ಚನ್ನಪಟ್ಟಣ: ಉಪ ಚುನಾವಣೆ ಎದುರಿಸಲಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ₹500 ಕೋಟಿ ಅನುದಾನ ನೀಡಿದೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣಕ್ಕೆ ಉಪಚುನಾವಣೆ ದಿನಾಂಕ ಘೋಷಣೆಯಾಗುವ ಮೊದಲೇ ಕಾಂಗ್ರೆಸ್ ಜನಸ್ಪಂದನಾ ಸಭೆ, ಜನಸಂಪರ್ಕ ಸಭೆ, ಉದ್ಯೋಗಮೇಳ, ಅಭಿವೃದ್ಧಿ ಕಾಮಗಾರಿ ಹೆಸರಲ್ಲಿ ಚುನಾವಣಾ ಚಟುವಟಿಕೆಗಳನ್ನು ಆರಂಭಿಸಿದೆ.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ₹ 500 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ ಸೆ.20 ರಿಂದ ಮೂರು ದಿನ ತಾಲ್ಲೂಕಿನಲ್ಲಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಸೆ.20 ರಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ, ಸೆ.21 ರಂದು ವಸತಿ ಸಚಿವ ಜಮೀರ್ ಅಹಮದ್ ಅವರಿಂದ ನಿವೇಶನ ರಹಿತರಿಗೆ ಲಾಟರಿ ಮೂಲಕ ನಿವೇಶನ ಮತ್ತು ವಸತಿ ರಹಿತರಿಗೆ ವಸತಿ ಹಂಚಿಕೆ, ಹಕ್ಕು ಪತ್ರ ವಿತರಣೆ, ವಿವಿಧ ಯೋಜನೆಗಳಲ್ಲಿ ಮುಸ್ಲಿಂ ಹಾಗೂ ಇತರ ವರ್ಗದ ಫಲಾನುಭವಿಗಳಿಗೆ ಆಟೊ ಹಾಗೂ ಕಾರು ವಿತರಣೆ ಕಾರ್ಯಕ್ರಮ ನಡೆಯಲಿದೆ.
ಸೆ.22 ರಂದು ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಬೃಹತ್ ಆರೋಗ್ಯ ಹಾಗೂ ಶಸ್ತ್ರಚಿಕಿತ್ಸಾ ಶಿಬಿರ ಆಯೋಜಿಸಿರುವ ಕಾಂಗ್ರೆಸ್ ತೆರೆಮರೆಯಲ್ಲಿ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಲಾರಂಭಿಸಿದೆ.
ಜಿಲ್ಲೆಯ ಮೂರು ಕ್ಷೇತ್ರಗಳಲ್ಲಿ ಮೇಲುಗೈ ಸಾಧಿಸಿರುವ ಕಾಂಗ್ರೆಸ್ ಚನ್ನಪಟ್ಟಣ ಕ್ಷೇತ್ರವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಕಸರತ್ತು ನಡೆಸುತ್ತಿರುವ ಕಾಂಗ್ರೆಸ್ ತನ್ನ ಅಭಿವೃದ್ಧಿ ಜಪವನ್ನು ಮುಂದುವರೆಸುತ್ತಿದೆ.