ಪ್ರತಿದಿನ ಯೋಗ ಅಭ್ಯಾಸ ಮಾಡುವುದರಿಂದ ಯಾವುದೇ ಸಮಸ್ಯೆಗಳು ಇಲ್ಲದೆ ನೂರು ವರ್ಷ ಬದುಕಬಹುದು ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿದ್ದಾರೆ.
ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ಮಧ್ಯಪ್ರದೇಶವೂ ಸೇರಿದಂತೆ ವಿಶ್ವದಾದ್ಯಂತ ಜನರು ಯೋಗ ಅಭ್ಯಾಸ ನಡೆಸಿದ್ದಾರೆ. 'ಯೋಗ ತನಗಾಗಿ ಮತ್ತು ಸಮಾಜಕ್ಕಾಗಿ' ಎಂಬುದು ಈ ಬಾರಿಯ ಥೀಮ್ (ವಸ್ತು ವಿಷಯ) ಆಗಿದೆ.
ಭೋಪಾಲ್ನಲ್ಲಿ ಸರ್ಕಾರದ ವತಿಯಿಂದ ಲಾಲ್ ಪರೇಡ್ ಮೈದಾನದಲ್ಲಿ ನಡೆಯಬೇಕಿದ್ದ ಕಾರ್ಯಕ್ರಮಕ್ಕೆ ಮಳೆ ಅಡ್ಡಿಪಡಿಸಿತು. ಹೀಗಾಗಿ, ಮುಖ್ಯಮಂತ್ರಿಯವರ ಅಧಿಕೃತ ನಿವಾಸದಲ್ಲಿರುವ ಸಭಾಂಗಣದಲ್ಲಿ ಯೋಗ ದಿನ ಆಚರಿಸಲಾಯಿತು. ಯಾದವ್, ವಿದ್ಯಾರ್ಥಿಗಳು, ಸಾರ್ವಜನಿಕರು, ಅಧಿಕಾರಿಗಳು ಸೇರಿದಂತೆ ಸಾಕಷ್ಟು ಜನರು ಭಾಗವಹಿಸಿದರು.
ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ರಾಮನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, ನೂರಾರು ಮಂದಿ ಸಾಮೂಹಿಕವಾಗಿ ಯೋಗಾಭ್ಯಾಸ ಮಾಡಿದರು.
ಯೋಗ ಗುರು ಪತಂಜಲಿ ಯೋಗ ಟ್ರಸ್ಟ್ ನ ಸತೀಶ್ ನೇತೃತ್ವದಲ್ಲಿ ಯೋಗಾಭ್ಯಾಸ ನಡೆಯಿತು. ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು- ಸಿಬ್ಬಂದಿ ಭಾಗವಹಿಸಿದ್ದರು.
ಹತ್ತನೇ ವರ್ಷದ ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ಕೊಪ್ಪಳವೂ ಸೇರಿದಂತೆ ಜಿಲ್ಲೆಯಾದ್ಯಂತ ಯೋಗ ಹಾಗೂ ಧ್ಯಾನ ನಡೆಯಿತು.
ಕೊಪ್ಪಳದ ತಾಲ್ಲೂಕು ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಆಯುಷ್ ಇಲಾಖೆ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸದ ಕೆ. ರಾಜಶೇಖರ ಹಿಟ್ನಾಳ, ಜಿಲ್ಲಾಧಿಕಾರಿ ನಲಿನ್ ಅತುಲ್, ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಸಾವಿತ್ರಿ ಬಿ. ಕಡಿ ಹಾಗೂ ನೂರಾರು ವಿದ್ಯಾರ್ಥಿಗಳು, ಸಾರ್ವಜನಿಕರು ಯೋಗ ಮಾಡಿದರು.
ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ಮುಖ್ಯಸ್ಥೆ ಯೋಗಿನಿ ಧ್ಯಾನದ ಮಹತ್ವ ಹೇಳಿಕೊಟ್ಟರು. ‘ಸ್ವಂತ ಮತ್ತು ಸಮಾಜಕ್ಕಾಗಿ ಯೋಗ’ ಎಂಬುದು ಈ ವರ್ಷದ ಘೋಷವಾಕ್ಯವಾಗಿದ್ದು, ಎಲ್ಲರೂ ಇದನ್ನು ಪಾಲನೆ ಮಾಡಬೇಕು ಎಂದರು.
ಅಂತರರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ತುಮಕೂರಿನ ಪೊಲೀಸ್ ಕವಾಯತು ಮೈದಾನದಲ್ಲಿ ಸಾಮೂಹಿಕ ಯೋಗ ನಡೆಯಿತು.
ಜಿಲ್ಲಾ ಆಡಳಿತ, ಆಯುಷ್ ಇಲಾಖೆಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಕೇಂದ್ರ ಜಲಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಚಾಲನೆ ನೀಡಿದರು.
ನಂತರ ಮಾತನಾಡಿ, ಯೋಗ ಭಾರತದ ಪರಂಪರೆಯ ಅತಿ ಮಹತ್ವದ ಕೊಡುಗೆ. ಇದು ದೇಹ, ಮನಸ್ಸನ್ನು ಒಳಗೊಂಡಿದೆ. ಮನುಷ್ಯ, ಪ್ರಕೃತಿ ಮಧ್ಯದ ಬಾಂಧವ್ಯವೇ ಯೋಗ. ಆರೋಗ್ಯ ಸುಧಾರಣೆಗೆ ಸಹಕಾರಿಯಾಗಿದೆ. ಇದೊಂದು ಬದುಕು ಬದಲಿಸುವ, ಅರಳಿಸುವ ವಿಧಾನ ಎಂದರು.
ಬೀದರ್ನ ನೆಹರೂ ಕ್ರೀಡಾಂಗಣದಲ್ಲಿ ಅಂತರರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು.
ಮೋಡ ಮುಸುಕಿದ ತಂಪು ವಾತಾವರಣದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ, ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿ ಉತ್ಸಾಹದಿಂದ ಯೋಗದ ವಿವಿಧ ಆಸನಗಳನ್ನು ಸಾಮೂಹಿಕವಾಗಿ ಮಾಡಿದರು.
ಉದ್ಘಾಟನೆ ನೆರವೇರಿಸಬೇಕಿದ್ದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ, ಸಂಸದ ಸಾಗರ್ ಖಂಡ್ರೆ, ಸ್ಥಳೀಯ ಶಾಸಕರೂ ಆದ ಪೌರಾಡಳಿತ ಸಚಿವ ರಹೀಂ ಖಾನ್ ಗೈರು ಹಾಜರಾಗಿದ್ದರು.
ಜಿಲ್ಲಾಡಳಿತ, ಆಯುಷ್ ಇಲಾಖೆಯ ಸಹಯೋಗದಲ್ಲಿ ಏರ್ಪಡಿಸಿದ್ದ ಸಮಾರಂಭವನ್ನು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಉದ್ಘಾಟಿಸಿ, ನಿತ್ಯ ಯೋಗ ಮಾಡುವುದರಿಂದ ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಿ ಇರಬಹುದು ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್., ಡಿವೈಎಸ್ಪಿ ಶಿವನಗೌಡ ಪಾಟೀಲ ಮತ್ತಿತರರು ಹಾಜರಿದ್ದರು.
ಮಡಿಕೇರಿಯ ಕೆಳಗಿನ ಗೌಡ ಸಮಾಜದಲ್ಲಿ ನಡೆದ ವಿಶ್ವ ಯೋಗ ದಿನಾಚರಣೆಯಲ್ಲಿ ಬಾಲಕಿ ಸಿಂಚನಾ ಮಾಡಿದ ಕಲಾತ್ಮಕ ಯೋಗ ಗಮನ ಸೆಳೆಯಿತು.
ತಾಲ್ಲೂಕಿನ ಮದೆನಾಡು ಬಿಜಿಎಸ್ ಶಾಲೆಯ 5ನೇ ತರಗತಿ ವಿದ್ಯಾರ್ಥಿನಿ ಸಿಂಚನಾ ಪ್ರದರ್ಶಿಸಿದ ಯೋಗ ಪ್ರೇಕ್ಷಕರಿಂದ ಭರಪೂರ ಮೆಚ್ಚುಗೆ ಪಡೆಯಿತು.
ಈ ಕುರಿತು ಪ್ರಜಾವಾಣಿಯೊಂದಿಗೆ ಮಾತನಾಡಿದ ಸಿಂಚನಾ ನಾನು ಕಳೆದ 5 ವರ್ಷಗಳಿಂದ ಯೋಗಾಭ್ಯಾಸ ಮಾಡುತ್ತಿರುವೆ. ಕಲಾತ್ಮಕ ಯೋಗವನ್ನು ಒಂದು ವರ್ಷದಿಂದ ನಿತ್ಯವೂ ಅಭ್ಯಾಸ ಮಾಡುತ್ತಿರುವೆ ಎಂದು ತಿಳಿಸಿದಳು.