ಶನಿವಾರ, 21 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹೆಣ್ಣು ಭ್ರೂಣ ಹತ್ಯೆ: ಪ್ರಮುಖ ಆರೋಪಿಗಳಾದ ಅಭಿಷೇಕ್‌, ವೀರೇಶ್ ಬಂಧನ

ಆರೋಪಿಗಳ ಸಂಖ್ಯೆ 30ಕ್ಕೆ ಏರಿಕೆ; ಸ್ಕ್ಯಾನಿಂಗ್‌ ಯಂತ್ರ, ಕಾರು, ಮೊಬೈಲ್‌ ವಶ
Published : 4 ಸೆಪ್ಟೆಂಬರ್ 2024, 14:14 IST
Last Updated : 4 ಸೆಪ್ಟೆಂಬರ್ 2024, 14:14 IST
ಫಾಲೋ ಮಾಡಿ
Comments

ಮಂಡ್ಯ: ಹೆಣ್ಣು ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳಾದ ಪಾಂಡವಪುರ ತಾಲ್ಲೂಕಿನ ಎಂ.ಶೆಟ್ಟಹಳ್ಳಿಯ ಅಭಿಷೇಕ್‌ ಮತ್ತು ದಾವಣಗೆರೆ ಜಿಲ್ಲೆಯ ಚನ್ನಗಿರಿಯ ವೀರೇಶ್‌ ಸೇರಿದಂತೆ ಒಟ್ಟು 12 ಆರೋಪಿಗಳನ್ನು ಬುಧವಾರ ಬಂಧಿಸುವಲ್ಲಿ ಮಂಡ್ಯ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.

ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಹುಣ್ಣನದೊಡ್ಡಿಯ ಕುಮಾರ್‌, ಪಾಂಡವಪುರದ ಮೀನಾ, ಚಿನಕುರಳಿ ಗ್ರಾಮದ ರತ್ನಮ್ಮ, ಕಾಳೇನಹಳ್ಳಿಯ ಮಲ್ಲಿಕಾರ್ಜುನ, ಮೈಸೂರು ಜಿಲ್ಲೆಯ ಬೆಟ್ಟದಪುರದ ಪುಟ್ಟರಾಜು ಮತ್ತು ಸೋಮಶೇಖರ್‌, ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಬೈರಾಪಟ್ಟಣದ ಶಾರದಮ್ಮ ಮತ್ತು ದಾಸೇಗೌಡ, ಕಾಳೇನಹಳ್ಳಿಯ ಲ್ಯಾಬ್‌ ಸತ್ಯ, ಬೆಂಗಳೂರು ನಗರ ರಾಜಾಜಿನಗರದ ಪ್ರೇಮಾ ಬಂಧಿತರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ, ‘ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಎರಡು ಸ್ಕ್ಯಾನಿಂಗ್‌ ಉಪಕರಣಗಳು, ಮೂರು ಕಾರು, ಮೂರು ಮೊಬೈಲ್‌ ಸೇರಿದಂತೆ ಒಟ್ಟು ₹23 ಲಕ್ಷ ಮೌಲ್ಯದ ಸಾಮಗ್ರಿ ವಶಪಡಿಸಿಕೊಳ್ಳಲಾಗಿದೆ’ ಎಂದು ತಿಳಿಸಿದರು.

‘ಹೆಣ್ಣುಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆಯ ಐದು ಪ್ರಕರಣಗಳಿಗೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 30 ಆರೋಪಿಗಳನ್ನು ಬಂಧಿಸಿದ್ದೇವೆ. 3–4 ವರ್ಷಗಳಿಂದ ಸಕ್ರಿಯವಾಗಿದ್ದ ಈ ಜಾಲದಲ್ಲಿ ಇನ್ನೂ 10ರಿಂದ 15 ಆರೋಪಿಗಳು ಇರುವುದು ತನಿಖೆಯಲ್ಲಿ ಮೇಲ್ನೋಟಕ್ಕೆ ಕಂಡುಬಂದಿದೆ’ ಎಂದು ಹೇಳಿದರು.

ತಲೆಮರೆಸಿಕೊಂಡ ಆರೋಪಿಗಳು:

ಪಾಂಡವಪುರದ ವಸತಿ ಗೃಹದಲ್ಲಿ ನಡೆದ ಹೆಣ್ಣುಭ್ರೂಣ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 19 ಆರೋಪಿಗಳಲ್ಲಿ 12 ಮಂದಿಯನ್ನು ಬಂಧಿಸಿದ್ದು, 7 ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ. ಮೇಲುಕೋಟೆ ಠಾಣೆಯ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಆರೋಪಿಗಳಲ್ಲಿ ಮೂವರನ್ನು ಬಂಧಿಸಲಾಗಿದೆ. ನಾಲ್ವರು ತಲೆಮರೆಸಿಕೊಂಡಿದ್ದಾರೆ ಎಂದರು.

ನಾಗಮಂಗಲ ತಾಲ್ಲೂಕಿನ ಬೆಳ್ಳೂರು ಕ್ರಾಸ್‌ನಲ್ಲಿ ಈಚೆಗೆ ನಡೆದ ‘ಡೆಕಾಯ್‌’ ಕಾರ್ಯಾಚರಣೆಗೆ ಸಂಬಂಧಿಸಿದ ಪ್ರಕರಣದಲ್ಲಿ ನಾಲ್ವರಲ್ಲಿ ಮೂವರನ್ನು ಬಂಧಿಸಲಾಗಿದೆ. ಇದೇ ರೀತಿ ಮೈಸೂರು ನಗರದ ಉದಯಗಿರಿ ಪೊಲೀಸ್‌ ಠಾಣೆ ಮತ್ತು ಬೆಂಗಳೂರು ನಗರದ ಬೈಯಪ್ಪನಹಳ್ಳಿ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ ಎಂದು ಮಾಹಿತಿ ನೀಡಿದರು.

7 ತಂಡಗಳ ರಚನೆ:

ಪ್ರಕರಣದ ಪ್ರಮುಖ ಆರೋಪಿಗಳಾದ ಅಭಿಷೇಕ್‌ ಮತ್ತು ವೀರೇಶ್‌ ಈ ಇಬ್ಬರೂ ಹೆಣ್ಣುಭ್ರೂಣ ಲಿಂಗ ಪತ್ತೆಗಾಗಿ ಸ್ಕ್ಯಾನಿಂಗ್‌ ಮಾಡುತ್ತಿದ್ದರು. ಏಜೆಂಟ್‌ಗಳಾದ ಆಶಾ ಕಾರ್ಯಕರ್ತೆಯರು, ಖಾಸಗಿ ಲ್ಯಾಬ್‌ ಟೆಕ್ನಿಷಿಯನ್‌ಗಳ ಮೂಲಕ ದಂಧೆ ನಡೆಸುತ್ತಿದ್ದರು. ಇವರನ್ನು ಬಂಧಿಸಲು 7 ವಿಶೇಷ ತಂಡಗಳನ್ನು ರಚಿಸಿದ್ದೆವು ಎಂದರು.

ಆರೋಪಿಗಳು ಮೊಬೈಲ್‌ಗಳನ್ನು ಬಳಸದೆ ಇಂಟರ್‌ನೆಟ್‌ ಮೂಲಕ ಮಾಹಿತಿ ವಿನಿಮಯ ಮಾಡಿಕೊಳ್ಳುತ್ತಿದ್ದ ಕಾರಣ ಇವರನ್ನು ಪತ್ತೆ ಹಚ್ಚುವುದು ಪೊಲೀಸರಿಗೆ ಸವಾಲಾಗಿತ್ತು. ಈ ಪ್ರಕರಣವನ್ನು ಭೇದಿಸಿದ ಪೊಲೀಸ್‌ ತಂಡಕ್ಕೆ ಪ್ರಶಂಸನಾ ಪತ್ರ ಮತ್ತು ನಗದು ಬಹುಮಾನ ನೀಡಲಾಗುವುದು ಎಂದು ಎಸ್ಪಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಎಎಸ್ಪಿಗಳಾದ ತಿಮ್ಮಯ್ಯ ಸಿ.ಇ., ಗಂಗಾಧರಸ್ವಾಮಿ, ಡಿಎಚ್‌ಒ ಡಾ.ಕೆ.ಮೋಹನ್‌ ಇದ್ದರು.

₹1 ಲಕ್ಷದವರೆಗೆ ವಸೂಲಿ

‘ಹೆಣ್ಣು ಭ್ರೂಣ ಲಿಂಗ ಪತ್ತೆ ಮಾಡಿದ ನಂತರ, ಗರ್ಭಿಣಿಗೆ ಮಾತ್ರೆಗಳನ್ನು ಕೊಟ್ಟು ಗರ್ಭಪಾತ ಮಾಡಿಸುತ್ತಿದ್ದರು. ಬಡವರಿಂದ ₹25ರಿಂದ ₹30 ಸಾವಿರ, ಶ್ರೀಮಂತರಿಂದ ₹1 ಲಕ್ಷದವರೆಗೆ ಹಣ ವಸೂಲಿ ಮಾಡಿದ್ದಾರೆ. ಆಸ್ಪತ್ರೆಯ ಕ್ವಾಟ್ರಸ್‌, ತೋಟದಮನೆ, ಕಾರುಗಳಲ್ಲಿ ಹೆಣ್ಣ ಭ್ರೂಣ ಲಿಂಗ ಪತ್ತೆ ಕಾರ್ಯ ನಡೆಸಿದ್ದಾರೆ. ಸುಮಾರು 200ಕ್ಕೂ ಹೆಚ್ಚು ಕೃತ್ಯಗಳನ್ನು ನಡೆಸಿದ್ದಾರೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ’ ಎಂದು ಎಸ್ಪಿ ಮಾಹಿತಿ ನೀಡಿದರು.

ಮಂಡ್ಯ, ಮೈಸೂರು, ಬೆಂಗಳೂರು, ತುಮಕೂರು, ಹಾಸನ, ಚಿಕ್ಕಮಗಳೂರು, ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳ ವ್ಯಾಪ್ತಿಯಲ್ಲಿ ಈ ಜಾಲ ಕಾರ್ಯಾಚರಣೆ ನಡೆಸಿದೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT