ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದಿಗಿಳಿದ ಮಠಾಧೀಶರು; ಕ್ಷಮೆ ಕೋರಿದ ಡಿಸಿಪಿ

ಸಾಧು–ಸನ್ಯಾಸಿಗಳ ಸಭೆಗೆ ಅನುಮತಿ ನಿರಾಕರಣೆ; ಪ್ರತಿಭಟನೆ
Published 4 ಮೇ 2024, 22:55 IST
Last Updated 4 ಮೇ 2024, 22:55 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಇಲ್ಲಿನ ರಂಭಾಪುರಿ ಕಲ್ಯಾಣ ಮಂಟಪದಲ್ಲಿ ಶನಿವಾರ ಹಮ್ಮಿಕೊಂಡಿದ್ದ ‘ಗುರುವಿರಕ್ತ ಸಾಧು ಸನ್ಯಾಸಿಗಳ ಚಿಂತನ– ಮಂಥನ ಸಭೆ’ಗೆ ಚುನಾವಣಾ ಆಯೋಗ ಅನುಮತಿ ನೀಡದ ಕಾರಣ ಫಕೀರ ದಿಂಗಾಲೇಶ್ವರ ಸ್ವಾಮೀಜಿ ನೇತೃತ್ವದಲ್ಲಿ 50ಕ್ಕೂ ಹೆಚ್ಚು ಸ್ವಾಮೀಜಿಗಳು ರಾಣಿ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಚುನಾವಣಾ ಆಯೋಗ ಹಾಗೂ ಪೊಲೀಸ್‌ ಇಲಾಖೆ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ‘ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಜೀತದಾಳುಗಳ ಹಾಗೆ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ' ಎಂದು ಆರೋಪಿಸಿದರು. ನಂತರ ಮಹಾನಗರ ಪಾಲಿಕೆ ಆವರಣಕ್ಕೆ ಬಂದು, ಪ್ರತಿಭಟನೆ ಮುಂದುವರಿಸಿದರು.

‘ಚುನಾವಣಾಧಿಕಾರಿಯಾದ ಪಾಲಿಕೆ ಆಯುಕ್ತರು ಸ್ಥಳಕ್ಕೆ ಬಂದು, ಸಭೆಗೆ ಯಾಕೆ ಅನುಮತಿ ನೀಡಿಲ್ಲ ಎಂದು ಸ್ಪಷ್ಟಪಡಿಸಬೇಕು. ‘ಸಭೆಗೆ ಧಕ್ಕೆ ತಂದು, ಮಠಾಧೀಶರನ್ನು ಬಂಧಿಸುವೆ’ ಎಂದು ವಿದ್ಯಾನಗರ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಧರೇಗೌಡ ಪಾಟೀಲ ಸ್ವಾಮೀಜಿಗಳ‌ ಕ್ಷಮೆ ಕೇಳಬೇಕು. ಇಲ್ಲವೇ, ಪಾಲಿಕೆ ಕಚೇರಿಯಲ್ಲಿ ಸಭೆ ನಡೆಸಲು ಅವಕಾಶ ಕಲ್ಪಿಸಿಕೊಡಬೇಕು’ ಎಂದು ಸ್ವಾಮೀಜಿಗಳು ಪಟ್ಟುಹಿಡಿದರು.

ಸ್ಥಳಕ್ಕೆ ಬಂದ ಚುನಾವಣಾಧಿಕಾರಿಯೂ ಆಗಿರುವ ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ, ‘ಅನುಮತಿ ಕೋರಿ ಬರೆದ ಪತ್ರದಲ್ಲಿ ರಾಜಕೀಯ ಸಭೆ ಎಂದು ಬರೆದ ಕಾರಣ ಅನುಮತಿ ನೀಡಿಲ್ಲ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದಾಗ ಧಾರ್ಮಿಕ ಸ್ಥಳದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶವಿಲ್ಲ. ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಿಸಿದ್ದಾರೆ. ರಾಜಕೀಯೇತರ ಸಭೆ ನಡೆಸಲು ಈಗ ಅನುಮತಿ ನೀಡಿದ್ದೇವೆ’ ಎಂದರು.

ಅದಕ್ಕೆ ಸಮಾಧಾನವಾಗದ ಸ್ವಾಮೀಜಿಗಳು, ‘ಮಠಾಧೀಶರನ್ನು ಬೀದಿಗಿಳಿಸಿದ ಇನ್‌ಸ್ಪೆಕ್ಟರ್ ಅವರು ನಮ್ಮ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಮತ್ತೆ ಪ್ರತಿಭಟನೆ ನಡೆಸುತ್ತೇವೆ. ನಾಳೆ ರಾಜ್ಯದಾದ್ಯಂತ ಬಂದ್ ಕರೆ ನೀಡುತ್ತೇವೆ’ ಎಂದರು. ಆಗ ಡಿಸಿಪಿ ರಾಜೀವ್ ಎಂ, ‘ನಿಮ್ಮ ಭಾವನೆಗಳಿಗೆ ಧಕ್ಕೆಯಾಗಿದ್ದರೆ ಕ್ಷಮೆ ಕೇಳುತ್ತೇವೆ. ರಾಜಕೀಯ ಹೊರತುಪಡಿಸಿ ಸಭೆ ನಡೆಸಿ’ ಎಂದರು. ನಂತರ ಮಠಾಧೀಶರು ಪ್ರತಿಭಟನೆ ಹಿಂಪಡೆದರು.

ಕೊಟ್ಟೂರು ಮಹಾಸ್ವಾಮೀಜಿ, ಮಹಾಲಿಂಗ ಸ್ವಾಮೀಜಿ, ವೃಷಭೇಂದ್ರ ಸ್ವಾಮೀಜಿ, ಶಿವಕುಮಾರ ಸ್ವಾಮೀಜಿ, ಶಂಭುಲಿಂಗವಸ್ವಾಮೀಜಿ, ವಾಮದೇವ ಶಿವಾಚಾರ್ಯ ಸ್ವಾಮೀಜಿ, ಮಹಾಂತ ಶಿವಾಚಾರ್ಯ ಸ್ವಾಮೀಜಿ, ಸಿದ್ದಬಸವ ಸ್ವಾಮೀಜಿ, ಬಸವ ಭೂಷಣ ಸ್ವಾಮೀಜಿ, ಸಂಗಮೇಶ ಸ್ವಾಮೀಜಿ, ಶರಣಬಸವ ದೇವರು, ಕುಮಾರ ಸ್ವಾಮೀಜಿ ಸೇರಿ ರಾಜ್ಯದ ವಿವಿಧ ಭಾಗಗಳ ಸ್ವಾಮೀಜಿ ಇದ್ದರು.

ಹುಬ್ಬಳ್ಳಿ ರಂಭಾಪುರಿ ಕಲ್ಯಾಣ ಮಂಟಪದಲ್ಲಿ ಪೊಲೀಸ್‌ ಇನ್‌ಸ್ಪೆಕ್ಟರ್‌ ಧರೇಗೌಡ ಪಾಟೀಲ ಮತ್ತು ಫಕೀರ ದಿಂಗಾಲೇಶ್ವರ ಸ್ವಾಮೀಜಿ ನಡುವೆ ವಾಗ್ವಾದ ನಡೆಯಿತು
ಹುಬ್ಬಳ್ಳಿ ರಂಭಾಪುರಿ ಕಲ್ಯಾಣ ಮಂಟಪದಲ್ಲಿ ಪೊಲೀಸ್‌ ಇನ್‌ಸ್ಪೆಕ್ಟರ್‌ ಧರೇಗೌಡ ಪಾಟೀಲ ಮತ್ತು ಫಕೀರ ದಿಂಗಾಲೇಶ್ವರ ಸ್ವಾಮೀಜಿ ನಡುವೆ ವಾಗ್ವಾದ ನಡೆಯಿತು

ಸಭೆಯಲ್ಲಿ ನಿರ್ಣಯ ಮಂಡನೆ

ಪ್ರತಿಭಟನೆ ಬಳಿಕ ನಡೆದ ಚಿಂತನ–ಮಂಥನ ಸಭೆಯಲ್ಲಿ ಕೆಲ ನಿರ್ಣಯಗಳನ್ನು ಕೈಗೊಳ್ಳಲಾಯಿತು. ನೇಹಾ ಹಿರೇಮಠ ಹತ್ಯೆಗೆ ಖಂಡನೆ ವೀರಶೈವ–ಲಿಂಗಾಯತ ಧಾರ್ಮಿಕ ಪರಂಪರೆಯ ರಕ್ಷಣೆ ವ್ಯಸನಮುಕ್ತ ಸಮಾಜ ನಿರ್ಮಾಣ ಸೇರಿ ಕೆಲ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಇದಕ್ಕೂ ಮುನ್ನ ದಿಂಗಾಲೇಶ್ವರ ಸ್ವಾಮೀಜಿ ಮಾತನಾಡಿ ‘ಸಾಧು ಸಂತರ ಸಭೆ ನಡೆಸಲು ಅನುಮತಿ ನೀಡುವಂತೆ ಶುಕ್ರವಾರವೇ ಚುನಾವಣಾ ಆಯೋಗಕ್ಕೆ ವಿನಂತಿಸಿದ್ದೆವು. ರಾತ್ರಿವರೆಗೂ ಕಾಯಿಸಿ ನಂತರ ಬೆಳಿಗ್ಗೆ ಅನುಮತಿ ನೀಡುವುದಾಗಿ ತಿಳಿಸಿದ್ದರು. ಶನಿವಾರ ಬೆಳಿಗ್ಗೆ 11.30 ಆದರೂ ಅನುಮತಿ ನೀಡದ ಕಾರಣ ನಾವು ಸಭೆ ನಡೆಸಲು ಮುಂದಾದೆವು. ಆಗ ಪೊಲೀಸರು ಮತ್ತು ಚುನಾವಣಾ ಅಧಿಕಾರಿಗಳು ಬಂದು ಸಭೆ ನಡೆಸದಂತೆ ತಡೆದರು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT