ಗುಬ್ಬಿ: ತಾಲ್ಲೂಕಿನಲ್ಲಿ ಶುಕ್ರವಾರ ಶಾಂತಿಯುತ ಮತದಾನ ನಡೆಯಿತು. ಸಂಜೆ 6 ಗಂಟೆ ವೇಳೆಗೆ ಶೇ 81ರಷ್ಟು ಮತದಾನವಾಯಿತು.
ಮತದಾರರನ್ನು ಪ್ರೇರೇಪಿಸುವ ಉದ್ದೇಶದಿಂದ ಸಖಿ ಮತ ಕೇಂದ್ರವನ್ನು ಒಳಗೊಂಡಂತೆ ಹಲವು ಮತಗಟ್ಟೆಗಳನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು.
ಹಲವು ಮತಗಟ್ಟೆಗಳಲ್ಲಿ 6 ಗಂಟೆಯ ನಂತರವೂ ಜನರು ಮತಗಟ್ಟೆ ಆವರಣದೊಳಗೆ ಸಾಲುಗಟ್ಟಿ ನಿಂತಿದ್ದರು. ಬೆಳಿಗ್ಗೆ ಮತ್ತು ಮಧ್ಯಾಹ್ನದ ನಂತರ ಬಿಸಿಲು ಕಡಿಮೆ ಇದ್ದುದರಿಂದ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತಚಲಾಯಿಸಿದರು.
ಅಂಕಸಂದ್ರ, ಗಂಗಸಂದ್ರ, ರಾಯವಾರ, ಧೂಳನಹಳ್ಳಿ ಮತಗಟ್ಟೆಗಳಲ್ಲಿ ಮತಯಂತ್ರಗಳಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಅಧಿಕಾರಿಗಳು ತುರ್ತುಕ್ರಮ ಕೈಗೊಂಡು ಸರಾಗ ಮತ ಚಲಾವಣೆಗೆ ಅವಕಾಶ ಮಾಡಿಕೊಟ್ಟರು.
ತುರುವೇಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಚೆಂಗಾವಿ ಗ್ರಾಮದಲ್ಲಿ ಬಿಎಲ್ಒ ನಿರ್ಲಕ್ಷ್ಯದಿಂದ ಮತಗಟ್ಟೆಗೆ ಬರಲು ಸಾಧ್ಯವಾಗದಂತಹ ಪರಿಸ್ಥಿತಿಯಲ್ಲಿ ಇದ್ದ ನಾಲ್ಕು ಮತದಾರರು ಮತದಾನದಿಂದ ವಂಚಿತರಾಗಿದ್ದಾರೆ. ಹಿರಿಯ ಮತದಾರರಿಗೆ ಅಗತ್ಯ ಮಾಹಿತಿಯನ್ನು ಸಂಬಂಧಿಸಿದ ಅಧಿಕಾರಿಗಳು ತಿಳಿಸಿಲ್ಲ ಎಂದು ಆರೋಪಿಸಿ ಗ್ರಾಮಸ್ಥರು ಕೆಲಕಾಲ ಪ್ರತಿಭಟನೆ ನಡೆಸಿದರು.
ಅಧಿಕಾರಿಗಳು ಮತಗಟ್ಟೆ ಕೇಂದ್ರಕ್ಕೆ ಬಂದು ಪರಿಸ್ಥಿತಿಯನ್ನು ತಿಳಿಗೊಳಿಸಿ ಮತದಾನವನ್ನು ಮುಂದುವರಿಸಿದರು.
ಪಟ್ಟಣದ ಮತಗಟ್ಟೆ ಬಳಿ ಭೇಟಿ ನೀಡಿದ್ದ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.
ಕಸಬಾ ಹೋಬಳಿ ದೊಡ್ಡ ನೆಟಕುಂಟೆ ಮತಕಟ್ಟೆಯಲ್ಲಿ ಶಾಸಕ ಎಸ್.ಆರ್. ಶ್ರೀನಿವಾಸ್ ಮತಚಲಾಯಿಸಿದರು.