ರಾಜ್ಯದಲ್ಲಿ ಸಂಭವಿಸಿರುವ ಪ್ರವಾಹದಿಂದಾಗಿ ತೊಂದರೆಗೆ ಒಳಗಾದವರ ಸಂಖ್ಯೆ 14.62 ಲಕ್ಷಕ್ಕೆ ತಲುಪಿದೆ ಎಂದು ವಿಪತ್ತು ನಿರ್ವಹಣಾ ಇಲಾಖೆ ತಿಳಿಸಿದೆ.
ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಖರ್ಗೆ, ‘ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಭೀಕರವಾಗುತ್ತಿದೆ. ರಾಜ್ಯದ 17 ಜಿಲ್ಲೆಗಳ ಸುಮಾರು 15 ಲಕ್ಷ ಜನರು ಪ್ರವಾಹದಿಂದಾಗಿ ತೊಂದರೆಗೀಡಾಗಿದ್ದಾರೆ. ಕಳೆದ ಕೆಲವು ದಿನಗಳಲ್ಲಿನ ಸಾವು ನೋವಿನ ಸುದ್ದಿಗಳು ಅತ್ಯಂತ ದುಃಖಕರವಾಗಿದೆ’ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ವಿಶೇಷವಾಗಿ ಉತ್ತರ ಬಿಹಾರದಲ್ಲಿ ದುರಂತದಿಂದಾಗಿ ಸೇತುವೆಗಳು ಕುಸಿದಿವೆ ಮತ್ತು ಮನೆಗಳು ಹಾನಿಗೀಡಾಗಿವೆ. ಸಂತ್ರಸ್ತರಿಗೆ ತಕ್ಷಣದ ನೆರವು ಸಿಗುವಂತೆ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತಗೊಳಿಸಬೇಕು ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ನಾವು ಒತ್ತಾಯಿಸುತ್ತೇವೆ ಎಂದು ಖರ್ಗೆ ತಿಳಿಸಿದ್ದಾರೆ.
ಪ್ರವಾಹ ಸಂತ್ರಸ್ತರಿಗೆ ಕೇಂದ್ರ ಸೂಕ್ತ ಪರಿಹಾರ ನೀಡಬೇಕು ಮತ್ತು ರಾಜ್ಯ ಸರ್ಕಾರಕ್ಕೆ ಸಹಾಯ ಮಾಡಬೇಕು. ಬೆಳೆ ನಾಶವಾಗಿರುವ ರೈತರಿಗೂ ಪರಿಹಾರ ನೀಡಬೇಕು ಎಂದು ಖರ್ಗೆ ಆಗ್ರಹಿಸಿದ್ದಾರೆ.