ಭುವನೇಶ್ವರ: ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು (ಗುರುವಾರ) ಒಡಿಶಾಗೆ ಭೇಟಿ ನೀಡಲಿದ್ದು, ರಾಜ್ಯದಲ್ಲಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ.
ಬೋಲಂಗಿರ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಪಶ್ಚಿಮ ಒಡಿಶಾದ ಸೋನೆಪುರದಲ್ಲಿ ಅವರು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮನಮೋಹನ್ ಸಮಾಲ್ ತಿಳಿಸಿದ್ದಾರೆ.
ಗೃಹ ಸಚಿವರ ಸಾರ್ವಜನಿಕ ಸಭೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಗೋಲಕ್ ಮಹಾಪಾತ್ರ ತಿಳಿಸಿದ್ದಾರೆ.
ಸೋನೆಪುರದಲ್ಲಿ ಸಾರ್ವಜನಿಕ ಸಭೆಯ ಬಳಿಕ, ಗೃಹ ಸಚಿವರು ಝಾರ್ಸುಗುಡಾ ಮೂಲಕ ಭುವನೇಶ್ವರಕ್ಕೆ ಪ್ರಯಾಣಿಸಿ ಅಲ್ಲಿಯೇ ರಾತ್ರಿ ತಂಗಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ರಾಜ್ಯಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ಸಮಾಲ್ ಹೇಳಿದ್ದಾರೆ.
ಒಡಿಶಾದ 21 ಲೋಕಸಭಾ ಕ್ಷೇತ್ರ ಮತ್ತು 147 ವಿಧಾನಸಭಾ ಕ್ಷೇತ್ರಗಳಿಗೆ ಮೇ 13 ರಿಂದ ಜೂನ್ 1ರವರೆಗೆ ನಾಲ್ಕು ಹಂತಗಳಲ್ಲಿ ಮತದಾನ ನಡೆಯಲಿದೆ.