ಭಾನುವಾರ, 7 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಜೆಪಿಯ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಆಸ್ಪತ್ರೆಯಿಂದ ಬಿಡುಗಡೆ

Published 4 ಜುಲೈ 2024, 12:51 IST
Last Updated 4 ಜುಲೈ 2024, 12:51 IST
ಅಕ್ಷರ ಗಾತ್ರ

ನವದೆಹಲಿ: ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಗುರುವಾರ ಸಂಜೆ ಇಲ್ಲಿನ ಅಪೋಲೋ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಆರೋಗ್ಯದಲ್ಲಿ ಏರುಪೇರಾದ ಕಾರಣ ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಅವರ ಪುತ್ರಿ ಪ್ರತಿಭಾ ಅಡ್ವಾಣಿ ಕೂಡ ಇದ್ದರು. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ. ಹಾಗಾಗಿ ಇಂದು (ಗುರುವಾರ) ಸಂಜೆ 5 ಗಂಟೆ ಸುಮಾರಿಗೆ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ವರದಿಯಾಗಿದೆ.

ಕೆಲ ದಿನಗಳ ಹಿಂದೆ ಅವರು ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ಮೂತ್ರಶಾಸ್ತ್ರ ವಿಭಾಗದ ವೈದ್ಯರಿಂದ ಚಿಕಿತ್ಸೆ ಪಡೆದುಕೊಂಡಿದ್ದರು.

ಅಯೋಧ್ಯೆ ರಾಮಮಂದಿರ ಹೋರಾಟದ ಮೂಲಕ ಹಿಂದುತ್ವದ ಬದ್ಧ ಪ್ರತಿಪಾದಕ, 'ಲೋಹ ಪುರುಷ' ಎಂದೇ ಗುರುತಿಸಿಕೊಂಡಿದ್ದ ಅಡ್ವಾಣಿ 1927ರ ನವೆಂಬರ್ 8ರಂದು ಅವಿಭಜಿತ ಭಾರತದ ಕರಾಚಿಯಲ್ಲಿ (ಈಗಿನ ಪಾಕಿಸ್ತಾನ) ಜನಿಸಿದ್ದರು.

ಕರಾಚಿಯ ಸೇಂಟ್ ಪ್ಯಾಟ್ರಿಕ್ ಪ್ರೌಢಶಾಲೆಯಲ್ಲಿ ಪ್ರಾಥಮಿಕ, ಪ್ರೌಢ ಶಿಕ್ಷಣ, ಮುಂದೆ ಸಿಂಧ್‌ ಪ್ರಾಂತ್ಯದ ಹೈದರಾಬಾದ್‌ನ ಡಿ.ಜಿ.ನ್ಯಾಷನಲ್‌ ಕಾಲೇಜಿನಲ್ಲಿ ಪದವಿ, ಬಳಿಕ ಬಾಂಬೆಯ ಸರ್ಕಾರಿ ಕಾಲೇಜಿನಲ್ಲಿ ಕಾನೂನು ಶಿಕ್ಷಣ ಪಡೆದರು. 1947ರಲ್ಲಿ ಆರ್‌ಎಸ್‌ಎಸ್ ಸೇರಿದ ಅವರು, ರಾಜಸ್ಥಾನದಲ್ಲಿ ಸಂಘದ ಉಸ್ತುವಾರಿ ವಹಿಸಿಕೊಂಡಿದ್ದರು.

ಅವರ ಸೇವೆಗಾಗಿ ಈ ಬಾರಿಯ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಭಾರತ ರತ್ನ’ ನೀಡಿ ಗೌರವಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT