ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಆಂಧ್ರಪ್ರದೇಶದಲ್ಲಿ ಹತ್ಯಾ ರಾಜಕಾರಣ: ಮೋದಿಗೆ ಪತ್ರ ಬರೆದ ಜಗನ್ ಮೋಹನ್ ರೆಡ್ಡಿ

Published 19 ಜುಲೈ 2024, 10:27 IST
Last Updated 19 ಜುಲೈ 2024, 10:27 IST
ಅಕ್ಷರ ಗಾತ್ರ

ಅಮರಾವತಿ: ಆಡಳಿತಾರೂಢ ಎನ್‌ಡಿಎ ಮಿತ್ರಪಕ್ಷಗಳಾದ ಟಿಡಿಪಿ, ಜನಸೇನಾ ಕಾರ್ಯಕರ್ತರು ನಮ್ಮ ಪಕ್ಷದ ಕಾರ್ಯಕರ್ತರ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿರುವ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ, ವೈಎಸ್‌ಆರ್‌ಸಿಪಿ ನಾಯಕ ವೈ.ಎಸ್‌. ಜಗನ್ ಮೋಹನ್ ರೆಡ್ಡಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ರಾಜ್ಯದಲ್ಲಿ ಕಳೆದೊಂದು ತಿಂಗಳಲ್ಲಿ 31 ವೈಎಸ್‌ಆರ್‌ಸಿಪಿ ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದೆ. 35 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 560 ಖಾಸಗಿ ಮತ್ತು 490 ಸರ್ಕಾರಿ ಆಸ್ತಿಗಳನ್ನು ನಾಶಪಡಿಸಲಾಗಿದೆ. 2,700ಕ್ಕೂ ಹೆಚ್ಚು ಜನರಿಗೆ ತಮ್ಮ ಗ್ರಾಮಗಳನ್ನು ತೊರೆಯುವಂತೆ ಬೆದರಿಕೆ ಹಾಕಲಾಗುತ್ತಿದೆ ಎಂದು ಜಗನ್ ಮೋಹನ್ ರೆಡ್ಡಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ರಾಜ್ಯದಲ್ಲಿ ಟಿಡಿಪಿ ನೇತೃತ್ವದ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ರಾಜ್ಯದಲ್ಲಿ 1,050ಕ್ಕೂ ಹೆಚ್ಚು ದಾಳಿಗಳು ನಡೆದಿವೆ. ಈ ಅಂಕಿಅಂಶಗಳನ್ನು ಗಮನಿಸದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಷ್ಟರ ಮಟ್ಟಿಗೆ ಕುಸಿದಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ರೆಡ್ಡಿ ವಿವರಿಸಿದ್ದಾರೆ.

ವಿನುಕೊಂಡದಲ್ಲಿ ವೈಎಸ್‌ಆರ್‌ಸಿಪಿ ಕಾರ್ಯಕರ್ತ ಶೇಖ್ ರಶೀದ್ ಹತ್ಯೆಯ ಹಿನ್ನೆಲೆಯಲ್ಲಿ ಜಗನ್ ಪತ್ರ ಬರೆದಿದ್ದು, ವಿಧಾನಸಭೆ ಚುನಾವಣೆಯ ನಂತರ ನಡೆದ ಘಟನೆಗಳ ಬಗ್ಗೆ ಕೇಂದ್ರ ಸರ್ಕಾರ ತನಿಖೆ ನಡೆಸಬೇಕು ಎಂದು ಮನವಿ ಮಾಡಿದ್ದಾರೆ.

ಜಗನ್‌ ವಿರುದ್ಧ ಕೊಲೆ ಯತ್ನ ಪ್ರಕರಣ

ಈಚೆಗೆ ವೈ.ಎಸ್‌. ಜಗನ್‌ಮೋಹನ್‌ ರೆಡ್ಡಿ, ಇಬ್ಬರು ಹಿರಿಯ ಐಪಿಎಸ್‌ ಅಧಿಕಾರಿಗಳು ಹಾಗೂ ಮತ್ತಿಬ್ಬರು ನಿವೃತ್ತ ಅಧಿಕಾರಿಗಳ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿದೆ.

ಆಡಳಿತಾರೂಢ ಟಿಡಿಪಿಯ ಉಂಡಿ ಕ್ಷೇತ್ರದ ಶಾಸಕ ಕೆ.ರಘುರಾಮ ಕೃಷ್ಣ ರಾಜು ಅವರು ನೀಡಿರುವ ದೂರು ಆಧರಿಸಿ ಗುಂಟೂರ್‌ನ ನಗರಂಪಾಲೆಂ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT