ಮೂಡಲಗಿ: ‘ರಾಜ್ಯದಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಶಿಷ್ಯವೇತನ ತಡೆಯಾಗಿರುವುದು ಕೇಂದ್ರ ಸರ್ಕಾರದ ಲೋಪದಿಂದ ಹೊರತು ರಾಜ್ಯ ಸರ್ಕಾರದಿಂದ ಅಲ್ಲ. ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಶಿಷ್ಯವೇತನವನ್ನು ಗ್ಯಾರಂಟಿ ಯೋಜನೆಗೆ ಬಳಸುತ್ತಿರುವುದಾಗಿ ಬಿಜೆಪಿ ಸರ್ಕಾರವು ಜನರಿಗೆ ಸುಳ್ಳು ಹೇಳಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ’ ಎಂದು ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಹೇಳಿದರು.
ಪಟ್ಟಣದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪರಿಶಿಷ್ಟ ಜಾತಿ ವಿದ್ಯಾರ್ಥಿ ವೇತನ ಕುರಿತು ಕೇಂದ್ರಕ್ಕೆ ಪ್ರಸ್ತಾವ ಕಳಿಸಿದ್ದರೂ ಈವರೆಗೆ ಅದರ ಬಗ್ಗೆ ಗಮನ ನೀಡುತ್ತಿಲ್ಲ’ ಎಂದು ಬಿಜೆಪಿ ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
‘ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದುಕೊಂಡಿದೆ. ಐದು ಗ್ಯಾರಂಟಿಗಳನ್ನು ಜಾರಿಗೆ ತಂದು ಎಲ್ಲ ವರ್ಗದ ಜನರಿಗೆ ಅನುಕೂಲ ಮಾಡಿಕೊಟ್ಟಿದೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ಕಾರ ಪತನಗೊಳ್ಳಲು ಸಾಧ್ಯವಿಲ್ಲ’ ಎಂದು ಬಿಜೆಪಿಗೆ ತಿರುಗೇಟು ನೀಡಿದರು.
2014ರಲ್ಲಿ ಮೋದಿ ಅವರು ನೀಡಿದ ಭರವಸೆಗಳನ್ನು ಈಡೇರಿಸಿಲ್ಲ. ಈ ಬಾರಿ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗಲಿದ್ದು, 25 ಗ್ಯಾರಂಟಿಗಳನ್ನು ಚುನಾವಣೆಯಲ್ಲಿ ಘೋಷಣೆ ಮಾಡಿದಂತೆ ಜಾರಿಗೆ ಬರುವುದು ಖಚಿತ ಮತ್ತು ಕೇಂದ್ರದಲ್ಲಿ ಕಾಂಗ್ರೆಸ್ ಬರುವುದು ನಿಶ್ಚಿತ’ ಎಂದರು.
‘ಗೋಕಾಕ ಮತ್ತು ಅರಭಾವಿ ಕ್ಷೇತ್ರಗಳಲ್ಲಿ ಪಕ್ಷಗಳಿಗಿಂತ ವ್ಯಕ್ತಿಗತ ರಾಜಕಾರಣ ಇದ್ದರೂ ಕಾಂಗ್ರೆಸ್ ಸರ್ಕಾರವು ನೀಡಿರುವ ಐದು ಗ್ಯಾರಂಟಿಗಳು ಪ್ರಭಾವ ಬೀರಿವೆ. ಜನರೂ ಬದಲಾವಣೆ ಬಯಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ ಯುವಕರಾಗಿದ್ದು ಅವರ ಆಯ್ಕೆ ನಿಶ್ಚಿತ’ ಎಂದು ಹೇಳಿದರು.
ಕಾಂಗ್ರೆಸ್ ಮುಖಂಡರಾದ ಬಿಬಿಎಂಪಿ ಸದಸ್ಯ ಲಗ್ಗೇರ ನಾರಾಯಣಸ್ವಾಮಿ, ಅರವಿಂದ ದಳವಾಯಿ, ಎಸ್.ಆರ್. ಸೋನವಾಲಕರ, ಬಿ.ಬಿ. ಹಂದಿಗುಂದ, ವಿ.ಪಿ. ನಾಯಕ, ಅನಿಲ ದಳವಾಯಿ, ಸುಭಾಷ ಪೂಜೇರಿ, ಸಲೀಮ ಇನಾಮ್ದಾರ ಸೇರಿದಂತೆ ಅನೇಕರು ಇದ್ದರು.