ಗುರುವಾರ, 12 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ತ್ರಿಪುರಾ | ಭೂಕುಸಿತ: ಒಂದೇ ಕುಟುಂಬದ ಮೂವರು ಸೇರಿ 5 ಮಂದಿ ಸಾವು

Published 20 ಆಗಸ್ಟ್ 2024, 13:41 IST
Last Updated 20 ಆಗಸ್ಟ್ 2024, 13:41 IST
ಅಕ್ಷರ ಗಾತ್ರ

ಅಗರ್ತಲಾ: ತ್ರಿಪುರಾದಲ್ಲಿ ನಿರಂತರವಾಗಿ ಸುರಿದ ಭಾರಿ ಮಳೆಗೆ ಮೂರು ಸ್ಥಳಗಳಲ್ಲಿ ಭೂಕುಸಿತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಸೇರಿದಂತೆ ಕನಿಷ್ಠ ಐದು ಜನರು ಮೃತಪಟ್ಟಿದ್ದಾರೆ. ಮತ್ತೊಬ್ಬರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತ್ರಿಪುರಾದ ದೇಬಿಪುರದಲ್ಲಿ ಸೋಮವಾರ ರಾತ್ರಿ ಭಾರಿ ಭೂಕುಸಿತದಿಂದ ಮನೆ ಕುಸಿದು ಒಂದೇ ಕುಟುಂಬದ ಮೂವರು ಸಾವಿಗೀಡಾಗಿದ್ದಾರೆ ಎಂದು ಸಂತೀರ್‌ಬಜಾರ್ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಅಭೇದಾನಂದ ಬೈದ್ಯ ಅವರು ಹೇಳಿದ್ದಾರೆ.

ಅವಘಡದಲ್ಲಿ ಮೃತಪಟ್ಟವರನ್ನು ತ್ರಿಶಂಕರ್ ಚಕ್ಮಾ, ಪತ್ನಿ ರಜಿನಿ ಮತ್ತು ಪುತ್ರಿ ಬಿನಿತಾ ಎಂದು ಗುರುತಿಸಲಾಗಿದೆ.

ಸೋಮವಾರ ಗುಮತಿ ಜಿಲ್ಲೆಯ ಕಾರ್ಬುಕ್ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೌಯಿ ರಿಯಾಂಗ್ (52 ವರ್ಷ) ಎಂಬುವವರು ಮೃತಪಟ್ಟಿದ್ದು, ಮತ್ತೊಬ್ಬ ಗ್ರಾಮಸ್ಥರು ನಾಪತ್ತೆಯಾಗಿದ್ದಾರೆ ಎಂದು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ (ಎಡಿಎಂ) ಬಿಬಿ ದಾಸ್ ತಿಳಿಸಿದ್ದಾರೆ.

ಆಗಸ್ಟ್ 19ರಂದು ಖೋವೈ ಜಿಲ್ಲೆಯ ಚಂಪಲೈ ಪ್ರದೇಶದಲ್ಲಿ ಮನೆಯೊಂದರ ಮೇಲೆ ಮಣ್ಣಿನ ಗುಡ್ಡ ಕುಸಿದು ಬಾಲಕನೊಬ್ಬ (14 ವರ್ಷ) ಮೃತಪಟ್ಟಿದ್ದಾನೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಾರ್ವಜನಿಕರ ಸುರಕ್ಷತೆಗೆ ಮತ್ತು ಪ್ರಕೃತಿ ವಿಕೋಪದ ಪರಿಣಾಮವನ್ನು ಎದುರಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಮಾಣಿಕ್ ಸಹಾ ಅವರು ಜಿಲ್ಲಾಡಳಿತಗಳಿಗೆ ಸೂಚಿಸಿದ್ದಾರೆ.

ಭಾರಿ ಮಳೆಯಿಂದಾಗಿ ಹಲವು ತಗ್ಗು ಪ್ರದೇಶಗಳು ಮುಳುಗಿವೆ. ಮುಹುರಿ ಮತ್ತು ಲಾಗ್ಯಾಂಗ್‌ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಸಂತ್ರಸ್ತರಿಗಾಗಿ ನಾಲ್ಕು ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಗಿದೆ ಎಂದು ಬೈದ್ಯ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT