ಶನಿವಾರ, 7 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಉಗ್ರರನ್ನು ಜೈಲಿಗೆ ಅಥವಾ ನರಕಕ್ಕೆ ಕಳುಹಿಸುತ್ತೇವೆ: ಸಚಿವ ನಿತ್ಯಾನಂದ ರಾಯ್

Published 24 ಜುಲೈ 2024, 10:54 IST
Last Updated 24 ಜುಲೈ 2024, 10:54 IST
ಅಕ್ಷರ ಗಾತ್ರ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಕ್ರಿಯವಾಗಿರುವ ಉಗ್ರರನ್ನು ಜೈಲಿಗಟ್ಟಲಾಗುವುದು ಅಥವಾ ನರಕಕ್ಕೆ ಕಳುಹಿಸಲಾಗುವುದು ಎಂದು ಕೇಂದ್ರ ಸಚಿವ ನಿತ್ಯಾನಂದ ರಾಯ್ ಬುಧವಾರ ಹೇಳಿದ್ದಾರೆ.

ಕಾಂಗ್ರೆಸ್‌ ಸಂಸದ ಪ್ರಮೋದ್‌ ತಿವಾರಿ ಅವರ ಪ್ರಶ್ನೆಗೆ ರಾಜ್ಯಸಭೆಯಲ್ಲಿ ಪ್ರತಿಕ್ರಿಯಿಸಿದ ರಾಯ್, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಭಯೋತ್ಪಾದನೆಯನ್ನು ಸಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕೇಂದ್ರ ಗೃಹ ಖಾತೆ ರಾಜ್ಯ ಸಚಿವರಾಗಿರುವ ಅವರು, ಕಣಿವೆಯಲ್ಲಿ ಉಗ್ರ ಚಟುವಟಿಕೆಗಳು ಶೀಘ್ರವೇ ಕೊನೆಗೊಳ್ಳಲಿವೆ. ಉಗ್ರರು ಮೇಲುಗೈ ಸಾಧಿಸಲು ಬಿಡುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಕೆಲ ದಿನಗಳಿಂದ ಈಚೆಗೆ 28 ಉಗ್ರರನ್ನು ಹತ್ಯೆ ಮಾಡಲಾಗಿದೆ. ಇದೇ ವೇಳೆ ಭದ್ರತಾ ಪಡೆಗಳ ಕೆಲವು ಸಿಬ್ಬಂದಿಯೂ ಹುತಾತ್ಮರಾಗಿರುವುದು ದುರದೃಷ್ಟಕರ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ರಾಯ್ ಅವರ ಪ್ರಕಾರ, ಸಂವಿಧಾನದ 370ನೇ ವಿಧಿ ಅಡಿ ಕಲ್ಪಿಸಲಾಗಿದ್ದ ವಿಶೇಷ ಸ್ಥಾನಮಾನವನ್ನು 2019ರಲ್ಲಿ ಹಿಂಪಡೆದ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ 900 ಉಗ್ರರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ.

'ಮೋದಿ ಸರ್ಕಾರವು ಭಯೋತ್ಪಾದನೆಯನ್ನು ಕಿಂಚಿತ್ತೂ ಸಹಿಸುವುದಿಲ್ಲ. ಉಗ್ರ ಚಟುವಟಿಕೆಗಳನ್ನು ಕೊನೆಗೊಳಿಸುತ್ತೇವೆ. ಅವರು (ಉಗ್ರರು) ಜೈಲಿನಲ್ಲಿ ಉಳಿಯಬೇಕು ಇಲ್ಲವೇ ನರಕದಲ್ಲಿ ಇರಬೇಕು ಎಂಬುದಾಗಿ ಸದನಕ್ಕೆ ಭರವಸೆ ನೀಡಲು ಬಯಸುತ್ತೇನೆ' ಎಂದು ರಾಯ್ ಹೇಳಿದ್ದಾರೆ.

ಯುಪಿಎ ಸರ್ಕಾರ 2004 – 2014ರ ಅವಧಿಯಲ್ಲಿ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರ ಚಟುವಟಿಕೆಗಳಿಗೆ ಸಂಬಂಧಿಸಿದ 7,217 ಪ್ರಕರಣಗಳು ವರದಿಯಾಗಿದ್ದವು. ನಾಗರಿಕರು ಹಾಗೂ ಭದ್ರತಾ ಸಿಬ್ಬಂದಿ ಸೇರಿದಂತೆ ಒಟ್ಟು 2,829 ಮಂದಿ ಮೃತಪಟ್ಟಿದ್ದರು. 2014ರಲ್ಲಿ ಬಿಜೆಪಿ ಅಧಿಕಾರಕ್ಕೇರಿದ ನಂತರ ಸಾವಿನ ಪ್ರಮಾಣವು ಶೇ 67ರಷ್ಟು ಕುಸಿದಿದೆ. ಪ್ರಕರಣಗಳ ಸಂಖ್ಯೆ 2,259ಕ್ಕೆ ಇಳಿದಿದೆ ಎಂದು ಪ್ರತಿಪಾದಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಜನರು ಸದ್ಯ ಶಾಂತಿಯುತ ಪರಿಸರದಲ್ಲಿ ಬದುಕುತ್ತಿದ್ದಾರೆ. ಅವರ ಭದ್ರತೆಗೆ ಸಂಪೂರ್ಣ ಖಾತ್ರಿ ಇದೆ ಎಂದು ಒತ್ತಿ ಹೇಳಿದ್ದಾರೆ.

ಕಣಿವೆ ರಾಜ್ಯವನ್ನು 2019ರಲ್ಲಿ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್‌ಗಳಾಗಿ ವಿಭಜಿಸಿ ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT