ಸೋಮವಾರ, 1 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮೈಷುಗರ್‌: ₹52 ಕೋಟಿ ವಿದ್ಯುತ್‌ ಬಿಲ್‌ ಮನ್ನಾಕ್ಕೆ ದಿನೇಶ್ ಗೂಳಿಗೌಡ ಮನವಿ

Published 29 ಜೂನ್ 2024, 13:48 IST
Last Updated 29 ಜೂನ್ 2024, 13:48 IST
ಅಕ್ಷರ ಗಾತ್ರ

ಮಂಡ್ಯ: ಜಿಲ್ಲೆಯ ರೈತರ ಜೀವನಾಡಿ ಮೈಷುಗರ್‌ ಸಕ್ಕರೆ ಕಾರ್ಖಾನೆಯು 25 ವರ್ಷಗಳಿಂದ ವಿದ್ಯುತ್ ಬಿಲ್ ಕಟ್ಟದೆ ತೀವ್ರ ಸಂಕಷ್ಟಕ್ಕೆ ಗುರಿಯಾಗಿದೆ. ಸರ್ಕಾರ ಸಂಪುಟ ಸಭೆ ಕರೆದು ಬಾಕಿ ಇರುವ ವಿದ್ಯುತ್ ಬಿಲ್ ₹52.25 ಕೋಟಿಯನ್ನು ಮನ್ನಾ ಮಾಡಬೇಕು ಎಂದು ವಿಧಾನ ಪರಿಷತ್‌ ಸದಸ್ಯ ದಿನೇಶ್‌ ಗೂಳಿಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇಂಧನ ಸಚಿವ ಕೆ.ಜೆ.ಜಾರ್ಜ್‌ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. 

ವಿದ್ಯುತ್‌ ಬಿಲ್ ಬಾಕಿ ಇರುವ ಬಗ್ಗೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿ ಕಾರ್ಖಾನೆಗೆ ನೋಟಿಸ್ ನೀಡಿದೆ. 7 ದಿನಗಳಲ್ಲಿ ವಿದ್ಯುತ್ ಪಾವತಿ ಮಾಡುವಂತೆ ಜೂನ್ 3ರಂದೇ ನೀಡಿದ ನೋಟಿಸ್‌ನಲ್ಲಿ ತಿಳಿಸಲಾಗಿದೆ. ಆದರೆ, ಕಾರ್ಖಾನೆಯ ಆರ್ಥಿಕ ಪರಿಸ್ಥಿತಿ ಸಮರ್ಪಕವಾಗಿಲ್ಲ. ಕೋಟ್ಯಂತರ ರೂಪಾಯಿ ನಷ್ಟದಲ್ಲಿದೆ. ಅಷ್ಟೊಂದು ಹಣವನ್ನು ವಿದ್ಯುತ್ ಬಿಲ್‌ಗೆ ಪಾವತಿಸಿದರೆ, ಈ ಹಂಗಾಮಿನಲ್ಲಿ ಕಬ್ಬು ನುರಿಸುವುದೇ ಕಷ್ಟವಾಗಬಹುದು. ಕಾರ್ಖಾನೆ ನಂಬಿ ಕಬ್ಬು ಬೆಳೆದಿರುವ ರೈತರಿಗೆ ನಷ್ಟವಾಗಬಹುದು ಎಂದು ಸಮಸ್ಯೆ ತೋಡಿಕೊಂಡಿದ್ದಾರೆ. 

‘ಮೈಷುಗರ್’ ರಾಜ್ಯದ ಏಕೈಕ ಸರ್ಕಾರಿ ಸ್ವಾಮ್ಯದ ಕಾರ್ಖಾನೆಯಾಗಿದೆ. ಹಲವು ವರ್ಷಗಳಿಂದ ಬಂದ್ ಆಗಿದ್ದ ಸಕ್ಕರೆ ಕಾರ್ಖಾನೆಯು ಕಳೆದ ವರ್ಷ ರಾಜ್ಯ ಕಾಂಗ್ರೆಸ್ ಸರ್ಕಾರದ ಮುತುವರ್ಜಿಯಿಂದ ಪುನರಾರಂಭಗೊಂಡಿದೆ. ರಾಜ್ಯ ಸರ್ಕಾರವು ಕಾರ್ಖಾನೆ ಪ್ರಾರಂಭೋತ್ಸವ, ಹಾಗೂ ಗ್ಯಾಂಗ್ ಗಳಿಗೆ ನೀಡಲು ₹15 ಕೋಟಿ, ದುಡಿಯುವ ಬಂಡವಾಳಕ್ಕಾಗಿ (ವರ್ಕಿಂಗ್ ಕ್ಯಾಪಿಟಲ್) ₹35 ಕೋಟಿ ಸೇರಿ ಒಟ್ಟಾರೆ ₹50 ಕೋಟಿಯನ್ನು ಕಾರ್ಖಾನೆಯ ಪುನಶ್ಚೇತನಕ್ಕೆ ನೀಡಿದೆ ಎಂದು ತಿಳಿಸಿದ್ದಾರೆ. 

ಕಳೆದ ವರ್ಷ ಕಾರ್ಖಾನೆಯು ಮಂಡ್ಯದ ರೈತರು ಬೆಳೆದ 2.41 ಲಕ್ಷ ಟನ್ ಕಬ್ಬನ್ನು ನುರಿಸಲಾಗಿತ್ತು. ರೈತರಿಗೆ ಕಬ್ಬಿನ ಹಣ ಪಾವತಿಯಾಗಿದೆ. ಕಾರ್ಖಾನೆಯಿಂದ ರೈತರಿಗೆ ತುಂಬಾ ಅನುಕೂಲವಾಗುತ್ತಿದೆ. ಈ ವರ್ಷ ಕನಿಷ್ಠ 2.50 ಲಕ್ಷ ಟನ್ ಕಬ್ಬನ್ನು ನುರಿಸುವ ಸಂಬಂಧ ರೈತರು ಒಪ್ಪಂದ ಮಾಡಿಕೊಂಡಿದ್ದಾರೆ. ಹೀಗಾಗಿ ಸರ್ಕಾರ ಕೂಡಲೇ ವಿದ್ಯುತ್‌ ಬಿಲ್‌ ಮನ್ನಾ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT