ಗುರುವಾರ, 4 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹೊಸ ಕ್ರಿಮಿನಲ್ ಕಾನೂನು | ದೆಹಲಿಯ ಪೊಲೀಸ್‌ ಠಾಣೆಗಳಲ್ಲಿ ಜಾಗೃತಿ ಸಭೆ ಆಯೋಜನೆ

Published 2 ಜುಲೈ 2024, 2:45 IST
Last Updated 2 ಜುಲೈ 2024, 2:45 IST
ಅಕ್ಷರ ಗಾತ್ರ

ನವದೆಹಲಿ: ಮೂರು ಹೊಸ ಕ್ರಿಮಿನಲ್ ಕಾನೂನುಗಳು ಜಾರಿಗೆ ಬರುತ್ತಿದ್ದಂತೆ ದೆಹಲಿ ಪೊಲೀಸರು ರಾಷ್ಟ್ರ ರಾಜಧಾನಿಯಾದ್ಯಂತ 100ಕ್ಕೂ ಹೆಚ್ಚು ಪೊಲೀಸ್ ಠಾಣೆಗಳಲ್ಲಿ ಸಾರ್ವಜನಿಕರಿಗಾಗಿ ಜಾಗೃತಿ ಸಭೆಗಳನ್ನು ಆಯೋಜಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೇಶದ ಕ್ರಿಮಿನಲ್‌ ನ್ಯಾಯ ವ್ಯವಸ್ಥೆಯಲ್ಲಿ ವ್ಯಾಪಕ ಬದಲಾವಣೆ ತರುವ ಹೊಸ ಮೂರು ಕ್ರಿಮಿನಲ್‌ ಅಪರಾಧ ಕಾನೂನುಗಳು ಸೋಮವಾರದಿಂದಲೇ ಜಾರಿಗೆ ಬಂದಿವೆ.

ಭಾರತೀಯ ನ್ಯಾಯ ಸಂಹಿತೆ 2023, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ 2023 ಹೊಸದಾಗಿ ಅನುಷ್ಠಾನಗೊಂಡಿರುವ ಕಾಯ್ದೆಗಳಾಗಿವೆ.

ದೆಹಲಿಯ ನಂಗ್ಲೋಯ್, ರಂಹೋಲಾ, ನಿಹಾಲ್ ವಿಹಾರ್, ಪಶ್ಚಿಮ ವಿಹಾರ್ (ಪೂರ್ವ), ಪಶ್ಚಿಮ ವಿಹಾರ್ (ಪಶ್ಚಿಮ), ಸುಲ್ತಾನ್ ಪುರಿ, ರಾಜ್ ಪಾರ್ಕ್, ಮಂಗೋಲ್ ಪುರಿ, ರಾಣಿ ಬಾಗ್ ಸೇರಿದಂತೆ 100ಕ್ಕೂ ಹೆಚ್ಚು ಪೊಲೀಸ್ ಠಾಣೆಗಳಲ್ಲಿ ಜಾಗೃತಿ ಸಭೆ ಆಯೋಜಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಕಾನೂನುಗಳ ಬದಲಾವಣೆ ಮತ್ತು ಮಾನವ ಹಕ್ಕುಗಳ ಬಗ್ಗೆ ಪ್ರತಿಯೊಬ್ಬ ನಾಗರಿಕರಿಗೆ ಮಾಹಿತಿ ನೀಡುವುದು ಅತ್ಯಗತ್ಯ. ಇದರಿಂದ ನ್ಯಾಯ ವ್ಯವಸ್ಥೆಯು ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ’ ಎಂದು ಉಪ ಪೊಲೀಸ್ ಆಯುಕ್ತ ಜಿಮ್ಮಿ ಚಿರಂ ಹೇಳಿದ್ದಾರೆ.

‘ಹೊಸ ಕಾನೂನುಗಳ ಅನುಷ್ಠಾನದ ಬಗ್ಗೆ ಪೂರ್ವಭಾವಿಯಾಗಿ ಪೊಲೀಸ್ ಸಿಬ್ಬಂದಿಗೆ ಮೊಬೈಲ್ ಅಪ್ಲಿಕೇಶನ್ ಮೂಲಕ ಸಮಗ್ರ ತರಬೇತಿಯನ್ನು ನೀಡಲಾಗಿದೆ. ಇದರಿಂದಾಗಿ ಹೊಸ ಕಾನೂನಿನಡಿಯಲ್ಲಿ ಎಫ್‌ಐಆರ್‌ ದಾಖಲಿಸಲು ಯಾವುದೇ ಗೊಂದಲವಾಗಿಲ್ಲ’ ಎಂದು ಅಧಿಕಾರಿಯೊಬ್ಬರು ‘ಪಿಟಿಐ’ಗೆ ತಿಳಿಸಿದ್ದಾರೆ.

ಹೊಸ ಕಾನೂನುಗಳ ಬಗ್ಗೆ ಜನರಿಗೆ ಅರಿವು ಮೂಡಿಸಲು ಜಾಗೃತಿ ಸಮಾವೇಶವನ್ನು ಆಯೋಜಿಸಲಾಗಿದ್ದು, ನಾನು ಮುಂಡ್ಕಾ ಪೊಲೀಸ್ ಠಾಣೆಗೆ ಭೇಟಿ ನೀಡಿ ಹೊಸ ಕಾನೂನುಗಳ ಬಗ್ಗೆ ಮಾಹಿತಿ ಪಡೆದಿದ್ದೇನೆ ಎಂದು ನಂಗ್ಲೋಯಿ ನಿವಾಸಿ ಕಮಲೇಶ್ ಕುಮಾರ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT