ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾನಿಗಳಿಂದ ಕೆಎಲ್‍ಇ ಸಂಸ್ಥೆ ಬೆಳೆದಿದೆ, ಕಾಂಗ್ರೆಸ್‍ನಿಂದ ಅಲ್ಲ: ಪ್ರಭಾಕರ ಕೋರೆ

Published 3 ಮೇ 2024, 14:06 IST
Last Updated 3 ಮೇ 2024, 14:06 IST
ಅಕ್ಷರ ಗಾತ್ರ

ಬೆಳಗಾವಿ: ‘108 ವರ್ಷಗಳ ಇತಿಹಾಸ ಹೊಂದಿದ ಕೆಎಲ್‍ಇ ಸಂಸ್ಥೆ ದಾನಿಗಳು, ಮಹಾದಾನಿಗಳಿಂದ ಬೆಳೆದುನಿಂತಿದೆ. ಆದರೆ, ಕೆಎಲ್‍ಇ ಸಂಸ್ಥೆಯ ಯಾವುದೇ ಇತಿಹಾಸ ಅರಿಯದೆ ಬಾಲಿಶವಾದ ಹೇಳಿಕೆಗಳನ್ನು ಕೊಡುವುದು ಉಚಿತವಾದದ್ದಲ್ಲ’ ಎಂದು ಕೆಎಲ್‍ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಅವರು, ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರಿಗೆ ಚಾಟಿ ಬೀಸಿದ್ದಾರೆ.

‘ಕೆಎಲ್‍ಇ ವಿಶ್ವವಿದ್ಯಾಲಯದಲ್ಲಿ ಬೆಳಗಾವಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಲಕ್ಷ್ಮಿ ಹೆಬ್ಬಾಳಕರ ಅವರು, ಕಾಂಗ್ರೆಸ್ ಸರ್ಕಾರ ₹1ಕ್ಕೆ ಜಮೀನು ನೀಡಿದ ಫಲವಾಗಿ ಕೆಎಲ್‍ಇ ಆಸ್ಪತ್ರೆ ಹಾಗೂ ವಿಶ್ವವಿದ್ಯಾಲಯ ಬೆಳೆದಿದೆ ಎಂದು ತಪ್ಪು ಮಾಹಿತಿ ನೀಡಿರುವುದು ಖಂಡನೀಯ’ ಎಂದಿದ್ದಾರೆ.

‘ದಾನಿಗಳು, ಮಹಾದಾನಿಗಳು, ಸಿರಸಂಗಿ ಲಿಂಗರಾಜರು, ರಾಜಾ ಲಖಮಗೌಡರು, ಭೂಮರಡ್ಡಿ ಬಸಪ್ಪನವರಂಥ ತ್ಯಾಗವೀರರಿಂದ ಕೆಎಲ್‍ಇ ಬೆಳೆದುನಿಂತಿದೆ. ಇಲ್ಲಿ ಕಾಂಗ್ರೆಸ್, ಬಿಜೆಪಿ ಪ್ರಶ್ನೆ ಉದ್ಭವಿಸಬಾರದು. ಕೆಎಲ್‍ಇ ಸಂಸ್ಥೆ ಸ್ವಂತ ಹಣದಲ್ಲಿ ಆಸ್ತಿ ಖರೀದಿಸಿದೆ. ಆಯಾ ಕಾಲಘಟ್ಟದಲ್ಲಿದ್ದ ಪಕ್ಷಗಳಿಂದ ಸಹಾಯ, ಸಹಕಾರ ಪಡೆದಿದೆ. ಆದರೆ, ಕೇವಲ ಕಾಂಗ್ರೆಸ್‍ನಿಂದ ಕೆಎಲ್‍ಇ ತನ್ನ ಆಸ್ಪತ್ರೆ ನಿರ್ಮಿಸಿದೆ. ವಿ.ವಿಗಳನ್ನು ಸ್ಥಾಪಿಸಿದೆ ಎಂಬರ್ಥದ ಹೇಳಿಕೆಗಳು ಮಾಧ್ಯಮಗಳಲ್ಲಿ ಪ್ರಕಟವಾಗಿರುವುದು ದುರದೃಷ್ಟಕರ. ಕೆಎಲ್‍ಇ ಇತಿಹಾಸ ಸರಿಯಾಗಿ ಅರ್ಥೈಸಿಕೊಳ್ಳದೆ, ಈ ರೀತಿ ಹೇಳಿರುವದನ್ನು ಪ್ರತಿಭಟಿಸುತ್ತೇನೆ’ ಎಂದು ಹೇಳಿದ್ದಾರೆ.

‘ಕೆಎಲ್‍ಇ ಸಂಸ್ಥೆಯ ಆಡಳಿತ ಮಂಡಳಿಯಲ್ಲಿ ಎಲ್ಲ ರಾಜಕೀಯ ಪಕ್ಷಗಳಿಗೆ ಸೇರಿದವರು ಇದ್ದಾರೆ. ನಾವು ಯಾವುದೇ ಒಂದೇ ಪಕ್ಷಕ್ಕೆ ಅಂಟಿಕೊಂಡಿಲ್ಲ. ಶಿಕ್ಷಣ ಸಂಸ್ಥೆಯಲ್ಲಿ ನಾವು ರಾಜಕೀಯ ತರುವುದಿಲ್ಲ. ಅದರ ಬೆಳವಣಿಗೆಗಾಗಿ ಸರ್ವರ ಸಹಕಾರ ಪಡೆಯುತ್ತೇವೆ. ಲಕ್ಷ್ಮಿ ಹೆಬ್ಬಾಳಕರ ಈ ನೆಲದ ಶಿಕ್ಷಣ ಸಂಸ್ಥೆಗಳ ನೈಜ ಇತಿಹಾಸ ಅರಿತಂತೆ ಕಾಣುವುದಿಲ್ಲ. ಮತಬೇಟೆಗಾಗಿ ಸುಳ್ಳು ಹೇಳಿಕೆಗಳನ್ನು ನೀಡಿ, ಜನರ ಭಾವನೆಗಳೊಂದಿಗೆ ಆಟವಾಡುವುದು ಕಾಂಗ್ರೆಸ್‍ಗೆ ತರವಲ್ಲ. ಹೆಬ್ಬಾಳಕರ ತಮ್ಮ ಹೇಳಿಕೆ ಹಿಂಪಡೆದು, ಬಹಿರಂಗವಾಗಿ ಕ್ಷಮೆಯಾಚಿಸಬೇಕು’ ಎಂದು ಕೋರೆ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT