ಶ್ರೀರಂಗಪಟ್ಟಣ ಬಳಿ ಕಾವೇರಿ ನದಿಗೆ 1802ರಲ್ಲಿ ಕಟ್ಟಿರುವ ವೆಲ್ಲೆಸ್ಲಿ ಸೇತುವೆಯ ಕೆಳಗೆ ನದಿಯ ನೀರು ಹಾಲ್ನೊರೆಯಂತೆ ಹರಿಯುತ್ತಿರುವುದು
27ಕ್ಕೆ ಕೆಆರ್ಎಸ್ಗೆ ಸಿ.ಎಂ ಬಾಗಿನ
ಕೆಆರ್ಎಸ್ ಅಣೆಕಟ್ಟೆ ಭರ್ತಿಗೆ ಕ್ಷಣಗಣನೆ ಆರಂಭವಾಗಿದ್ದು ಜುಲೈ 27ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ತಿಳಿಸಿದರು. ತಾಲ್ಲೂಕಿನ ಕೆಆರ್ಎಸ್ ಅಣೆಕಟ್ಟೆಗೆ ಅಧಿಕಾರಿಗಳ ಜತೆ ಭಾನುವಾರ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ಬಾಗಿನ ಅರ್ಪಣೆಯ ಸಮಯವನ್ನು ಒಂದೆರಡು ದಿನಗಳಲ್ಲಿ ಅಂತಿಮಗೊಳಿಸಲಾಗುವುದು ಎಂದು ಅವರು ಹೇಳಿದರು. ಜಲಾಶಯದಿಂದ ನದಿಗೆ ಹೆಚ್ಚು ನೀರು ಬಿಡುತ್ತಿರುವುದರಿಂದ ನದಿ ಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಸಚಿವರಾದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಜುಲೈ 22ರಂದು 7.45ಕ್ಕೆ ಕೆಆರ್ಎಸ್ ಅಣೆಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ರಂಗನತಿಟ್ಟು ಪ್ರವೇಶಕ್ಕೆ ನಿರ್ಬಂಧ ಕೆಆರ್ಎಸ್ ಜಲಾಶಯದಿಂದ ಕಾವೇರಿ ನದಿಗೆ 50 ಸಾವಿರ ಕ್ಯುಸೆಕ್ಗೂ ಹೆಚ್ಚು ನೀರು ಬಿಡುತ್ತಿದ್ದು ನದಿಯ ನೀರಿನ ಮಟ್ಟ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಭಾನುವಾರದಿಂದ ಪಕ್ಷಿಧಾಮಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಪಕ್ಷಿಧಾಮದ ಪ್ರವೇಶ ದ್ವಾರದಲ್ಲಿ ಫಲಕವನ್ನೂ ಹಾಕಲಾಗಿದೆ. ಮುಂದಿನ ಆದೇಶದ ವರೆಗೆ ಪಕ್ಷಿಧಾಮಕ್ಕೆ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಮೈಸೂರು ವನ್ಯ ಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎಂ. ಶರಣ ಬಸಪ್ಪ ತಿಳಿಸಿದ್ದಾರೆ. ಪಕ್ಷಿಧಾಮದ ದೋಣಿ ವಿಹಾರ ಕೇಂದ್ರ ಮತ್ತು ಪಾದಚಾರಿ ಮಾರ್ಗಗಳು ಈಗಾಗಲೇ ಜಲಾವೃತವಾಗಿವೆ. ನದಿಯ ನೀರಿನ ಮಟ್ಟ ದಿನದಿಂದ ದಿನಕ್ಕೆ ಏರಿಕೆ ಆಗುತ್ತಿರುವುದರಿಂದ ಮೊಸಳೆಗಳು ನದಿಯಿಂದ ಮೇಲೆ ಬರಲಾರಂಭಿಸಿವೆ. ಹಾಗಾಗಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದು ಪಕ್ಷಿಧಾಮದ ಅಧಿಕಾರಿಗಳು ಹೇಳಿದ್ದಾರೆ.