ಅಮರಾವತಿ: ಮಹಾರಾಷ್ಟ್ರದ ಅಮರಾವತಿ ನಗರದಲ್ಲಿ ಪ್ರವಾದಿ ಮುಹಮ್ಮದ್ ವಿರುದ್ಧ ಹಿಂದೂ ಸ್ವಾಮೀಜಿಯೊಬ್ಬರ ಆಕ್ಷೇಪಾರ್ಹ ಹೇಳಿಕೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ಗುಂಪೊಂದು ಕಲ್ಲು ತೂರಾಟ ನಡೆಸಿದ ಪರಿಣಾಮ 21 ಪೊಲೀಸರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರವಾದಿ ವಿರುದ್ಧ ಅವಹೇಳನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಹಿಂದೂ ಸ್ವಾಮೀಜಿ ಗಾಜಿಯಾಬಾದ್ನ ಯತಿ ನರಸಿಂಹಾನಂದ ಮಹಾರಾಜ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅಮರಾವತಿ ನಗರದ ನಾಗಪುರಿ ಗೇಟ್ ಪೊಲೀಸ್ ಠಾಣೆಯ ಹೊರಗಡೆ ಶುಕ್ರವಾರ ರಾತ್ರಿ ನಡೆದ ಕಲ್ಲು ತೂರಾಟ ಘಟನೆಯಲ್ಲಿ ಕನಿಷ್ಠ 10 ಪೊಲೀಸ್ ವಾಹನಗಳು ಹಾನಿಗೀಡಾಗಿವೆ.
ಕಲ್ಲು ತೂರಾಟ ಘಟನೆಗೆ ಸಂಬಂಧಿಸಿದಂತೆ 1,200 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಈ ಪೈಕಿ 26 ಮಂದಿಯ ಗುರುತು ಪತ್ತೆಹಚ್ಚಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
'ಕೆಲವು ಸಂಘಟನೆಗಳ ಸದಸ್ಯರು ಸೇರಿದಂತೆ ಬೃಹತ್ ಗುಂಪು ಶುಕ್ರವಾರ ರಾತ್ರಿ 8.15ರ ಸುಮಾರಿಗೆ ನಾಗುಪುರಿ ಗೇಟ್ ಪೊಲೀಸ್ ಠಾಣೆಗೆ ಬಂದು ಯತಿ ನರಸಿಂಹಾನಂದ ಮಹಾರಾಜ್ ವಿರುದ್ಧ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿತ್ತು' ಎಂದು ಅಮರಾವತಿ ಪೊಲೀಸ್ ಕಮಿಷನರ್ ನವೀನ್ ಚಂದ್ರ ರೆಡ್ಡಿ ಮಾಹಿತಿ ನೀಡಿದ್ದಾರೆ.
'ಎಫ್ಐಆರ್ ದಾಖಲಿಸಿ ವಿಚಾರಣೆ ನಡೆಸುತ್ತಿರುವ ಕುರಿತು ಮಾಹಿತಿ ನೀಡಿದ ಬಳಿಕ ಗುಂಪು ಮರಳಿತ್ತು. ಆದರೆ ನರಸಿಂಹಾನಂದ ಮಹಾರಾಜ್ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ ಪರಿಣಾಮ ಮತ್ತೆ ಠಾಣೆಗೆ ಮುತ್ತಿಗೆ ಹಾಕಿದ ಗುಂಪು ಏಕಾಏಕಿ ಕಲ್ಲು ತೂರಾಟ ನಡೆಸಿದೆ' ಎಂದು ಅವರು ಮಾಹಿತಿ ನೀಡಿದ್ದಾರೆ.
ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಭದ್ರತೆಗಾಗಿ ಹೆಚ್ಚಿನ ಪೊಲೀಸರನ್ನು ನೇಮಕ ಮಾಡಲಾಗಿದೆ. ಪ್ರದೇಶದಲ್ಲಿ ನಿಷೇಧಾಜ್ಞೆ ಹೇರಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.