ಬೆಂಗಳೂರು: ಮುಖ್ಯಮಂತ್ರಿ ಸ್ಥಾನವನ್ನು ಅವರಿಗೆ ಕೊಡಿ, ಇವರಿಗೆ ಕೊಡಿ ಎನ್ನಲು ಅದೇನು ಕಡ್ಲೇಪುರಿನಾ’ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಪ್ರಶ್ನಿಸಿದರು.
ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ‘ಪ್ರಜಾಪ್ರಭುತ್ವದಲ್ಲಿ ಬಹುಮತವೇ ಮುಖ್ಯ, ಸಿದ್ದರಾಮಯ್ಯ ಅವರು ಹೆಚ್ಚು ಶಾಸಕರ ಬೆಂಬಲ ಪಡೆದು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಶಾಸಕರ ಅಭಿಪ್ರಾಯಕ್ಕೆ ಮನ್ನಣೆ ನೀಡಿ ಅವರನ್ನು ಮುಖ್ಯಮಂತ್ರಿಯಾಗಿ ಹೈಕಮಾಂಡ್ ಘೋಷಿಸಿದೆ’ ಎಂದರು.
‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮುಖ್ಯಮಂತ್ರಿ ಆಯ್ಕೆ ನನ್ನ ಕೈಯಲ್ಲೂ ಇಲ್ಲ. ಧರ್ಮಗುರುಗಳ ಕೈಯಲ್ಲೂ ಇಲ್ಲ. ಸಿದ್ದರಾಮಯ್ಯ ಅವರನ್ನು ನೇರವಾಗಿ ಮುಖ್ಯಮಂತ್ರಿಯಾಗಿ ಹೈಕಮಾಂಡ್ ಆಯ್ಕೆ ಮಾಡಿಲ್ಲ’ ಎಂದೂ ಹೇಳಿದರು.