ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ | ಅಗತ್ಯ ದಾಖಲೆ ಅಲಭ್ಯ: ಸುಪ್ರಿಂ ಕೋರ್ಟ್‌ ಕಳವಳ

Published : 9 ಸೆಪ್ಟೆಂಬರ್ 2024, 14:35 IST
Last Updated : 9 ಸೆಪ್ಟೆಂಬರ್ 2024, 14:35 IST
ಫಾಲೋ ಮಾಡಿ
Comments

ನವದೆಹಲಿ: ಕೋಲ್ಕತ್ತದ ಆರ್‌.ಜಿ. ಕರ್‌ ಆಸ್ಪತ್ರೆಯಲ್ಲಿ ಹತ್ಯೆಗೀಡಾದ ವೈದ್ಯ ವಿದ್ಯಾರ್ಥಿನಿಯ ಮರಣೋತ್ತರ ಪರೀಕ್ಷೆಗೆ ಸಂಬಂಧಿಸಿದ ಅಗತ್ಯ ದಾಖಲೆಯೊಂದು ಲಭ್ಯವಿಲ್ಲದ್ದಕ್ಕೆ ಸುಪ್ರಿಂ ಕೋರ್ಟ್‌ ಕಳವಳ ವ್ಯಕ್ತಪಡಿಸಿದ್ದು, ಆ ಬಗ್ಗೆ ತನಿಖೆ ನಡೆಸುವಂತೆ ಸಿಬಿಐಗೆ ಸೂಚಿಸಿದೆ. 

‘ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಹಸ್ತಾಂತರಿಸಿದ್ದಕ್ಕೆ ದಾಖಲೆಯಾಗಿರುವ ಚಲನ್ ಎಲ್ಲಿದೆ’ ಎಂದು ಕೇಳಿದ ಪೀಠ, ಈ ಬಗ್ಗೆ ಉತ್ತರಿಸುವಂತೆ ಸಿಬಿಐ ಮತ್ತು ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸೂಚಿಸಿತು. 

ಸಿಬಿಐ ಪರ ವಾದ ಮಂಡಿಸಿದ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಅವರು, ‘ಚಲನ್ ನಮ್ಮ ದಾಖಲೆಗಳ ಭಾಗವಾಗಿಲ್ಲ’ ಎಂದು ಪೀಠಕ್ಕೆ ತಿಳಿಸಿದರು. ಪಶ್ಚಿಮ ಬಂಗಾಳ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್‌ ಸಿಬಲ್ ಅವರು, ತಕ್ಷಣವೇ ದಾಖಲೆಯನ್ನು ಹುಡುಕಲು ಸಾಧ್ಯವಾಗಲಿಲ್ಲ ಮತ್ತು ಈ ಬಗ್ಗೆ ನ್ಯಾಯಾಲಯಕ್ಕೆ ಮಾಹಿತಿ ನೀಡಲಾಗುವುದು ಎಂದು ಹೇಳಿದರು. ಪೀಠವು ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್‌ 17ಕ್ಕೆ ನಿಗದಿಪಡಿಸಿದೆ. 

ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಯೊಂದು ಲಭ್ಯವಿಲ್ಲ ಎಂದು ಪೀಠವು ಹೇಳಿದೆ. ಮಮತಾ ಬ್ಯಾನರ್ಜಿ ಅವರ ಕರಾಳ ಮುಖ ಸುಪ್ರೀಂ ಕೋರ್ಟ್‌ನಲ್ಲಿ ಅನಾವರಣಗೊಂಡಿದೆ
– ಗೌರವ್‌ ಭಾಟಿಯಾ ಬಿಜೆಪಿ ರಾಷ್ಟ್ರೀಯ ವಕ್ತಾರ

‘ಸೆ.17ರೊಳಗೆ ವಸ್ತು ಸ್ಥಿತಿ ವರದಿ ಸಲ್ಲಿಸಿ’

  • ಪ್ರಕರಣದ ತನಿಖೆಯ ಕುರಿತು ಸೆಪ್ಟೆಂಬರ್‌ 17ರ ಒಳಗೆ ವಸ್ತು ಸ್ಥಿತಿ ವರದಿ ಸಲ್ಲಿಸುವಂತೆ ಪೀಠವು ಸಿಬಿಐಗೆ ನಿರ್ದೇಶಿಸಿತು. 

  • ‘ಸಿಬಿಐ ಈಗಾಗಲೇ ಒಂದು ವಸ್ತು ಸ್ಥಿತಿ ವರದಿಯನ್ನು ಸಲ್ಲಿಸಿದ್ದು ತನಿಖೆ ಪ್ರಗತಿಯಲ್ಲಿದೆ ಎಂಬುದು ತಿಳಿಯುತ್ತದೆ. ಹೊಸದಾಗಿ ವಸ್ತು ಸ್ಥಿತಿ ವರದಿ ಸಲ್ಲಿಸಲು ಸಿಬಿಐಗೆ ನಿರ್ದೇಶನ ನೀಡುತ್ತೇವೆ’ ಎಂದಿತು.

  • ಎಫ್‌ಐಆರ್‌ ದಾಖಲು ಮಾಡಿಕೊಳ್ಳುವಲ್ಲಿ 14 ತಾಸುಗಳ ವಿಳಂಬ ಆಗಿದ್ದಕ್ಕೆ ಪೀಠವು ಕೋಲ್ಕತ್ತ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿತು.

  • ಸಂತ್ರಸ್ತೆಯ ಭಾವಚಿತ್ರವನ್ನು ಎಲ್ಲ ಸಾಮಾಜಿಕ ಮಾಧ್ಯಮಗಳಿಂದಲೂ ತೆಗೆದುಹಾಕುವಂತೆ ನಿರ್ದೇಶಿಸಿತು.

  • ಆರ್‌.ಜಿ ಕರ್ ಆಸ್ಪತ್ರೆಗೆ ಭದ್ರತೆ ಒದಗಿಸಲು ನಿಯೋಜಿಸಿರುವ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್‌ಎಫ್) ಮೂರು ತುಕಡಿಗಳಿಗೂ ವಸತಿ ಸೇರಿದಂತೆ ಅಗತ್ಯವಿರುವ ಎಲ್ಲ ಸೌಲಭ್ಯ ಒದಗಿಸಿಕೊಡುವಂತೆ ಬಂಗಾಳ ಸರ್ಕಾರಕ್ಕೆ ನಿರ್ದೇಶಿಸಿದೆ.

  • ಸಿಐಎಸ್‌ಎಫ್‌ ಸಿಬ್ಬಂದಿಯ ಕರ್ತವ್ಯ ನಿರ್ವಹಣೆಗೆ ಅಗತ್ಯ ಸೌಲಭ್ಯಗಳನ್ನು ಪಶ್ಚಿಮ ಬಂಗಾಳ ಸರ್ಕಾರ ಒದಗಿಸಿಲ್ಲ ಎಂದು ಆರೋಪಿಸಿರುವ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಈಚೆಗೆ ದೂರು ನೀಡಿತ್ತು. 

ಕೇಂದ್ರದ ಪಿತೂರಿ: ಮಮತಾ ಆರೋಪ

ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಹಿಂದೆ ಕೇಂದ್ರ ಸರ್ಕಾರದ ಪಿತೂರಿ ಇದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಆರೋಪಿಸಿದ್ದಾರೆ. 

‘ಇದು (ಆರ್‌.ಜಿ ಕರ್ ಘಟನೆಯ ನಂತರದ ಪ್ರತಿಭಟನೆ) ಖಂಡಿತವಾಗಿಯೂ ಕೇಂದ್ರ ಸರ್ಕಾರದ ಪಿತೂರಿ ಆಗಿದೆ ಮತ್ತು ಕೆಲವು ಎಡಪಕ್ಷಗಳೂ ಇದರಲ್ಲಿ ಭಾಗಿಯಾಗಿವೆ. ಕೆಲವರು ನೆರೆಯ ದೇಶದಲ್ಲಿ ತಲೆದೋರಿರುವ ಅರಾಜಕತೆಯ ಲಾಭವನ್ನು ಪಡೆಯುತ್ತಿದ್ದಾರೆ. ಭಾರತ ಮತ್ತು ಬಾಂಗ್ಲಾದೇಶ ಪ್ರತ್ಯೇಕ ರಾಷ್ಟ್ರಗಳು ಎಂಬುದನ್ನು ಅವರು ಮರೆತಿದ್ದಾರೆ’ ಎಂದು ಟೀಕಿಸಿದರು. 

‘ಮೃತ ವೈದ್ಯ ವಿದ್ಯಾರ್ಥಿನಿಯ ಕುಟುಂಬಕ್ಕೆ ನಾನು ಎಂದೂ ಹಣ ನೀಡಿಲ್ಲ. ಹಣ ನೀಡಿದ್ದೇನೆ ಎಂಬುದು ಅಪಪ್ರಚಾರವಲ್ಲದೆ ಬೇರೇನೂ ಅಲ್ಲ. ನಿಮ್ಮ ಮಗಳ ನೆನಪಿಗಾಗಿ ಏನಾದರೂ ಮಾಡಲು ಬಯಸಿದರೆ ಸರ್ಕಾರ ನೆರವು ನೀಡಲಿದೆ ಎಂದು ಸಂತ್ರಸ್ತೆಯ ಪೋಷಕರಿಗೆ ನಾನು ಹೇಳಿದ್ದೇನೆ. ಯಾವಾಗ ಏನನ್ನು ಮಾತನಾಡಬೇಕೆಂಬುದು ನನಗೆ ತಿಳಿದಿದೆ’ ಎಂದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT