ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಾಂಗ್ಲಾದೇಶ ಹಿಂಸಾಚಾರ: 4,500 ಭಾರತೀಯ ವಿದ್ಯಾರ್ಥಿಗಳು ಸ್ವದೇಶಕ್ಕೆ ವಾಪಸ್

Published 22 ಜುಲೈ 2024, 3:14 IST
Last Updated 22 ಜುಲೈ 2024, 3:14 IST
ಅಕ್ಷರ ಗಾತ್ರ

ನವದೆಹಲಿ: ಹಿಂಸಾಚಾರ ಪೀಡಿತ ಬಾಂಗ್ಲಾದೇಶದಿಂದ 4,500ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಸ್ವದೇಶಕ್ಕೆ ಮರಳಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (ಎಂಇಎ) ಭಾನುವಾರ ತಿಳಿಸಿದೆ.

ನೇಪಾಳದಿಂದ 500, ಭೂತಾನ್‌ನಿಂದ 38 ಮತ್ತು ಮಾಲ್ಡೀವ್ಸ್‌ನಿಂದ ಒಬ್ಬರು ಭಾರತಕ್ಕೆ ಆಗಮಿಸಿದ್ದಾರೆ ಎಂದು ಎಂಇಎ ತಿಳಿಸಿದೆ. ಭಾರತೀಯ ಪ್ರಜೆಗಳ ಸುರಕ್ಷತೆ ಮತ್ತು ಭದ್ರತೆಗಾಗಿ ಬಾಂಗ್ಲಾದೇಶದಲ್ಲಿರುವ ಭಾರತೀಯ ರಾಯಭಾರ ಕಚೇರಿಗಳು ಸ್ಥಳೀಯ ಅಧಿಕಾರಿಗಳೊಂದಿಗೆ ನಿಯಮಿತವಾಗಿ ಸಂಪರ್ಕದಲ್ಲಿವೆ ಎಂದು ಅದು ಹೇಳಿದೆ.

'ಈವರೆಗೆ 4,500ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಸ್ವದೇಶಕ್ಕೆ ಮರಳಿದ್ದಾರೆ. ಭಾರತೀಯ ಪ್ರಜೆಗಳ ಸುರಕ್ಷಿತ ಪ್ರಯಾಣಕ್ಕಾಗಿ ರಾಯಭಾರ ಕಚೇರಿ ಭದ್ರತಾ ಬೆಂಗಾವಲು ವ್ಯವಸ್ಥೆಯನ್ನೂ ಮಾಡುತ್ತಿದೆ' ಎಂದು ಎಂಇಎ ಹೇಳಿದೆ.

ಢಾಕಾದಲ್ಲಿರುವ ಭಾರತೀಯ ಹೈಕಮಿಷನ್ ಮತ್ತು ಚಿತ್ತಗಾಂಗ್, ರಾಜ್‌ಶಾಹಿ, ಸಿಲ್ಹೆಟ್ ಮತ್ತು ಖುಲ್ನಾದಲ್ಲಿನ ಸಹಾಯಕ ಹೈಕಮಿಷನ್‌ಗಳು ಭಾರತೀಯ ಪ್ರಜೆಗಳನ್ನು ವಾಪಸ್‌ ಕಳುಹಿಸಲು ಸಹಾಯ ಮಾಡುತ್ತಿವೆ. 'ನಮ್ಮ ನಾಗರಿಕರಿಗೆ ಸುಗಮ ಮಾರ್ಗ ಕಲ್ಪಿಸಲು ಎಂಇಎ ನಾಗರಿಕ ವಿಮಾನಯಾನ, ವಲಸೆ, ಭೂ, ಬಂದರುಗಳು ಮತ್ತು ಬಿಎಸ್‌ಎಫ್‌ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುತ್ತಿದೆ' ಎಂದೂ ಅದು ಹೇಳಿದೆ.

ಬಾಂಗ್ಲಾದೇಶದ ವಿವಿಧ ವಿಶ್ವವಿದ್ಯಾನಿಲಯಗಳಲ್ಲಿ ಉಳಿದಿರುವ ವಿದ್ಯಾರ್ಥಿಗಳೊಂದಿಗೆ ಭಾರತೀಯ ರಾಯಭಾರ ಕಚೇರಿಗಳು ನಿಯಮಿತವಾಗಿ ಸಂಪರ್ಕದಲ್ಲಿವೆ. ಅವರಿಗೆ ಅಗತ್ಯ ನೆರವು ನೀಡುತ್ತಿವೆ ಎಂದು ಸಚಿವಾಲಯ ಹೇಳಿದೆ.‌‌‌

8,500 ವಿದ್ಯಾರ್ಥಿಗಳು ಸೇರಿದಂತೆ ಸುಮಾರು 15,000 ಭಾರತೀಯ ಪ್ರಜೆಗಳು ಬಾಂಗ್ಲಾದೇಶದಲ್ಲಿದ್ದಾರೆ ಎಂದು ಎಂಇಎ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

ಸರ್ಕಾರಿ ನೌಕರಿಗಳಲ್ಲಿ ಮೀಸಲಾತಿ ವಿರೋಧಿಸಿ ಶೇಖ್ ಹಸೀನಾ ನೇತೃತ್ವದ ಸರ್ಕಾರದ ವಿರುದ್ಧ ಆರಂಭಗೊಂಡಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಸಂಘರ್ಷದಲ್ಲಿ 100ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಪ್ರತಿಭಟನೆ ಹಿನ್ನೆಲೆಯಲ್ಲಿ ರಾಷ್ಟ್ರವ್ಯಾಪಿ ಕರ್ಫ್ಯೂ ಜಾರಿಯಲ್ಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT