ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವಲಸೆ ಕಾರ್ಮಿಕರಿಗೆ ಪಡಿತರ ಚೀಟಿ ವಿಳಂಬ: ಕೇಂದ್ರ, ರಾಜ್ಯಗಳಿಗೆ ಕೋರ್ಟ್ ತರಾಟೆ

Published : 5 ಅಕ್ಟೋಬರ್ 2024, 12:27 IST
Last Updated : 5 ಅಕ್ಟೋಬರ್ 2024, 12:27 IST
ಫಾಲೋ ಮಾಡಿ
Comments

ನವದೆಹಲಿ: ವಲಸೆ ಕಾರ್ಮಿಕರಿಗೆ ಪಡಿತರ ಚೀಟಿ ನೀಡುವಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ವಿಳಂಬ ಧೋರಣೆ ಅನುಸರಿಸುತ್ತಿರುವುದಕ್ಕೆ ಸುಪ್ರೀಂ ಕೋರ್ಟ್‌ ತೀವ್ರ ಕಳವಳ ವ್ಯಕ್ತಪಡಿಸಿದ್ದು, ‘ನಾವು ತಾಳ್ಮೆ ಕಳೆದುಕೊಂಡಿದ್ದೇವೆ' ಎಂದು ಹೇಳಿದೆ.

ನ್ಯಾಯಮೂರ್ತಿಗಳಾದ ಸುಧಾಂಶು ಧೂಲಿಯಾ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ಅವರ ಪೀಠವು, ಈ ನಿಟ್ಟಿನಲ್ಲಿ ನವೆಂಬರ್ 19ರೊಳಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಸರ್ಕಾರ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೊನೆಯ ಅವಕಾಶವನ್ನು ನೀಡಿತು.

‘ಈ ವಿಚಾರದಲ್ಲಿ ನಾವು ತಾಳ್ಮೆ ಕಳೆದುಕೊಂಡಿದ್ದು, ಇನ್ನು ಮುಂದೆ ಸಹನೆಯಿಂದ ಇರಲು ಸಾಧ್ಯವಿಲ್ಲ ಎಂಬುದನ್ನು ಸ್ಪಷ್ಟವಾಗಿ ಹೇಳುತ್ತಿದ್ದೇವೆ. ನಮ್ಮ ಆದೇಶದ ಪಾಲನೆಗೆ ನಿಮಗೆ ಕೊನೆಯ ಅವಕಾಶ ನೀಡುತ್ತಿದ್ದೇವೆ’ ಎಂದು ಪೀಠ ಸ್ಪಷ್ಟಪಡಿಸಿತು.

ಕೇಂದ್ರ ಸರ್ಕಾರದ ಪರ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಐಶ್ವರ್ಯಾ ಭಾಟಿ, ‘ಅಂತ್ಯೋದಯ ಯೋಜನೆಯಡಿ ಪ್ರತಿ ಆದ್ಯತಾ ಕುಟುಂಬಕ್ಕೆ ಒಂದು ಪಡಿತರ ಚೀಟಿ ಮಾತ್ರ ನೀಡಲಾಗುತ್ತದೆ’ ಎಂದು ತಿಳಿಸಿದರು.

ಕೋವಿಡ್ ಸಮಯದಲ್ಲಿ ವಲಸೆ ಕಾರ್ಮಿಕರು ಅನುಭವಿಸಿದ ಸಂಕಷ್ಟವನ್ನು ಮನಗಂಡು 2020ರಲ್ಲಿ ತಾನು ದಾಖಲಿಸಿಕೊಂಡ ಸ್ವಯಂ ಪ್ರೇರಿತ ದೂರಿನ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ನಡೆಸುತ್ತಿದೆ.

2021ರ ತನ್ನ ತೀರ್ಪಿನ ಪಾಲನೆಗೆ ಸಂಬಂಧಿಸಿದ ಅಫಿಡವಿಟ್‌ ಸಲ್ಲಿಸುವಂತೆ ಸುಪ್ರೀಂ ಕೋರ್ಟ್‌, ಕೇಂದ್ರ ಸರ್ಕಾರವನ್ನು ಈ ಹಿಂದೆ ಕೇಳಿಕೊಂಡಿತ್ತು. 

‘ಇ–ಶ್ರಮ್‌’ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಂಡಿರುವ ಎಲ್ಲ ವಲಸೆ ಕಾರ್ಮಿಕರಿಗೆ ಪಡಿತರ ಚೀಟಿ ವಿತರಿಸುವುದು ಸೇರಿದಂತೆ ಕೆಲವೊಂದು ಕಲ್ಯಾಣ ಕಾರ್ಯಕ್ರಮಗಳನ್ನು ತೆಗೆದುಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸುಪ್ರೀಂ ಕೋರ್ಟ್‌ ನಿರ್ದೇಶನಗಳನ್ನು ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT