ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಡಿ. ದೇವರಾಜ ಅರಸು ಟ್ರಕ್ ಟರ್ಮಿನಲ್‌ ಅಕ್ರಮ ಪ್ರಕರಣ: ಮಾಜಿ MD ಶಂಕರಪ್ಪ ಬಂಧನ

Published : 28 ಮೇ 2024, 0:37 IST
Last Updated : 28 ಮೇ 2024, 3:30 IST
ಫಾಲೋ ಮಾಡಿ
Comments

ಬೆಂಗಳೂರು: ಡಿ. ದೇವರಾಜ ಅರಸು ಟ್ರಕ್ ಟರ್ಮಿನಲ್‌ನಲ್ಲಿ (ಡಿಡಿಯುಟಿಟಿಎಲ್) ನಡೆದಿದೆ ಎನ್ನಲಾದ ₹ 47.10 ಕೋಟಿ ಅಕ್ರಮ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಿಐಡಿ ಅಧಿಕಾರಿಗಳು, ಮಾಜಿ ವ್ಯವಸ್ಥಾಪಕ ನಿರ್ದೇಶಕ (ಎಂ.ಡಿ) ಎಸ್‌. ಶಂಕರಪ್ಪ ಅವರನ್ನು ಸೋಮವಾರ ಬಂಧಿಸಿದ್ದಾರೆ.

‘ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾಣಿಜ್ಯ ಪ್ರಚಾರ ಶಾಖೆಯ ಉಪನಿರ್ದೇಶಕರಾಗಿರುವ ಎಸ್. ಶಂಕರಪ್ಪ, ಈ ಹಿಂದೆ ಡಿಡಿಯುಟಿಟಿಎಲ್‌ನಲ್ಲಿ ಎಂ.ಡಿ ಆಗಿ ಕೆಲಸ ಮಾಡಿದ್ದರು. ಇವರ ಅಧಿಕಾರದ ಅವಧಿಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಪುರಾವೆಗಳು ಲಭ್ಯವಾಗಿದ್ದು, ಇವುಗಳನ್ನು ಆಧರಿಸಿ ಶಂಕರಪ್ಪ ಅವರನ್ನು ಸೆರೆ ಹಿಡಿಯಲಾಗಿದೆ’ ಎಂದು ಸಿಐಡಿ ಹಿರಿಯ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.

‘ಶಂಕರಪ್ಪ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಇವರನ್ನು ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ನ್ಯಾಯಾಧೀಶರನ್ನು ಕೋರಲಾಗುವುದು’ ಎಂದು ಹೇಳಿದರು.

‘ಡಿಡಿಯುಟಿಟಿಎಲ್‌ನಲ್ಲಿ 2021ರಿಂದ 2023ರ ಅವಧಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಬಗ್ಗೆ ಹಾಲಿ‌ ವ್ಯವಸ್ಥಾಪಕ ನಿರ್ದೇಶಕ (ಎಂ.ಡಿ) ಸಿ.ಎನ್. ಶಿವಪ್ರಕಾಶ್ ಅವರು ವಿಲ್ಸನ್ ಗಾರ್ಡನ್ ಠಾಣೆಗೆ ದೂರು ನೀಡಿದ್ದರು. 2023ರ ಸೆಪ್ಟೆಂಬರ್ 23ರಂದು ಎಫ್‌ಐಆರ್ ದಾಖಲಾಗಿತ್ತು. ಈ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿತ್ತು’ ಎಂದು ಅವರು ಮಾಹಿತಿ ನೀಡಿದರು.

ಡಿ. ದೇವರಾಜ ಅರಸು ಟ್ರಕ್ ಟರ್ಮಿನಲ್‌ ಅಕ್ರಮ ಪ್ರಕರಣದಲ್ಲಿ ಆರೋಪಿ ಎಸ್. ಶಂಕರಪ್ಪ ಅವರನ್ನು ಬಂಧಿಸಲಾಗಿದೆ. ತನಿಖೆ ಪೂರ್ಣಗೊಂಡ ಬಳಿಕವೇ ಅಕ್ರಮದ ಬಗ್ಗೆ ನಿಖರ ಮಾಹಿತಿ ಲಭ್ಯವಾಗಲಿದೆ.
ಎಂ.ಎ. ಸಲೀಂ, ಸಿಐಡಿ ಡಿಜಿಪಿ

