ಕೊಪ್ಪಳ: ರಾಜ್ಯದ ಎಲ್ಲ ಸಮುದಾಯಗಳ ಜನರ ಆರ್ಥಿಕ, ಶೈಕ್ಷಣಿಕ ಮತ್ತು ಸಾಮಾಜಿಕ ಸ್ಥಿತಿಗತಿ ಬಗ್ಗೆ ಕ್ರಮ ತಿಳಿಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದು ವಾರದ ಒಳಗೆ ಹಿಂದುಳಿದ ವರ್ಗಗಳ ಆಯೋಗದ ವರದಿ ಬಹಿರಂಗಗೊಳಿಸಬೇಕು, ನವೆಂಬರ್ ಒಂದರಿಂದ ಅನುಷ್ಠಾನಗೊಳಿಸಬೇಕು ಎಂದು ಸಿ.ಎಂ. ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಆಗ್ರಹಿಸಿದರು.
ತಾಲ್ಲೂಕಿನ ಗಿಣಗೇರಾದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಆಯೋಗದ ವರದಿ ಅನುಷ್ಠಾನಕ್ಕೆ ತರುವುದರಿಂದ ಸಾಮಾಜಿಕ ನ್ಯಾಯ ಸಿಗಲಿದೆ. ಮುಂದಿನ ವಾರದೊಳಗೆ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಬೇಕು. ಸಿಂಧನೂರಿನಲ್ಲಿ ಇಂದು ನಡೆಯುವ ಕಾರ್ಯಕ್ರಮದಲ್ಲಿ ಇದನ್ನು ಘೋಷಣೆ ಮಾಡಬೇಕು ಎಂದರು.
2014ರಲ್ಲಿ ನಮ್ಮ ಸರ್ಕಾರವಿದ್ದಾಗ ಆಯೋಗ ರಚಿಸಲಾಗಿತ್ತು. ಬಜೆಟ್ ನಲ್ಲಿ ₹165 ಕೋಟಿ ಮೀಸಲಿಟ್ಟು, ಕಾಂತರಾಜ್ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ರಚಿಸಲಾಗಿತ್ತು. ಈ ಆಯೋಗದ ವರದಿಯು ಅಪೂರ್ಣವಾಗಿತ್ತು. ಜಯಪ್ರಕಾಶ ಹೆಗ್ಡೆ ಫೆಬ್ರುವರಿಯಲ್ಲಿ ಸಲ್ಲಿಸಿರುವ ವರದಿ ಅನುಷ್ಠಾನ ಮಾಡಬೇಕು ಎಂದರು.
ಈ ವಿಷಯದ ಕುರಿತು ಸಿದ್ದರಾಮಯ್ಯ ಅವರೊಂದಿಗೂ ಮಾತನಾಡಿದ್ದೇನೆ.
ಆದರೆ, ಇದು ಜಾತಿಗಣತಿ ಅಲ್ಲ. ಆಯೋಗದ ವರದಿ ಅನುಷ್ಠಾನಕ್ಕೆ ತಂದರೆ ಒಳಮೀಸಲಾತಿ ಕುರಿತು ಸ್ಪಷ್ಟ ತೀರ್ಮಾನ ಕೈಗೊಳ್ಳಲು ಸಾಧ್ಯವಾಗುತ್ತದೆ ಎಂದರು.