ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಜುಲೈ 12ರವರೆಗೆ ನ್ಯಾಯಾಂಗ ಬಂಧನದಲ್ಲಿರಿಸಲು ಇಲ್ಲಿನ ನ್ಯಾಯಾಲಯ ಶನಿವಾರ ಆದೇಶಿಸಿದೆ.
ತನಿಖಾಧಿಕಾರಿ ಸಂಗ್ರಹಿಸಿದ ದಾಖಲೆಗಳನ್ನು ಬಹಿರಂಗಪಡಿಸುವಂತೆ ಕೇಜ್ರಿವಾಲ್ ಪರ ವಕೀಲರ ಕೋರಿಕೆಯನ್ನು ಕೋರ್ಟ್ ತಿರಸ್ಕರಿಸಿದೆ.
ಮೂರು ದಿನಗಳ ಕಸ್ಟಡಿ ವಿಚಾರಣಾ ಅವಧಿ ಮುಗಿದ ಬಳಿಕ ಕೇಜ್ರಿವಾಲ್ ಅವರನ್ನು ವಿಶೇಷ ನ್ಯಾಯಾಧೀಶ ಸುನೇನಾ ಶರ್ಮಾ ಅವರ ಮುಂದೆ ಹಾಜರುಪಡಿಸಲಾಯಿತು.
ತನಿಖಾ ದೃಷ್ಟಿಯಿಂದ ಕೇಜ್ರಿವಾಲ್ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಬೇಕು ಎಂದು ಸಿಬಿಐ ಅರ್ಜಿಯಲ್ಲಿ ಕೋರಿತ್ತು. ಸಿಬಿಐ ಅರ್ಜಿಯನ್ನು ಅಂಗೀಕರಿಸಿದ ನ್ಯಾಯಾಧೀಶರು, ಅವರಿಗೆ ಜುಲೈ 12ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದರು. ಕೇಜ್ರಿವಾಲ್ ಅವರನ್ನು ಸಿಬಿಐ ಜೂನ್ 26ರಂದು ಬಂಧಿಸಿತ್ತು.
ಕೇಜ್ರಿವಾಲ್ ಪರವಾಗಿ ವಾದಿಸಿದ ಹಿರಿಯ ವಕೀಲ ವಿಕ್ರಮ್ ಚೌಧರಿ, ‘2022ರಿಂದ ನಡೆಯುತ್ತಿರುವ ತನಿಖೆ ಇದಾಗಿದೆ. ಮಾರ್ಚ್ 21ರಂದು ಜಾರಿ ನಿರ್ದೇಶನಾಲಯ ಅವರನ್ನು ಬಂಧಿಸಿತ್ತು. ಮೇ 10ರಂದು ಸುಪ್ರೀಂ ಕೋರ್ಟ್ ಅವರಿಗೆ ಮೂರು ವಾರಗಳ ಮಧ್ಯಂತರ ಜಾಮೀನು ನೀಡಿತ್ತು’ ಎಂದು ವಿವರಿಸಿದರು.