ನಕಲಿ ದಾಖಲೆ ಸೃಷ್ಟಿ: ‘ಡಿ. ದೇವರಾಜ ಅರಸು ಟ್ರಕ್ ಟರ್ಮಿನಲ್‌ನಲ್ಲಿ 2021ರ ಅಕ್ಟೋಬರ್ 25ರಂದು 194ನೇ ನಿರ್ದೇಶಕ ಮಂಡಳಿ ಸಭೆ ನಡೆಸಲಾಗಿತ್ತು. ಎಂ.ಡಿ ಶಂಕರಪ್ಪ ಹಾಗೂ ಇತರರು ಸಭೆಯಲ್ಲಿ ಪಾಲ್ಗೊಂಡಿದ್ದರು. ಟ್ರಕ್ ಟರ್ಮಿನಲ್‌ಗಳ ದುರಸ್ತಿ ಹಾಗೂ ನಿರ್ವಹಣೆ ಕಾಮಗಾರಿಗಳನ್ನು ತುರ್ತಾಗಿ ತುಂಡು ಗುತ್ತಿಗೆ ನೀಡುವ ಬಗ್ಗೆ ಚರ್ಚಿಸಲಾಗಿತ್ತು’ ಎಂದು ಸಿಐಡಿ ಮೂಲಗಳು ಹೇಳಿವೆ.

‘₹ 10 ಕೋಟಿವರೆಗೆ ತುಂಡು ಗುತ್ತಿಗೆ ನೀಡಲು ಅಕ್ರಮವಾಗಿ ಅನುಮೋದನಾ ನಿರ್ಣಯ ಮಾಡಲಾಗಿತ್ತು. ಕಾಮಗಾರಿ ನಡೆಯದಿದ್ದರೂ ನಕಲಿ ದಾಖಲೆಗಳನ್ನು ಸೃಷ್ಟಿಸಿ ಹಣ ಪಡೆಯಲಾಗಿತ್ತು’ ಎಂದು ತಿಳಿಸಿವೆ.

ಕಚೇರಿ, ಮನೆಗಳ ಮೇಲೆ ದಾಳಿ: ‘ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿಡಿಯುಟಿಟಿಎಲ್‌ ಕಚೇರಿ ಹಾಗೂ ಹಲವರ ಮನೆಗಳ ಮೇಲೆ ಇತ್ತೀಚೆಗೆ ದಾಳಿ ಮಾಡಲಾಗಿತ್ತು. 600ಕ್ಕೂ ಹೆಚ್ಚು ದಾಖಲೆಗಳನ್ನು ಜಪ್ತಿ, ಪರಿಶೀಲನೆ ನಡೆಸಲಾಗಿತ್ತು’ ಎಂದು ಸಿಐಡಿ ಮೂಲಗಳು ಹೇಳಿವೆ.

‘ವಿಲ್ಸನ್ ಗಾರ್ಡನ್ ಠಾಣೆಗೆ ದೂರು ನೀಡಿದ್ದ ಹಾಲಿ ಎಂ.ಡಿ ಸಿ.ಎನ್. ಶಿವಪ್ರಕಾಶ್, ₹ 47.10 ಕೋಟಿ ಅಕ್ರಮ ನಡೆದಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಆದರೆ, ಅದಕ್ಕೂ ಹೆಚ್ಚಿನ ಪ್ರಮಾಣದಲ್ಲಿ ಅಕ್ರಮ ನಡೆದಿರುವ ಮಾಹಿತಿ ಇದೆ. ಎಂ.ಡಿ ಹಾಗೂ ಇತರರು ಅಕ್ರಮದಲ್ಲಿ ಭಾಗಿಯಾಗಿರುವ ಶಂಕೆಯಿದ್ದು, ತನಿಖೆ ಮುಂದುವರಿಸಲಾಗಿದೆ’ ಎಂದು ತಿಳಿಸಿವೆ.

ನಿರೀಕ್ಷಣಾ ಜಾಮೀನಿಗೆ ಅರ್ಜಿ: ಬಂಧನ ಭೀತಿಯಲ್ಲಿದ್ದ ಎಸ್. ಶಂಕರಪ್ಪ ಅವರು ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಇತ್ತೀಚೆಗಷ್ಟೇ ಅರ್ಜಿ ಸಲ್ಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT