‘ಜೆಡಿಎಸ್ ಶಾಸಕರಿಗೆ ಸಿಎಂ ಡಿಸಿಎಂ ಆಮಿಷ’
‘ಜೆಡಿಎಸ್ ಪಕ್ಷವನ್ನು ಮುಗಿಸುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಮ್ಮ ಪಕ್ಷದ ಶಾಸಕರಿಗೆ ಆಮಿಷ ಒಡ್ಡುತ್ತಿದ್ದಾರೆ’ ಎಂದು ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದರು. ‘ದೇವೇಗೌಡರ ಬಗ್ಗೆ ಮುಖ್ಯಮಂತ್ರಿ ಮಾತಾಡಿದ್ದಾರೆ. ಅವರು ಏನೇನು ಮಾಡಿದ್ದಾರೆ ಎಂಬುದು ಗೊತ್ತಿದೆ. ಕ್ಷೇತ್ರದ ಕೆಲಸಕ್ಕೆ ಭೇಟಿಯಾಗುವ ಜೆಡಿಎಸ್ ಶಾಸಕರಿಗೆ ಕಾಂಗ್ರೆಸ್ ಪಕ್ಷ ಸೇರುವಂತೆ ಆಮಿಷ ಒಡ್ಡುತ್ತಿದ್ದಾರೆ’ ಎಂದರು. ‘ರಾಜ್ಯದಲ್ಲಿ ಈಗ ನಡೆಯುತ್ತಿರುವ ದಬ್ಬಾಳಿಕೆ ಅಕ್ರಮಗಳಿಗೆ ಬೇಸತ್ತು ಜನರೇ ಅವರನ್ನು ಸಮಾಪ್ತಿ ಮಾಡುತ್ತಾರೆ ಎಂದು ದೇವೇಗೌಡರು ಹೇಳಿದ್ದಾರೆ. ನಮ್ಮದು 135 ವರ್ಷಗಳ ಇತಿಹಾಸ ಇರುವ ಪಕ್ಷ ಎಂದು ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಗಾಂಧೀಜಿ ಇದ್ದಾಗ ಸ್ವಾತಂತ್ರ್ಯ ಹೋರಾಟದ ಇತಿಹಾಸ ಬೇರೆ. ಮನೆ ಆಸ್ತಿ ಮಾರಾಟ ಮಾಡಿ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದರು. ಇವರು ಈಸ್ಟ್ ಇಂಡಿಯಾ ಕಂಪನಿ ಮಾಡಿದ್ದ ದರೋಡೆಯನ್ನು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ’ ಎಂದು ವಾಗ್ದಾಳಿ ನಡೆಸಿದರು.