ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಂಡ್ಯ: ಖಾಸಗಿ ಫೈನಾನ್ಸ್‌ ಕಿರುಕುಳ ವಿರೋಧಿಸಿ ಪ್ರತಿಭಟನೆ

Published : 17 ಸೆಪ್ಟೆಂಬರ್ 2024, 19:51 IST
Last Updated : 17 ಸೆಪ್ಟೆಂಬರ್ 2024, 19:51 IST
ಫಾಲೋ ಮಾಡಿ
Comments

ಮಂಡ್ಯ: ‘ಸಾಲ ವಸೂಲಿಗಾಗಿ ಖಾಸಗಿ ಫೈನಾನ್ಸ್‌ ಬ್ಯಾಂಕ್‌ನವರು ಕಿರುಕುಳ ನೀಡುತ್ತಿದ್ದಾರೆ’ ಎಂದು ಆರೋಪಿಸಿ ಮಹಿಳೆಯರು ತಾಲ್ಲೂಕಿನ ಹೊಳಲು ಗ್ರಾಮ ಪಂಚಾಯಿತಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು. ಹಗ್ಗ ಮತ್ತು ಸೀರೆಗಳನ್ನು ಪಂಚಾಯಿತಿ ಎದುರಿನ ಶೆಲ್ಟರ್‌ನಲ್ಲಿ ನೇತು ಹಾಕಿ, ‘ಆತ್ಮಹತ್ಯೆ ಮಾಡಿಕೊಳ್ಳಲು ಅವಕಾಶ ಮಾಡಿಕೊಡಿ’ ಎಂದು ಒತ್ತಾಯಿಸಿದರು.

‘ಯಾವ ಅಧಿಕಾರಿಗೆ ಮನವಿ ಕೊಡಬೇಕೆಂದು ಗೊತ್ತಿಲ್ಲದೆ, ಪಂಚಾಯಿತಿಗೆ ಬಂದಿದ್ದೇವೆ’ ಎಂದು ಲತಾ, ದಿವ್ಯಾ, ರೇಣುಕಾ, ಸೌಮ್ಯಾ, ರುಕ್ಮಿಣಿ ಅಳಲು ತೋಡಿಕೊಂಡರು.

‘ಮೈಕ್ರೋ ಫೈನಾನ್ಸ್‌ ಸೇರಿದಂತೆ ಇಪ್ಪತ್ತಕ್ಕೂ ಹೆಚ್ಚು ಖಾಸಗಿ ಬ್ಯಾಂಕ್‌ನವರು ಕೂಲಿ ಮಾಡುತ್ತಿರುವ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಲಕ್ಷಗಟ್ಟಲೆ ಸಾಲ ನೀಡಿದ್ದು, ಮರುಪಾವತಿಸುವಂತೆ ಒತ್ತಡ ಹೇರುತ್ತಿದ್ದಾರೆ. ಸಾಲ ಪಡೆದಿರುವುದು ನಿಜ. ಆದರೆ ಮರುಪಾವತಿ ಮಾಡಲು ಕಾಲವಕಾಶ ನೀಡಬೇಕು’ ಎಂದು ಕನ್ನಡಸೇನೆ ಸಂಘಟನೆಯ ಜಿಲ್ಲಾ ಸಂಚಾಲಕ ವೇಣುಗೋಪಾಲ್‌ ಒತ್ತಾಯಿಸಿದರು.

‘ಕಂತಿನ ಪ್ರಕಾರ ಸಾಲ ಮರುಪಾವತಿ ಮಾಡಲು ತಪ್ಪಿದರೆ, ಒಂದು ವಾರ, 15 ದಿವಸ ಅಥವಾ ಒಂದು ತಿಂಗಳ ಬಡ್ಡಿಗೆ ಬಡ್ಡಿ ಸೇರಿಸಿ ವಸೂಲು ಮಾಡಲು ನಿಲ್ಲುತ್ತಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ಭಯ ಹುಟ್ಟಿಸುತ್ತಾರೆ, ಅಧಿಕಾರಿಗಳು ಇದಕ್ಕೆ ಕಡಿವಾಣ ಹಾಕಬೇಕು’ ಎಂದು ಕೋರಿದರು.

ಸ್ಥಳಕ್ಕೆ ಬಂದ ಪಂಚಾಯಿತಿ ಉಪಾಧ್ಯಕ್ಷ ನಾರಾಯಣಪ್ಪ, ಸದಸ್ಯರಾದ ರಾಜಶೇಖರ್‌, ಎಚ್‌.ಡಿ.ಪಲ್ಲವಿ ಹಾಗೂ ಪಿಡಿಒ ಸಂತೋಷ್‌, ‘ಮೇಲಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನಿಸಲಾಗುವುದು’ ಎಂದು ಭರವಸೆ ನೀಡಿದ ಬಳಿಕ ಮಹಿಳೆಯರು ಪ್ರತಿಭಟನೆ ಸ್ಥಗಿತಗೊಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT