ತೆಲಂಗಾಣ ವಿಧಾನಸಭೆ ಚುನಾವಣೆಗೂ ಮುನ್ನ ಜನರಿಗೆ ನೀಡಿದ್ದ ಭರವಸೆಯನ್ನು ಈಡೇರಿಸಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ.
ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳು ಮತ್ತು ಬುಡಕಟ್ಟು ಕಲ್ಯಾಣ ಇಲಾಖೆಗಳಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಭೆ ನಡೆಸಿದ ರೆಡ್ಡಿ, ಜಾತಿ ಗಣತಿ ನಡೆಸಲು ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಬಿಪಿಎಲ್ ಕುಟುಂಬದ ಹೆಣ್ಣು ಮಕ್ಕಳಿಗೆ ಅವರ ವಿವಾಹದ ಸಮಯದಲ್ಲಿ ₹1 ಲಕ್ಷ ಆರ್ಥಿಕ ಸಹಾಯದ ಜತೆಗೆ ಒಂದು ತೊಲ (10 ಗ್ರಾಂ) ಚಿನ್ನವನ್ನು ನೀಡುವ ‘ಕಲ್ಯಾಣಮಸ್ತು’ ಯೋಜನೆಯನ್ನು ಅನುಷ್ಠಾನಗೊಳಿಸಲು ಬಜೆಟ್ ಅಂದಾಜನ್ನು ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚಿಸಿದರು.
ಸರ್ಕಾರ ನಡೆಸುತ್ತಿರುವ ಎಲ್ಲ ರೀತಿಯ ಸರ್ಕಾರಿ ಕಲ್ಯಾಣ ನಿಲಯಗಳಿಗೆ ಅಗತ್ಯವಿರುವ ಅನುದಾನದ ಅಂದಾಜು ಪಟ್ಟಿಯನ್ನು ತಯಾರಿಸಲು ಹಾಗೂ ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿರುವ ಸರ್ಕಾರಿ ವಸತಿ ಶಾಲೆಗಳ ವಿವರ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದರು. ಅಲ್ಲದೆ, ಸ್ವಂತ ಕಟ್ಟಡ ನಿರ್ಮಾಣಕ್ಕೆ ಜಾಗ ಗುರುತಿಸುವಂತೆ, ಕಟ್ಟಡಗಳ ನಿರ್ಮಾಣಕ್ಕೆ ಬೇಕಾದ ಹಣವನ್ನೂ ಅಂದಾಜಿಸಲು ಅಧಿಕಾರಿಗಳಿಗೆ ತಿಳಿಸಿದರು ಎಂದು ಪ್ರಕಟಣೆ ಹೇಳಿದೆ.
ಹಿಂದುಳಿದ ವರ್ಗಗಳಿಗೆ ಒಂದು ಸಂಸದೀಯ ಕ್ಷೇತ್ರದಲ್ಲಿ ತರಬೇತಿ ಕೇಂದ್ರ ಸ್ಥಾಪನೆಯ ಪ್ರಸ್ತಾವನೆಗಳನ್ನು ಅಧ್ಯಯನ ಮಾಡಲು ಅಧಿಕಾರಿಗಳಿಗೆ ಸಿಎಂ ಸೂಚಿಸಿದರು. ಎಸ್ಸಿ, ಎಸ್ಟಿ, ಬಿಸಿ ಕಲ್ಯಾಣ ವಸತಿ ಶಿಕ್ಷಣ ಸಂಸ್ಥೆಗಳನ್ನು ಪ್ರತ್ಯೇಕವಾಗಿ ಹೊಂದುವ ಬದಲು ‘ಸಮಗ್ರ ಶಿಕ್ಷಣ ಕೇಂದ್ರ’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.