ಸಿರವಾರ: ‘ಹಿಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಲು ಕಡಲೆ ಮತ್ತು ಜೋಳದ ಬೀಜಗಳನ್ನು ರಿಯಾಯಿತಿ ದರದಲ್ಲಿ ವಿತರಿಸುತ್ತಿದ್ದು, ಅಗತ್ಯ ದಾಖಲೆಗಳನ್ನು ನೀಡಿ ಬೀಜಗಳನ್ನು ಪಡೆಯಿರಿ’ ಎಂದು ಕೃಷಿ ಅಧಿಕಾರಿ ಮಾರುತಿ ನಾಯಕ ರೈತರಿಗೆ ಸಲಹೆ ನೀಡಿದರು.
ತಾಲ್ಲೂಕಿನ ಮಲ್ಲಟ ರೈತ ಸಂಪರ್ಕ ಕೇಂದ್ರದಲ್ಲಿ ಹಿಂಗಾರು ಹಂಗಾಮಿನ ಬೆಳೆ ಬೆಳೆಯಲು ಕಡಲೆ ಮತ್ತು ಜೋಳದ ಬೀಜಗಳನ್ನು ವಿತರಿಸುವ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಿ ಮಾತನಾಡಿದರು.
‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ 90ರಷ್ಟು ರಿಯಾಯಿತಿ ಹಾಗೂ ಸಾಮಾನ್ಯ ರೈತರಿಗೆ ಶೇ 50ರಷ್ಟು ರಿಯಾಯಿತಿಯಲ್ಲಿ ಲಭ್ಯವಿದ್ದು, ರೈತರು ಆಧಾರ್ ಕಾರ್ಡ್, ಪಹಣಿ, ಜಾತಿ ಪ್ರಮಾಣಪತ್ರ ನೀಡಿ ಬಿತ್ತನೆ ಬೀಜಗಳನ್ನು ಪಡೆದುಕೊಳ್ಳಬೇಕು. ಮುಂಗಾರು ಹಂಗಾಮಿನಲ್ಲಿ ತೊಗರಿ ಬೀಜ ಪಡೆದ ರೈತರಿಗೆ ಕಡಲೆ ಮತ್ತು ಜೋಳದ ಬೀಜಗಳನ್ನು ನೀಡುವುದಿಲ್ಲ’ ಎಂದರು.
ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಮಲ್ಲಿಕಾರ್ಜುನ ವಾಲ್ಮೀಕಿ, ಸಹಾಯಕ ತಾಂತ್ರಿಕ ವ್ಯವಸ್ಥಾಪಕ ನಾಗರಾಜ ಕಂಬಾರ, ಲೆಕ್ಕ ಸಹಾಯಕ ಸುನೀಲ ಬಲ್ಲಟಗಿ, ರಾಜಾಭಕ್ಷ, ಬುಡ್ಡಪ್ಪ, ಹನುಮೇಶ ಹಾಗೂ ರೈತರು ಭಾಗವಹಿಸಿದ್ದರು.