ

​ಪ್ರಜಾವಾಣಿ ವಾರ್ತೆ
Published 8 ಜುಲೈ 2024, 12:56 IST
Last Updated 8 ಜುಲೈ 2024, 12:56 IST
<div class="paragraphs"><p>ಸುಪ್ರೀಂ ಕೋರ್ಟ್</p></div>

ಸುಪ್ರೀಂ ಕೋರ್ಟ್

   

ನವದೆಹಲಿ: ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ನಾಲ್ವರು ಅಪರಾಧಿಗಳಿಗೆ ಜಾಮೀನು ಮಂಜೂರು ಮಾಡಿದ್ದ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ, ದೆಹಲಿ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್‌ ಸೋಮವಾರ ಒಪ್ಪಿಕೊಂಡಿದೆ.

ದೆಹಲಿ ಪೊಲೀಸರು ಸಲ್ಲಿಸಿದ್ದ ನಾಲ್ಕು ಅರ್ಜಿಗಳ ಕುರಿತು ನ್ಯಾಯಮೂರ್ತಿಗಳಾದ ಬೇಲಾ ಎಂ. ತ್ರಿವೇದಿ ಮತ್ತು ಸತೀಶ್‌ ಚಂದ್ರ ಶರ್ಮಾ ಅವರಿದ್ದ ಪೀಠವು ನೋಟಿಸ್ ಜಾರಿ ಮಾಡಿದ್ದು, ನಾಲ್ವರು ಅಪರಾಧಿಗಳಿಗೆ ನೀಡಿರುವ ಜಾಮೀನು ವಿರುದ್ಧ ಸೌಮ್ಯಾ ಅವರ ತಾಯಿ ಸಲ್ಲಿಸಿರುವ ಬಾಕಿ ಅರ್ಜಿಯನ್ನು ಇದಕ್ಕೆ ಜೋಡಿಸಿದೆ.

ADVERTISEMENT

‘ಸುಪ್ರೀಂ ಕೋರ್ಟ್ ಈಗಾಗಲೇ ನೋಟಿಸ್ ನೀಡಿರುವುದರಿಂದ, ಎಲ್ಲಾ ಅರ್ಜಿಗಳನ್ನು ಒಟ್ಟುಗೂಡಿಸಲಾಗುವುದು’ ಎಂದು ದೆಹಲಿ ಪೊಲೀಸರ ಪರ ಹಾಜರಾಗಿದ್ದ  ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌.ವಿ. ರಾಜು ನ್ಯಾಯಪೀಠಕ್ಕೆ ತಿಳಿಸಿದರು.

‌ನೋಟಿಸ್ ಜಾರಿಗೊಳಿಸಿದ ನ್ಯಾಯಪೀಠವು, ಈ ವಿಷಯಕ್ಕೆ ಸಂಬಂಧಿಸಿದ ಎಲ್ಲ ಅರ್ಜಿಗಳನ್ನು ಜೋಡಿಸಿದೆ.

ಅಪರಾಧಿಗಳಾದ ರವಿ ಕಪೂರ್, ಅಮಿತ್ ಶುಕ್ಲಾ, ಬಲ್ಜೀತ್ ಸಿಂಗ್ ಮಲಿಕ್ ಮತ್ತು ಅಜಯ್‌ ಕುಮಾರ್ ಅವರಿಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಯನ್ನು ಮೇಲ್ಮನವಿಗಳು ಬಾಕಿ ಇರುವವರೆಗೂ ಫೆ.12ರಂದು ಅಮಾನತುಗೊಳಿಸಿದ್ದ ಹೈಕೋರ್ಟ್, ಜಾಮೀನು ಮಂಜೂರು ಮಾಡಿತ್ತು. ಇವರು 14 ವರ್ಷಗಳಿಂದ ಬಂಧನದಲ್ಲಿದ್ದಾರೆ ಎಂದು ಹೇಳಿತ್ತು.

ಇದನ್ನು ಪ್ರಶ್ನಿಸಿ ಸೌಮ್ಯಾ ತಾಯಿ ಮಾಧವಿ ವಿಶ್ವನಾಥನ್ ಸಲ್ಲಿಸಿದ್ದ ಅರ್ಜಿಯನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಏ. 22ರಂದು ಒಪ್ಪಿಕೊಂಡಿತ್ತು. ದೆಹಲಿ ಪೊಲೀಸರು ಮತ್ತು ನಾಲ್ವರು ಅಪರಾಧಿಗಳಿಗೆ ನೋಟಿಸ್ ನೀಡಿತ್ತು.

2008ರ ಸೆ. 30ರಂದು ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಸೌಮ್ಯಾ ವಿಶ್ವನಾಥನ್ ಅವರನ್ನು ದಕ್ಷಿಣ ದೆಹಲಿಯ ನೆಲ್ಸನ್ ಮಂಡೇಲಾ ಮಾರ್ಗದಲ್ಲಿ ಗುಂಡಿಕ್ಕಿ ಕೊಲ್ಲಲಾಗಿತ್ತು.

ಈ ಪ್ರಕರಣದ ವಿಚಾರಣೆ ನಡೆಸಿದ್ದ ವಿಶೇಷ ನ್ಯಾಯಾಲಯವು 2023ರ ನ. 25ರಂದು ಆರೋಪಿಗಳಿಗೆ ಶಿಕ್ಷೆ ವಿಧಿಸಿತ್ತು.ights - null

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.