ಕೋಲ್ಕತ್ತ: ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಸೋಮವಾರ ನಡೆದ ಗುಂಪು ಹಲ್ಲೆಯಲ್ಲಿ ವ್ಯಕ್ತಿಯೊಬ್ಬರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಒಂದು ವಾರದೊಳಗೆ ರಾಜ್ಯದಲ್ಲಿ ನಡೆದ ನಾಲ್ಕನೇ ಗುಂಪು ಹಲ್ಲೆಯ ಘಟನೆ ಇದಾಗಿದೆ.
ಈ ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯನ್ನು ಬಿಸ್ವಜಿತ್ ಮನ್ನಾ ಎಂದು ಗುರುತಿಸಲಾಗಿದ್ದು, ಈ ಸಂಬಂಧ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು, ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಆರೋಪಿಯಿಂದ ಮನ್ನಾ ₹50 ಸಾವಿರ ಸಾಲ ಪಡೆದಿದ್ದರು. ಅದನ್ನು ಮರುಪಾವತಿ ಮಾಡಿರಲಿಲ್ಲ. ಹೀಗಾಗಿ ಆರೋಪಿಯು ಭಾನುವಾರ ತಮ್ಮ ಬಳಿ ಕರೆಸಿಕೊಂಡಿದ್ದ. ಬಳಿಕ ತನ್ನ ಸ್ನೇಹಿತರ ಜತೆಗೂಡಿ ಆತನ ಮೇಲೆ ನಿರಂತರವಾಗಿ ಹಲ್ಲೆ ನಡೆಸಿದ್ದ ಎಂದು ಪೊಲೀಸರು ಹೇಳಿದ್ದಾರೆ.
ಇದಕ್ಕೂ ಮುನ್ನ ಜೂನ್ 28, ಜೂನ್ 29 ಮತ್ತು 30ರಂದು ಮೂರು ಗುಂಪು ಹಲ್ಲೆಯ ಘಟನೆಗಳು ವರದಿಯಾಗಿದ್ದವು.