ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

₹22 ಕೋಟಿಯಲ್ಲಿ 62 ವಸತಿ ಗೃಹ

ಗೃಹ ಸಚಿವ ಪರಮೇಶ್ವರ ಮಾಹಿತಿ
Published 11 ಜುಲೈ 2024, 6:09 IST
Last Updated 11 ಜುಲೈ 2024, 6:09 IST
ಅಕ್ಷರ ಗಾತ್ರ

ತುಮಕೂರು: ನಗರದ ಚಿಲುಮೆ ಸಮುದಾಯ ಭವನದ ಬಳಿ ಪೊಲೀಸ್‌ ಸಿಬ್ಬಂದಿಗಾಗಿ ₹22 ಕೋಟಿ ವೆಚ್ಚದಲ್ಲಿ 62 ವಸತಿ ಗೃಹ ನಿರ್ಮಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ತಿಳಿಸಿದರು.

ನಗರದಲ್ಲಿ ಬುಧವಾರ ಜಯನಗರ ಪೊಲೀಸ್‌ ಠಾಣೆಯ ನೂತನ ಕಟ್ಟಡ ಹಾಗೂ ಪೊಲೀಸ್‌ ವಸತಿ ಗೃಹ ಸಮುಚ್ಚಯದ ಶಿಲಾನ್ಯಾಸ ಸಮಾರಂಭದ ಉದ್ಘಾಟಿಸಿ ಮಾತನಾಡಿದರು.

ರಾಜ್ಯದಲ್ಲಿ ಸೈಬರ್‌ ಅಪರಾಧಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಪ್ರತಿ ವರ್ಷ 25 ಸಾವಿರ ಪ್ರಕರಣಗಳು ವರದಿಯಾಗುತ್ತಿವೆ. ಪೊಲೀಸ್ ಅಧಿಕಾರಿ, ಸಿಬ್ಬಂದಿ ಪರಿಣಾಮಕಾರಿಯಾಗಿ ಸೇವೆ ಸಲ್ಲಿಸಲು ₹150 ಕೋಟಿ ವೆಚ್ಚದಲ್ಲಿ ವಾಹನ ಖರೀದಿಸಿ ನೀಡಲಾಗಿದೆ. ರಾಜ್ಯದಲ್ಲಿ ಮಾದಕವಸ್ತುಗಳ ಸೇವನೆಯಿಂದ ಯುವಕರು ತಮ್ಮ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ಡ್ರಗ್ಸ್‌ ಮಾಫಿಯಾ ನಿಯಂತ್ರಣಕ್ಕೆ ಪೊಲೀಸರು ಪಣ ತೊಡಬೇಕು ಎಂದರು.

ಇತ್ತೀಚೆಗೆ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ 5 ಸಾವಿರ ವಸತಿ ಗೃಹಗಳ ನಿರ್ಮಾಣಕ್ಕೆ ₹1,650 ಕೋಟಿ ಅನುದಾನ ಒದಗಿಸಲು ಮನವಿ ಮಾಡಲಾಗಿದೆ. ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಶೀಘ್ರದಲ್ಲೇ ಅನುದಾನ ಬಿಡುಗಡೆಯಾಗುವ ನಿರೀಕ್ಷೆ ಇದೆ ಎಂದು ಹೇಳಿದರು.

ರಾಜ್ಯ ಪೊಲೀಸ್‌ ವಸತಿ ಮತ್ತು ಮೂಲ ಸೌಕರ್ಯಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ.ರಾಮಚಂದ್ರರಾವ್‌, ‘2025ರ ಜುಲೈ ಒಳಗೆ ವಸತಿ ಸಮುಚ್ಚಯ ಕಾಮಗಾರಿ ಪೂರ್ಣಗೊಳಿಸಲಾಗುವುದು’ ಎಂದು ಭರವಸೆ ನೀಡಿದರು.

ಶಾಸಕ ಜಿ.ಬಿ.ಜ್ಯೋತಿಗಣೇಶ್‌, ಪೊಲೀಸ್ ಮಹಾನಿರೀಕ್ಷಕ ಅಲೋಕ್‌ ಮೋಹನ್‌, ಕೇಂದ್ರ ವಲಯ ಐಜಿಪಿ ಲಾಭುರಾಮ್, ರಾಜ್ಯ ಪೊಲೀಸ್‌ ವಸತಿ ಮತ್ತು ಮೂಲ ಸೌಕರ್ಯಗಳ ಅಭಿವೃದ್ಧಿ ನಿಗಮದ ಮುಖ್ಯ ಎಂಜಿನಿಯರ್‌ ಬಿ.ಎಚ್.ಮಂಜುನಾಥ್, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ವಿ.ಅಶೋಕ್‌ ಇತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT