ಮುಂಬೈ: ಟಿ-20 ವಿಶ್ವಕಪ್ ಗೆದ್ದ ಭಾರತ ಕ್ರಿಕೆಟ್ ತಂಡದ ವಿಜಯೋತ್ಸವದ ವೇಳೆ ಸಾಗರೋಪಾದಿಯಲ್ಲಿ ಸೇರಿದ್ದ ಅಭಿಮಾನಿಗಳ ಪೈಕಿ ಕೆಲವರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಪ್ರಕರಣಗಳು ವರದಿಯಾಗಿವೆ.
ಭಾರಿ ಸಂಖ್ಯೆಯಲ್ಲಿ ಸೇರಿದ್ದ ಜನಸ್ತೋಮದಲ್ಲಿ 11 ಮಂದಿ ಗಾಯಗೊಂಡಿದ್ದಾರೆ.
ಗಾಯ ಮತ್ತು ಗುಂಪಿನಲ್ಲಿ ಉಸಿರಾಟ ಸಮಸ್ಯೆ ಉಂಟಾಗಿ 9 ಮಂದಿ ಜಿಟಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವರದಿ ತಿಳಿಸಿದೆ.
ಒಬ್ಬರನ್ನು ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ನ ಸೇಂಟ್ ಜಾರ್ಜ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಬ್ಬರು ದಕ್ಷಿಣ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದಾರೆ.
2ನೇ ಬಾರಿಗೆ ಟಿ–20 ವಿಶ್ವಕಪ್ ಗೆದ್ದ ಭಾರತ ತಂಡದ ವಿಜಯೋತ್ಸವವನ್ನು ಗುರುವಾರ ಮುಂಬೈನಲ್ಲಿ ಏರ್ಪಡಿಸಲಾಗಿತ್ತು. ದಕ್ಷಿಣ ಮುಂಬೈನ ಮಹಾರಾಣಿಯ ಕೊರಳಹಾರದಂತೆ ಕಂಗೊಳಿಸುವ ಮರೀನ್ ಡ್ರೈವ್ ಪ್ರದೇಶಕ್ಕೆ ಸಾವಿರಾರು ಸಂಖ್ಯೆಯಲ್ಲಿ ಕ್ರಿಕೆಟ್ ಅಭಿಮಾನಿಗಳು ಬಂದಿದ್ದರು.
ಭಾರತ ಕ್ರಿಕೆಟ್ ತಂಡದ ಚಿತ್ರಗಳಿಂದ ಸಿಂಗರಿಸಲಾಗಿದ್ದ ತೆರೆದ ಚಾವಣಿಯ ಬಸ್ನಲ್ಲಿ ವಿಜಯ ಯಾತ್ರೆ ನಡೆಯಿತು. ಅಪಾರ ಪ್ರಮಾಣದ ಅಭಿಮಾನಿಗಳು ಮಳೆಯ ನಡುವೆಯೂ ತಮ್ಮ ನೆಚ್ಚಿನ ಆಟಗಾರರಿಗೆ ಶುಭಾಶಯ ತಿಳಿಸಿದರು.
ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್, ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಜಸ್ಪ್ರೀತ್ ಬೂಮ್ರಾ ಎಲ್ಲ ಆಟಗಾರರು ಅಭಿಮಾನಿಗಳತ್ತ ವಿಶ್ವಕಪ್ ತೋರಿಸಿ ಸಂಭ್ರಮಿಸಿದರು. ಕೈಬೀಸಿ ಧನ್ಯವಾದ ತಿಳಿಸಿದರು. ಕ್ರಿಕೆಟ್ ಪ್ರೇಮಿಗಳು ಕೂಡ ತ್ರಿವರ್ಣ ಧ್ವಜವನ್ನು ಹಾರಿಸುತ್ತ, ಜಯ ಘೋಷಗಳನ್ನು ಕೂಗಿದರು.
ಜೂನ್ 29ರಂದು ಬಾರ್ಬಡೋಸ್ನಲ್ಲಿ ನಡೆದ ಟಿ–20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 7 ರನ್ಗಳಿಂದ ಮಣಿಸಿದ್ದ ಭಾರತ ತಂಡ ಟ್ರೋಫಿ ಎತ್ತಿಹಿಡಿದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.