ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಎಂಎಸ್‌ಪಿ ಸಮಿತಿ ವರದಿ ಬಿಡುಗಡೆ ಶೀಘ್ರ: ಕೇಂದ್ರ ಕೃಷಿ ಸಚಿವ ಚೌಹಾಣ್‌

Published : 19 ಸೆಪ್ಟೆಂಬರ್ 2024, 14:43 IST
Last Updated : 19 ಸೆಪ್ಟೆಂಬರ್ 2024, 14:43 IST
ಫಾಲೋ ಮಾಡಿ
Comments

ನವದೆಹಲಿ: ‘ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಯೋಜನೆ ಸುಧಾರಣೆಗೆ ಸಂಬಂಧಿಸಿದಂತೆ ಸರ್ಕಾರ ರಚಿಸಿದ್ದ ಸಮಿತಿಯ ವರದಿಯನ್ನು ಶೀಘ್ರವೇ ಬಿಡುಗಡೆಗೊಳಿಸಲಾಗುವುದು’ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್‌ ಸಿಂಗ್ ಚೌಹಾಣ್‌ ತಿಳಿಸಿದ್ದಾರೆ.

ವಿವಾದಾತ್ಮಕ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ವೇಳೆ ಸಂಯುಕ್ತ ಕಿಸಾನ್‌ ಮೋರ್ಚಾವು, ಎಂಎಸ್‌ಪಿ ಅಗತ್ಯತೆಯನ್ನು ಪ್ರತಿಪಾದಿಸಿತ್ತು. ಈ ಬಗ್ಗೆ ಪರಿಶೀಲಿಸಲು ಸರ್ಕಾರವು 2022ರ ಜುಲೈನಲ್ಲಿ ಸಮಿತಿ ರಚಿಸಿತ್ತು. ಕೇಂದ್ರ ಕೃಷಿ ಸಚಿವಾಲಯದ ಮಾಜಿ ಕಾರ್ಯದರ್ಶಿ ಸಂಜಯ್‌ ಅಗರವಾಲ್ ಸಮಿತಿಯ ಅಧ್ಯಕ್ಷರಾಗಿದ್ದಾರೆ.  

ಮತ್ತಷ್ಟು ಪರಿಣಾಮಕಾರಿಯಾಗಿ ಎಂಎಸ್‌ಪಿ ಜಾರಿ ಮತ್ತು ಪಾರದರ್ಶಕತೆ ಕಾಯ್ದುಕೊಳ್ಳುವುದು, ನೈಸರ್ಗಿಕ ಕೃಷಿಗೆ ಉತ್ತೇಜನ ನೀಡುವುದಕ್ಕೆ ಸಂಬಂಧಿಸಿದಂತೆ ಸಮಿತಿಯು ಸರ್ಕಾರಕ್ಕೆ ಶಿಫಾರಸು ಮಾಡಲಿದೆ.

ಕೇಂದ್ರ ಸರ್ಕಾರದ 100 ದಿನಗಳ ಕಾರ್ಯಕ್ರಮದ ಅಂಗವಾಗಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಶಿವರಾಜ್‌ ಸಿಂಗ್‌ ಅವರು, ‘ಸಮಿತಿಯ ಸದಸ್ಯರೊಂದಿಗೆ ನಿರಂತರ ಸಂಪರ್ಕ ಹೊಂದಲಾಗಿದೆ’ ಎಂದರು.

‘ಅಕ್ಟೋಬರ್‌ನಿಂದ ದೂರದರ್ಶನ ಹಾಗೂ ಆಲ್‌ ಇಂಡಿಯಾ ರೇಡಿಯೊದಲ್ಲಿ ‘ಅಧುನಿಕ್ ಕೃಷಿ ಚೌಪಾಲ್’ ಕಾರ್ಯಕ್ರಮ ಪ್ರಸಾರವಾಗಲಿದೆ. ಕೃಷಿಯಲ್ಲಿನ ಹೊಸ ಆವಿಷ್ಕಾರಗಳ ಬಗ್ಗೆ ವಿಜ್ಞಾನಿಗಳು ರೈತರೊಂದಿಗೆ ಮಾಹಿತಿ ಹಂಚಿಕೊಳ್ಳಲಿದ್ದಾರೆ’ ಎಂದು ವಿವರಿಸಿದರು.

‘ಕುಲಾಂತರಿ ತಳಿ ಹತ್ತಿ ವಿಚಾರವು ಸೂಕ್ಷ್ಮ ವಿಷಯವಾಗಿದೆ. ಸಮಗ್ರವಾಗಿ ಚರ್ಚಿಸಿದ ಬಳಿಕ ಕುಲಾಂತರಿ ತಂತ್ರಜ್ಞಾನಕ್ಕೆ ಅನುಮೋದನೆ ನೀಡಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT