‘ಆಗಸ್ಟ್ 22ರಂದು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ವಿಶೇಷ ಬ್ಯಾರಕ್ ಎದುರು ಟೀ–ಪಾರ್ಟಿ ಆಯೋಜಿಸಿದ್ದು ವಿಲ್ಸನ್ ಗಾರ್ಡನ್ ನಾಗ. ಅಂದು ಸಂಜೆ ನಾನಿದ್ದ ಬ್ಯಾರಕ್ಗೆ ವ್ಯಕ್ತಿಯೊಬ್ಬ ಬಂದು, ‘ನಮ್ಮ ಬಾಸ್ ನಾಗ ಬರಲು ಹೇಳಿದ್ದಾರೆ’ ಎಂದರು. ನಾನು ಎದ್ದು ಹೋಗಿದ್ದೆ. ಅವರು ಕುರ್ಚಿಯಲ್ಲಿ ಕುಳಿತುಕೊಳ್ಳಲು ಹೇಳಿ ಸಿಗರೇಟ್, ಟೀ ನೀಡಿದ್ದರು. ನಾನು ಯಾರಿಗೂ ಸಿಗರೇಟ್, ಟೀ ಬೇಕೆಂದು ಕೇಳಿಲ್ಲ’ ಎಂಬುದಾಗಿ ರೇಣುಕಸ್ವಾಮಿ ಕೊಲೆ ಪ್ರಕರಣ ಆರೋಪಿ ದರ್ಶನ್ ಅವರು ಪೊಲೀಸರ ವಿಚಾರಣೆ ವೇಳೆ ಹೇಳಿಕೆ ನೀಡಿದ್ದರು. ಆ ಹೇಳಿಕೆ ಆಧರಿಸಿ ಇಬ್ಬರನ್ನೂ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ವಿಶೇಷ ಆತಿಥ್ಯದ ಬಳಿಕ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿತ್ತು.