ನವದೆಹಲಿ: ಹರಿಯಾಣದ ಪಿಂಜೋರ್ ನಲ್ಲಿರುವ ಹಿಂದೂಸ್ತಾನ್ ಮಶೀನ್ ಅಂಡ್ ಟೂಲ್ಸ್ (ಎಚ್ಎಂಟಿ) ಕಾರ್ಖಾನೆಗೆ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಾರ್ಖಾನೆ ವೀಕ್ಷಣೆ ನಂತರ ಉನ್ನತ ಅಧಿಕಾರಿಗಳ ಸಭೆ ನಡೆಸಿ ಸಮಗ್ರ ಮಾಹಿತಿ ಪಡೆದುಕೊಂಡ ಸಚಿವರು; ಕಾರ್ಖಾನೆ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ಬಗ್ಗೆ ಚರ್ಚೆ ನಡೆಸಿದರು.
ಕಾರ್ಖಾನೆ ಹೊಂದಿರುವ ಆಸ್ತಿಗಳು, ಆಸ್ತಿಗಳಿಗೆ ಸಂಬಂಧಪಟ್ಟ ಕೋರ್ಟ್ ವ್ಯಾಜ್ಯಗಳು, ಉದ್ಯೋಗಿಗಳ ಬಿಕ್ಕಟ್ಟುಗಳು ಇತ್ಯಾದಿ ಅಂಶಗಳ ಬಗ್ಗೆ ಸಚಿವರಿಗೆ ಅಧಿಕಾರಿಗಳು ಮಾಹಿತಿ ನೀಡಿದರು. ಕಾರ್ಖಾನೆಯ ಸದ್ಯದ ಪರಿಸ್ಥಿತಿಯ ಬಗ್ಗೆ ಸಚಿವರು ಕಳವಳ ವ್ಯಕ್ತಪಡಿಸಿ ಸಮಗ್ರ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಾರ್ಖಾನೆಯ ವಹಿವಾಟು, ಲಾಭ, ಸಾಲ, ಬಾಕಿ ಸೇರಿದಂತೆ ಹಣಕಾಸು ಸ್ಥಿತಿಗತಿಗಳ ಬಗ್ಗೆ ಅಂಕಿ ಅಂಶಗಳನ್ನು ಪಡೆದುಕೊಂಡ ಸಚಿವರು; ಕಾರ್ಖಾನೆಯ ನೌಕರರ ಜತೆ ಮಾತುಕತೆ, ಕಾರ್ಮಿಕರ ಯೂನಿಯನ್ ಮುಖಂಡರ ಜತೆ ಚರ್ಚೆ ನಡೆಸಿದರು.
ಸಾರ್ವಜನಿಕ ಸ್ವಾಮ್ಯದ ಕಾರ್ಖಾನೆಯನ್ನು ಉಳಿಸಿ ಬೆಳೆಸುವ ಹೊಣೆ ಎಲ್ಲರದ್ದು. ಎಲ್ಲರೂ ಬದ್ಧತೆ, ಕ್ಷಮತೆಯಿಂದ ಕೆಲಸ ಮಾಡಬೇಕು ಎಂದು ಅಧಿಕಾರಿಗಳು, ಕಾರ್ಮಿಕರಿಗೆ ಕುಮಾರಸ್ವಾಮಿ ಕಿವಿಮಾತು ಹೇಳಿದರು.